SUDDIKSHANA NEWS
ದಾವಣಗೆರೆ: ವೃತ್ತಿ ನೈಪುಣ್ಯತೆ ಸಾಧಿಸಲು ತರಬೇತಿಗಳು ಪ್ರತಿಯೊಬ್ಬರಿಗೂ ಅವಶ್ಯಕ ಎಂದು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಸಿರಿಗೆರೆ ರಾಜಣ್ಣ ಹೇಳಿದರು.
ಇಂದು ನಗರದ ಜನತಾಬಜಾರ್ ಸಭಾಂಗಣದಲ್ಲಿ ಬೆಂಗಳೂರಿನ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ , ದಾವಣಗೆರೆ ಜಿಲ್ಲಾ ಸಹಕಾರ ಇಲಾಖೆ, ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆ, ಜಿಲ್ಲಾ ಸಹಕಾರ ಒಕ್ಕೂಟ ಹಾಗೂ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ದಾವಣಗೆರೆ- ಚನ್ನಗಿರಿ ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಒಂದು ದಿನದ ವಿಶೇಷ ತರಬೇತಿ
ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯಾವುದೇ ಸಹಕಾರ ಸಂಘ ಉಳಿದು ಆರ್ಥಿಕವಾಗಿ ಸದೃಢವಾಗಬೇಕಾದರೆ ಸಿಬ್ಬಂದಿ ನಿಯಮಗಳನ್ನು ಸರಿಯಾಗಿ ತಿಳಿದುಕೊಂಡಿರಬೇಕು. ಈ ರೀತಿಯ ತರಬೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಹೆಚ್ಚಿನ ಜ್ಞಾನ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ಹಾಲೇಶಪ್ಪ ಮಾತನಾಡಿ, ಈ ರೀತಿಯ ತರಬೇತಿಗಳ ಸದುಪಯೋಗಪಡೆದುಕೊಂಡರೆ ಸಂಸ್ಥೆಗಳನ್ನು ಸಮರ್ಥವಾಗಿ ನಿಭಾಯಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕ ಎಸ್.ಬಿ.ಶಿವಕುಮಾರ್ ಮಾತನಾಡಿ, ಕಳೆದ ದಶಕಗಳಲ್ಲಿ ಇದ್ದ ವ್ಯವಸ್ಥೆ ಈಗ ಇಲ್ಲ. ಕಾಲ ಕಾಲಕ್ಕೆ ಬದಲಾದ ಕಾನೂನುಗಳನ್ನು ಚೆನ್ನಾಗಿ ಅರ್ಥ ಮಾಡಿಕೊಂಡು ಜನರಿಗೆ ಸಹಕಾರ ನೀಡುವುದನ್ನು ಸಿಬ್ಬಂದಿಗಳು ಅರಿತುಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಸಹಕಾರ ಲೆಕ್ಕ ಪರಿಶೋಧನಾ ಇಲಾಖೆ ಉಪನಿರ್ದೇಶಕ ಕೆ.ಮಹೇಶ್ವರಪ್ಪ ಲೆಕ್ಕಪತ್ರಗಳ ಸಲ್ಲಿಕೆ ಕುರಿತು ಮಾಹಿತಿ ನೀಡಿದರು. ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಬಿ.ಶೇಖರಪ್ಪ, ಜಿಲ್ಲಾ ಸಹಕಾರ ಒಕ್ಕೂಟದ ಉಪಾಧ್ಯಕ್ಷ ಬೇತೂರು ಟಿ.ರಾಜಣ್ಣ, ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆಯ ಉಪನಿರ್ದೇಶಕ ಕೆ.ಮಹೇಶ್ವರಪ್ಪ, ಡಿಸಿಸಿ ಬ್ಯಾಂಕ್ ಸಿಇಒ ತಾರ್ಯನಾಯ್ಕ, ಸಹಕಾರ ಅಭಿವೃದ್ಧಿ ಅಧಿಕಾರಿಗಳಾದ ಎಲ್.ಸತೀಶ್ ನಾಯ್ಕ, ವಿ.ವಿಜಯ, ಜಿಲ್ಲಾ ಸಹಕಾರ ಒಕ್ಕೂಟದ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಚ್.ಸಂತೋಷ್ ಕುಮಾರ್ ಹಾಜರಿದ್ದರು.