SUDDIKSHANA KANNADA NEWS/ DAVANAGERE/ DATE-06-05-2025
ದಾವಣಗೆರೆ: ರಾಜ್ಯದ ತೋಟಗಾರಿಕಾ ಕ್ಷೇತ್ರ ಹಾಗೂ ವಲಯಗಳ ಅಭಿವೃದ್ಧಿಗೆ ಪಣತೊಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಅವರು ತಿಳಿಸಿದರು.
ನಗರದ ಗೃಹ ಕಚೇರಿಯಲ್ಲಿ ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ವೇಳೆ ಈ ಮಾಹಿತಿ ನೀಡಿದರು.
ಸಚಿವ ಸಂಪುಟದ ನಿರ್ಣಯಗಳ ಮೇಲೆ ತೋಟಗಾರಿಕಾ ವಲಯಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ರೂಪುಗೊಳಿಸಲಾಗಿದೆ ಎಂದು ತಿಳಿಸಿದರು.
ಆರ್ ಐ ಡಿಎಫ್ 29ನೇ ಟ್ರಾಂಚೆರಡಿ ಹಾವೇರಿ, ಕೋಲಾರ, ಮಂಡ್ಯ ಶಿವಮೊಗ್ಗ, ವಿಜಯಪುರ ಮತ್ತು ಹಾಸನ 6 ಜಿಲ್ಲೆಗಳಲ್ಲಿ ತೋಟಗಾರಿಕೆ ಬೆಳೆಗಾರರಿಗೆ ಅನುಕೂಲವಾಗುವಂತೆ 14000 ಟನ್ ಸಾಮರ್ಥ್ಯದ 6 ಶೀತಲ ಘಟಕಗಳ ನಿರ್ಮಾಣವನ್ನು ರೂ.65.97 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದ್ದು, ಆರ್ ಐ ಡಿಎಫ್ 29ನೇ ಟ್ರಾಂಚೆರಡಿ ಚಿತ್ರದುರ್ಗ, ರಾಯಚೂರು ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ 3 ತೋಟಗಾರಿಕೆ ತರಬೇತಿ ಕೇಂದ್ರಗಳು ಮತ್ತು ಬೆಳಗಾವಿ ಜಿಲ್ಲೆಯ ಅರಬಾವಿಯಲ್ಲಿ 1 ವಿದ್ಯಾರ್ಥಿನಿಯರ ನಿಲಯ ನಿರ್ಮಾಣಕ್ಕೆ ಒಟ್ಟು ರೂ.35.14 ಕೋಟಿ ವೆಚ್ಚದಲ್ಲಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು.
ವಿಜಯಪುರ ಜಿಲ್ಲೆಯ ಅಲಮೇಲದಲ್ಲಿ ತೋಟಗಾರಿಕೆ ಕಾಲೇಜು ನಿರ್ಮಾಣಕ್ಕೆ ರೂ.39.95 ಕೋಟಿಗಳ ಕಾಮಗಾರಿಗೆ ಅನುಮೋದನೆ ನೀಡಲಾಗಿದ್ದು, 25 ವಿದ್ಯಾರ್ಥಿಗಳಿಗೆ ಬಾಗಲಕೋಟಿ ಕ್ಯಾಂಪಸ್ನಲ್ಲಿ ಪ್ರವೇಶ ನೀಡಲಾಗಿದೆ. ತೋಟಗಾರಿಕೆ ಬೆಳೆಗಳಲ್ಲಿ ಹೆಚ್ಚು ಇಂಗಾಲವನ್ನು ಹಿಡಿದಿಟ್ಟುಕೊಳ್ಳುವ ಬೆಳೆಗಳನ್ನು ಗುರುತಿಸಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಾರ್ಬನ್ ಕ್ರೆಡಿಟ್ ರೂಪದಲ್ಲಿ ಮಾರಾಟ ಮಾಡುವ ಮೂಲಕ ರೈತರು ಹೆಚ್ಚಿನ ಆದಾಯ ಗಳಿಸಲು 3 ಕಾರ್ಬನ್ ಕ್ರೆಡಿಟ್ ಫ್ರೇಮ್ ವರ್ಕ್ ಯೋಜನೆಯನ್ನು ತೋಟಗಾರಿಕೆ ಇಲಾಖೆಯ ಪ್ರಥಮ ಬಾರಿಗೆ ರಾಜ್ಯದ ರೈತರಿಗೆ ಪರಿಚಯಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಪುಷ್ಪ ಕೃಷಿಯನ್ನು ಪ್ರೋತ್ಸಾಹಿಸಲು ಅಂತರಾಷ್ಟ್ರೀಯ ಪುಷ್ಪ ಹರಾಜು ಬೆಂಗಳೂರು ಸಂಸ್ಥೆಗೆ ಹೆಬ್ಬಾಳದಲ್ಲಿ ಬಾಡಿಗೆ ರಹಿತ ಆಧಾರದ ಮೇಲೆ ಜಮೀನು ನೀಡಲಾಗಿದೆ. ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ನಂದಿ ಬೆಟ್ಟದಲ್ಲಿ ರೋಪ್ವೇ ನಿರ್ಮಿಸುವ ಸಲುವಾಗಿ ತೋಟಗಾರಿಕೆ ಇಲಾಖೆಯ ಜಮೀನನ್ನು ಮಂಜೂರು ಮಾಡಲಾಗಿದೆ ಎಂದು ಮಾಹಿತಿಯನ್ನು ನೀಡಿದರು.