SUDDIKSHANA KANNADA NEWS/ DAVANAGERE/ DATE:16-05-2023
ದಾವಣಗೆರೆ (DAVANAGERE): ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಮಳೆಯ ಸಮಯದಲ್ಲಿ ಪ್ರಾಕೃತಿಕ ವಿಕೋಪಗಳಿಂದ ಮಾನವ ಜೀವ ಹಾನಿ, ಜಾನುವಾರು ಹಾಗೂ ಆಸ್ತಿ ಹಾನಿಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ಕೈಗೂಳ್ಳಬೇಕು. ವಿಕೋಪ ಸಂಭವಿಸಿದ ಸಮಯದಲ್ಲಿ ಸಾರ್ವಜನಿಕರ ರಕ್ಷಣೆಗೆ ತುರ್ತಾಗಿ ಸ್ಪಂದಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಸನ್ನದ್ಧವಾಗಿರಬೇಕು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು.
ಮುಂಗಾರು ಮಳೆ ಮುಂಜಾಗ್ರತೆ ಕ್ರಮಗಳ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ವರ್ಷ ಹೆಚ್ಚು ಮಳೆ ಸುರಿದ ಸಂದರ್ಭದಲ್ಲಿ ಉಂಟಾದ ತೊಂದರೆಗಳು, ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಸಾರ್ವಜನಿಕರು ಕಷ್ಟ ಅನುಭವಿಸಿರುವ ಪ್ರಕರಣಗಳನ್ನು ಗಮನದಲ್ಲಿಸಿರಿಕೊಂಡು ಅಂತಹ ಪ್ರದೇಶ ಗುರುತಿಸಬೇಕು. ಈ ಬಾರಿಯ ಮಳೆಗಾಲದಲ್ಲಿ ಸಾರ್ವಜನಿಕರು ಅಂತಹ ತೊಂದರೆಗಳನ್ನು ಅನುಭವಿಸದಂತೆ ಅಗತ್ಯ ಎಚ್ಚರಿಕೆ ಮುನ್ನಚ್ಚರಿಕೆ ವಹಿಸಬೇಕು ಎಂದುಸೂಚಿಸಿದರು.
ಜಿಲ್ಲೆಯ ಬಹುತೇಕ ಗ್ರಾಮಗಳ ಮಧ್ಯ ಭಾಗದಲ್ಲಿ ಕೆರೆಕಟ್ಟೆಗಳು, ಹೊಂಡ, ಕಾಲುವೆಗಳು ನಿರ್ಮಾಣವಾಗಿರುವುದರಿಂದ ರಾತ್ರೋ ರಾತ್ರಿ ಹೆಚ್ಚು ಮಳೆಯಾದರೆ ಮನೆಗಳಿಗೆ ನೀರು ನುಗ್ಗಿ ಹೆಚ್ಚು ತೊಂದರೆ ಉಂಟಾಗುತ್ತದೆ, ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಮುಂಗಾರು ಪ್ರರಂಭವಾಗುವುದಕ್ಕಿಂತ ಮುಂಚೆ ಪರಿಶೀಲಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಇಟ್ನಾಳ್, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.