SUDDIKSHANA KANNADA NEWS/ DAVANAGERE/ DATE:29-08-2024
ದಾವಣಗೆರೆ: ನಗರದಲ್ಲಿ ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡುವುದನ್ನು ತಡೆಯಲು ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಅವರ ಮಾರ್ಗದರ್ಶನ ಮತ್ತು ಸೂಚನೆಯಂತೆ ಕಾರ್ಯಾಚರಣೆ ಚುರುಕುಗೊಳಿಸಿದ್ದು, 17 ವರ್ಷದ ಅಪ್ರಾಪ್ತ ಬಾಲಕ ಬೈಕ್ ಚಾಲನೆ ವೇಳೆ ಸಿಕ್ಕಿಬಿದ್ದಿದ್ದಾನೆ. ಈ ಹಿನ್ನೆಲೆಯಲ್ಲಿ ಪೋಷಕರಿಗೆ 25 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.
ನೂತನ ಕಾಲೇಜು ರಸ್ತೆಯಲ್ಲಿ 17 ವರ್ಷದ ಅಪ್ರಾಪ್ತ ಬಾಲಕನು ಬೈಕ್ ಚಾಲನೆ ಮಾಡಿಕೊಂಡು ಬರುತ್ತಿದ್ದ, ಬಾಲಕನನ್ನು ತಡೆದು ಪರಿಶಿಲಿಸಲಾಗಿ ಬಾಲಕ ಅಪ್ರಾಪ್ತನಾಗಿದ್ದು, ಅಪ್ರಾಪ್ತನಿಗೆ ಸಾರ್ವಜನಿಕ ರಸ್ತೆ ಮೇಲೆ ಚಲಾಯಿಸಲು ಬೈಕ್ ಅನ್ನು ನೀಡಿದ್ದಕ್ಕೆ ಬೈಕ್ ಜಫ್ತಿ ಮಾಡಲಾಗಿತ್ತು. ದಾವಣಗೆರೆ ದಕ್ಷಿಣ ಸಂಚಾರ ಠಾಣೆಯಲ್ಲಿ ಇಂಡಿಯನ್ ಮೋಟಾರ್ ವೆಹಿಕಲ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ದಾವಣಗೆರೆ ನಗರ ಪೊಲೀಸ್ ಉಪಾಧೀಕ್ಷಕ ಮಲ್ಲೇಶ್ ದೊಡ್ಮನಿ ಅವರ ಮಾರ್ಗದರ್ಶನದಲ್ಲಿ ದಕ್ಷಿಣ ಸಂಚಾರ ಠಾಣೆ ಪಿಎಸ್ಐ ನಿರ್ಮಲ ಡಿ.ಹೆಚ್ ರವರ ನೇತೃತ್ವದಲ್ಲಿ ಸಿಬ್ಬಂದಿಗಳನ್ನೊಳಗೊಂಡ ತಂಡವು ವಿಶೇಷ ಕಾರ್ಯಾಚರಣೆ ನಡೆಸಿದ್ದು, ನ್ಯಾಯಾಲಯಕ್ಕೆ ಬೈಕ್ ಮಾಲೀಕ ಗೋರೂರು ಬಾಲಕೃಷ್ಣರ ಮೇಲೆ ದೋಷರೋಪಣ ಪಟ್ಟಿ ಸಲ್ಲಿಸಿದ್ರು.
ನ್ಯಾಯಾಲಯವು ಆರೋಪಿತ ಬೈಕ್ ಮಾಲೀಕ ತನ್ನ ಬೈಕನ್ನು ಅಪ್ರಾಪ್ತ ವಯಸ್ಕನಾದ ತನ್ನ ಮಗನಿಗೆ ಚಾಲನೆ ಮಾಡಲು ಕೊಟ್ಟಿದ್ದಕ್ಕೆ ಬೈಕ್ ಮಾಲೀಕನಿಗೆ ರೂ. 25,000 ದಂಡ ವಿಧಿಸಿದೆ. ಆದ್ದರಿಂದ ಅಪ್ರಾಪ್ತ ವಯಸ್ಸಿನ ಮಕ್ಕಳ ಕೈಗೆ ವಾಹನ ಚಾಲನೆ ಮಾಡಲು ಕೊಡುವ ಪೋಷಕರು ಹಾಗೂ ವಾಹನ ಮಾಲೀಕರಿಗೆ ದಾವಣಗೆರೆ ಸಂಚಾರ ಪೊಲೀಸರು ಬಿಸಿ ಮುಟ್ಟಿಸಿ ಅರಿವು ಮೂಡಿಸಿದ್ದಾರೆ.
ಇದೇ ರೀತಿ ಸಂಚಾರ ನಿಯಮ ಉಲ್ಲಂಘನೆ ಮಾಡುವ ಸವಾರರ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ ಕ್ರಮ ಜರುಗಿಸಲಾಗುವುದು. ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಅವರು ಸೂಚನೆ ನೀಡಿದ್ದಾರೆ.