Home ದಾವಣಗೆರೆ ಭದ್ರಾ ಡ್ಯಾಂನಿಂದ ಇಂದಿನಿಂದಲೇ ಬೇಕು ನೀರು, ನಾಲೆ – ದಂಡೆಗಳ ದುರಸ್ತಿಗೆ ಬೇಕು ಮತ್ತಷ್ಟು ದುಡ್ಡು: ಮತ್ತೇನೆಲ್ಲಾ ಚರ್ಚೆಯಾಯ್ತು ಸಿಇಸಿ ಸಭೆಯಲ್ಲಿ?
ದಾವಣಗೆರೆಬೆಂಗಳೂರು

ಭದ್ರಾ ಡ್ಯಾಂನಿಂದ ಇಂದಿನಿಂದಲೇ ಬೇಕು ನೀರು, ನಾಲೆ – ದಂಡೆಗಳ ದುರಸ್ತಿಗೆ ಬೇಕು ಮತ್ತಷ್ಟು ದುಡ್ಡು: ಮತ್ತೇನೆಲ್ಲಾ ಚರ್ಚೆಯಾಯ್ತು ಸಿಇಸಿ ಸಭೆಯಲ್ಲಿ?

Share
ಭದ್ರಾ
Share

ದಾವಣಗೆರೆ:ಭದ್ರಾ ಜಲಾಶಯದಿಂದ ಇಂದಿನಿಂದಲೇ ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ನೀರು ಹರಿಸಬೇಕು ಎಂಬುದೂ ಸೇರಿದಂತೆ ವಿವಿಧ ವಿಚಾರಗಳ ಕುರಿತಂತೆ ಇಂದು ಶಿವಮೊಗ್ಗ ತಾಲೂಕಿನ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2025-26ನೇ ಸಾಲಿನ ಬೇಸಿಗೆ ಬೆಳೆಗೆ ನೀರು ಹರಿಸುವ ಕುರಿತಂತೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಿಇಸಿ ಸಭೆಯಲ್ಲಿ ಚರ್ಚಿಸಲಾಯಿತು.

ರೈತ ಮುಖಂಡ ಬಸವರಾಜಪ್ಪ ಅವರು ಮಾತನಾಡಿ, ಜಲಾಶಯದ ಎಡ ಮತ್ತು ಬಲದಂಡೆ ನಾಲಾ ವ್ಯಾಪ್ತಿಯಲ್ಲಿನ ಸಾಗುವಳಿದಾರರಿಗೆ ಹಾಗೂ ಹೊಸದಾಗಿ ತೋಟ ಮಾಡಿರುವ ಬೆಳೆಗಾರರಿಗೆ ಇಂದಿನಿಂದಲೇ ನೀರಿನ ಅಗತ್ಯವಿದೆ. ವಿಳಂಬವಾದಲ್ಲಿ ಲಕ್ಷಾಂತರ ಅಡಿಕೆ ಗಿಡಗಳು ನಾಶವಾಗುವ ಸಂಭವವಿದೆ. ಇದನ್ನು ಗಮನದಲ್ಲಿಟ್ಟುಕೊಂಡು ನೀರಿನ ಹರಿವನ್ನು ನಿಯಂತ್ರಿಸಿ, ನೀರನ್ನು ಒದಗಿಸಬಹುದಾದ ಸಾಧ್ಯತೆಗಳ ಬಗ್ಗೆ ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿಯನ್ನೂ ಓದಿ: ಜನವರಿ 4ಕ್ಕೆ ದಾವಣಗೆರೆ ಹೈಸ್ಕೂಲ್ ಮೈದಾನದಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್, ಮಲೈಕಾ, ಜೈದ್ ಖಾನ್ ಮೇನಿಯಾ: ಚಂದನ್ ಶೆಟ್ಟಿಯಿಂದ ಸಂಗೀತ ರಸದೌತಣ

ಮುಂದಿನ ಬೇಸಿಗೆ ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಯಾವುದೇ ಅಡಚಣೆ ಆಗದಂತೆ ಅವಶ್ಯಕವಾಗಿರುವ ನೀರನ್ನು ಒದಗಿಸಲು ಮತ್ತು ನಗರ ಪಟ್ಟಣ ಪ್ರದೇಶಗಳಿಗೆ ಕುಡಿಯುವ ನೀರನ್ನು ಪೂರೈಸುವುದನ್ನು ಗಮನದಲ್ಲಿಟ್ಟುಕೊಂಡು ನೀರನ್ನು ಬಿಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.

ಗೋಂದಿ ಭಾಗದ ಕಾಲುವೆಗಳು ಎತ್ತರದ ಪ್ರದೇಶದಲ್ಲಿವೆ ಅಲ್ಲದೆ ಆ ಭಾಗದ ಕೆರೆ-ಕಾಲುವೆಗಳಲ್ಲಿ ಹೂಳು ತುಂಬಿಕೊಂಡಿರುವುದರಿಂದ ನೀರಿನ ಹರಿವು ಸಮರ್ಪಕವಾಗಿಲ್ಲದ ಕಾರಣ ಅಚ್ಚುಕಟ್ಟುದಾರರಿಗೆ ನೀರು ತಲುಪದಿರುವ ಬಗ್ಗೆ ಆಕ್ಷೇಪಣೆಗಳಿರುವುದನ್ನು ಗಮನಿಸಲಾಗಿದೆ. ಅಲ್ಲಿನ ಬೆಳೆಗಾರರಿಗೆ ಅಗತ್ಯವಿರುವಷ್ಟು ಪ್ರಮಾಣದ ನೀರನ್ನು ಸಕಾಲದಲ್ಲಿ ಒದಗಿಸಲು ಭದ್ರಾ ಇಂಜಿನಿಯರ್ರವರು ಪರಿಶೀಲಿಸಿ ಕ್ರಮ ವಹಿಸಬೇಕು ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿನ ನಾಲೆಗಳ ದುರಸ್ತಿಗೆ ಈಗಾಗಲೇ ಸಾಕಷ್ಟು ಅನುದಾನ ಬಿಡುಗಡೆಗೊಳಿಸಿದೆ. ಇನ್ನಷ್ಟು ಅನುದಾನದ ಅಗತ್ಯವಿದ್ದು, ಸಂಬಂಧಿಸಿದ ಅಧಿಕಾರಿಗಳು ಕ್ರಿಯಾಯೋಜನೆಯನ್ನು ಸಿದ್ಧಪಡಿಸಿ, ಸರ್ಕಾರಕ್ಕೆ ಸಲ್ಲಿಸಿದಲ್ಲಿ ಅನುದಾನ ಬಿಡುಗಡೆಗೊಳಿಸಲು ಪ್ರಯತ್ನಿಸಲಾಗುವುದು ಎಂದರು.

ಹಲವು ದಶಕಗಳ ಹಿಂದೆ ನಿರ್ಮಿಸಲಾಗಿದ್ದ ಹಾಗೂ ಪ್ರಸ್ತುತ ಶಿಥಿಲಾವಸ್ತೆಯಲ್ಲಿರುವ ನಾಲೆ, ದಂಡೆಗಳ ದುರಸ್ತಿಗೆ ಅನುದಾನ ಬಿಡುಗಡೆಗೊಳಿಸಿ, ಕಾಮಗಾರಿ ಆರಂಭಿಸಿರುವುದು ರೈತರಲ್ಲಿ ಸಂತಸ ತಂದಿದೆ. ಅದಕ್ಕಾಗಿ ಸರ್ಕಾರಕ್ಕೆ ಧನ್ಯವಾದಗಳು ಎಂದು ರೈತರಾದ ಎ. ಬಿ. ಕರಿಬಸಪ್ಪ ತಿಳಿಸಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ|| ಅಂಶುಮಂತ್ಅವರು ಮಾತನಾಡಿ, ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗೊಳಪಡುವ ಸಮೀಪದ ಸಾಗುವಳಿದಾರರಿಗೆ ನೀರು ದೊರೆಯುತ್ತಿರುವಂತೆಯೇ ದೂರದ ರೈತರ ಒಣಭೂಮಿಗೆ ನೀರು ಹರಿಸಬೇಕಾಗಿರುವುದು ಪ್ರಾಧಿಕಾರದ ಹೊಣೆಯಾಗಿದೆ. ನೈಸರ್ಗಿಕವಾಗಿ ದೊರೆಯುತ್ತಿರುವ ಅಮೂಲ್ಯ ಜಲವನ್ನು ಮಿತವಾಗಿ ಬಳಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಮಾನವೀಯ ನೆಲೆಯಲ್ಲಿ ಎಲ್ಲ ರೈತರ ಹಿತಸುಖ ಕಾಯುವ ನಿಟ್ಟಿನಲ್ಲಿ ಚಿಂತಿಸಬೇಕು. ನೀರನ್ನು ಅಗತ್ಯಕ್ಕೆ ತಕ್ಕಂತೆ ಬಳಸಿಕೊಳ್ಳಬೇಕು. ವ್ಯರ್ಥವಾಗಿ ಹರಿದು ಹೋಗುವಂತಾಗಬಾರದು. ನೀರಿನ ಮಿತಬಳಕೆ ಬಗ್ಗೆ ಎಲ್ಲರಲ್ಲೂ ಜಾಗೃತಿ ಇರಬೇಕು. ಪ್ರಾಧಿಕಾರದ ನಿರ್ಣಯಗಳಿಗೆ ಎಲ್ಲರೂ ಬದ್ಧರಾಗಿರಬೇಕು ಎಂದರು.

ಸಭೆಯಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ, ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡರ, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಚಂದ್ರಭೂಪಾಲ, ಆರ್.ಪ್ರಸನ್ನಕುಮಾರ್, ಅಭಿಯಂತರರಾದ ರವಿಕುಮಾರ್, ರವಿಚಂದ್ರ ಸೇರಿದಂತೆ ದಾವಣಗೆರೆ, ಬಳ್ಳಾರಿ, ಶಿವಮೊಗ್ಗ ಜಿಲ್ಲೆಗಳ ನೀರಾವರಿ ಇಲಾಖೆಯ ಅಧಿಕಾರಿಗಳು, ರೈತ ಮುಖಂಡರು ಭಾಗವಹಿಸಿದ್ದರು.

Share

Leave a comment

Leave a Reply

Your email address will not be published. Required fields are marked *