ದಾವಣಗೆರೆ: ಜಿಲ್ಲೆಯಲ್ಲಿ ಸಂಭವಿಸುವ ರಸ್ತೆ ಅಪಘಾತಗಳಲ್ಲಿನ ಮರಣ ಪ್ರಮಾಣವನ್ನು ತಗ್ಗಿಸಲು ಮತ್ತು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಮತ್ತು ಅಪಘಾತವಾದಾಗ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿಗಳಲ್ಲಿ ವೈದ್ಯಕೀಯ ಸೌಲಭ್ಯವಿರುವ ಸುಸಜ್ಜಿತ ಅಸ್ಪತ್ರೆಗಳನ್ನು ಗುರುತಿಸಿ ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಜೀವ ಉಳಿಸುವ ಕೆಲಸವಾಗಬೇಕೆಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.
ಅವರು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ‘ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ’ ಸಭೆಯಲ್ಲಿ ಅವರು ಮಾತನಾಡಿದರು. ಅಪಘಾತವಾದಾಗ ಗೋಲ್ಡನ್ ಅವರ್ ಚಿಕಿತ್ಸೆಗೆ ಆದ್ಯತೆ ನೀಡಬೇಕು. ಅಪಘಾತ ಸಂಭವಿಸಿದ ಮೊದಲ ಒಂದು ಗಂಟೆ ಅತ್ಯಂತ ನಿರ್ಣಾಯಕ, ಗಾಯಾಳುಗಳನ್ನು ಕೂಡಲೇ ಹತ್ತಿರದ ಸುಸಜ್ಜಿತ ಆಸ್ಪತ್ರೆಗೆ ದಾಖಲಿಸಲು ಆಂಬ್ಯುಲೆನ್ಸ್ ಚಾಲಕರು ಮತ್ತು ಪೊಲೀಸರ ನಡುವೆ ಅತ್ಯಂತ ವೇಗದ ಸಮನ್ವಯ ಇರಬೇಕು ಎಂದರು.
ಹೆದ್ದಾರಿ ಟ್ರಾಮಾ ಸೆಂಟರ್:
ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾದವರಿಗೆ ತಕ್ಷಣದ ಚಿಕಿತ್ಸೆ ನೀಡಲು ಹತ್ತಿರದ ಆಸ್ಪತ್ರೆಗಳನ್ನು ಗುರುತಿಸಿ, ಅಲ್ಲಿ ತುರ್ತು ಘಟಕಗಳು ಸದಾ ಸನ್ನದ್ಧವಾಗಿರುವಂತೆ ನೋಡಿಕೊಳ್ಳಬೇಕು. ಯಾವುದೇ ರಸ್ತೆ ಅಪಘಾತವಾದಾಗ ಕೇಂದ್ರದ ನಗದು ರಹಿತ ಉಚಿತ ಚಿಕಿತ್ಸಾ ಸೌಲಭ್ಯವನ್ನು ಬಳಸಿಕೊಳ್ಳಲು ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿಗಳಲ್ಲಿ ಬರುವ ಆಸ್ಪತ್ರೆಗಳ ವಿವರ ಸಂಗ್ರಹಿಸಿ ಯಾವುದೇ ಅಪಘಾತವಾದಾಗ ಅಂಬುಲೆನ್ಸ್ ನೇರವಾಗಿ ಸಮೀಪದ ಸುಸಜ್ಜಿತವಾದ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು. ಯಾವುದೇ ಸೌಲಭ್ಯವಿಲ್ಲದ ಹತ್ತಿರದ ಆಸ್ಪತ್ರೆಗೆ ಹೋಗಿ ಅಲ್ಲಿ ಸಮಯ ವ್ಯರ್ಥ ಮಾಡುವ ಬದಲು ಈ ವ್ಯವಸ್ಥೆಯನ್ನು ಬಹಳ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿದಾಗ ಅನೇಕ ಜೀವಗಳನ್ನು ಉಳಿಸಲು ಸಹಕಾರಿಯಾಗಲಿದೆ ಎಂದರು.
ಹೆದ್ದಾರಿಯಲ್ಲಿ ಸಮರ್ಪಕ ಬೀದಿ ದೀಪಗಳ ವ್ಯವಸ್ಥೆ ಇಲ್ಲದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಂಸದರು, ಮುಂದಿನ 15 ದಿನಗಳ ಒಳಗಾಗಿ ಬಾಕಿ ಇರುವ ದೀಪಗಳ ದುರಸ್ತಿ ಮತ್ತು ಅಳವಡಿಕೆ ಕಾರ್ಯ ಪೂರ್ಣಗೊಳ್ಳಬೇಕು ಎಂದು ಎನ್.ಹೆಚ್.ಎ.ಐ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕಳೆದ ಸಭೆಯಲ್ಲಿ ನೀಡಿದ ಆದೇಶಗಳನ್ನು ಪಾಲಿಸಲಾಗಿದೆಯೇ ಎಂದು ಪ್ರಶ್ನಿಸಿದ ಅವರು, ಒಂದು ವೇಳೆ ತೊಂದರೆಗಳಿದ್ದರೆ ಅದನ್ನು ಮುಕ್ತವಾಗಿ ತಿಳಿಸಲು ಹೇಳಿ. ಆಂಬ್ಯುಲೆನ್ಸ್ ಮತ್ತು ತುರ್ತು ಸೇವೆಯನ್ನು ಟೋಲ್ ವಲಯದಲ್ಲಿ ಒದಗಿಸಬೇಕಾದ ಬಗ್ಗೆ
ಮತ್ತು ಅಲ್ಲಿರುವ ಆಂಬ್ಯುಲೆನ್ಸ್ ವ್ಯವಸ್ಥೆಯ ಬಗ್ಗೆ ಮಾಹಿತಿ ಕೇಳಿದರು.
ಈ ವೇಳೆ ಎನ್.ಹೆಚ್.ಎ.ಐ ಅಧಿಕಾರಿಗಳು ಸಮರ್ಪಕ ಅಂಕಿ ಅಂಶಗಳಿಲ್ಲದೇ ಮಾಹಿತಿ ನೀಡಿದಾಗ ಸಂಸದರು ಕೇವಲ ಬಾಯಿ ಮಾತಿನಲ್ಲಿ ಹೇಳುವ ಬದಲು, ಅಪಘಾತಗಳ ಸಂದರ್ಭದಲ್ಲಿ ಆಂಬ್ಯುಲೆನ್ಸ್ ಮೂಲಕ ಎಷ್ಟು ಜನರ ಪ್ರಾಣ ಉಳಿಸಲಾಗಿದೆ.
ಮತ್ತು ಯಾವ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂಬ ಬಗ್ಗೆ ಲಿಖಿತ ವರದಿ ನೀಡಲು ಸೂಚಿಸಿ ಕುಂದುವಾಡ ಕೆಳ ಸೇತುವೆ ನಿರ್ಮಾಣ, ಸೇವಾ ರಸ್ತೆ ಸೇರಿದಂತೆ ರಸ್ತೆಯಲ್ಲಿನ ಮಳೆಯ ನೀರು ಹೋಗಲು ನಿರ್ಮಾಣ ಮಾಡಿದ ಚರಂಡಿಯ ಅವೈಜ್ಞಾನಿಕತೆ ಬಗ್ಗೆ ಪ್ರಶ್ನಿಸಿ ಸರಿಪಡಿಸಲು ಸೂಚನೆ ನೀಡಿ ಬಾಡಾ ಕ್ರಾಸ್ ಮತ್ತು ಎಸ್.ಎಸ್.ಆಸ್ಪತ್ರೆ ಬಳಿಯ ಅಂಡರ್ಪಾಸ್ ಪಾಸ್ ವಿಸ್ತರಣೆಗೆ ರೂಪಿಸಲಾದ ಕ್ರಿಯಾ ಯೋಜನೆಯನ್ನು ಮಂಡಿಸಲು ತಿಳಿಸಿ ಈ ಬಗ್ಗೆ ಕೇಂದ್ರ ಹೆದ್ದಾರಿ ಸಚಿವರ ಗಮನಕ್ಕೆ ತಂದು ಅನುಷ್ಟಾನಕ್ಕೆ ಕ್ರಮ ವಹಿಸಲಾಗುತ್ತದೆ ಎಂದರು.
ಅಪಘಾತ ವಲಯಗಳನ್ನು ಗುರುತಿಸಿ, ಅಲ್ಲಿ ವೈಜ್ಞಾನಿಕವಾಗಿ ರಸ್ತೆ ಉಬ್ಬುಗಳು, ಸೂಚನಾ ಫಲಕಗಳು ಮತ್ತು ಬೀದಿ ದೀಪಗಳ ವ್ಯವಸ್ಥೆ ಮಾಡಬೇಕು. ನಗರದ ಪ್ರಮುಖ ರಸ್ತೆಗಳಲ್ಲಿ ಮತ್ತು ಅಂಡರ್ಪಾಸ್ಗಳಲ್ಲಿ ಫುಟ್ಪಾತ್ ಅತಿಕ್ರಮಣ ಮಾಡಿ ವ್ಯಾಪಾರ ಮಾಡುತ್ತಿರುವುದರಿಂದ ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ. ಇಂತಹ ಅತಿಕ್ರಮಣಗಳನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಅಧಿಕಾರಿಗಳಿಗೆ ಆದೇಶಿಸಿದರು.
ಸೈಕ್ಲಿಂಗ್ ಪ್ರೋತ್ಸಾಹ:
ಪರಿಸರ ಸ್ನೇಹಿ ಸಂಚಾರಕ್ಕೆ ಒತ್ತು ನೀಡಲು ನಗರ ಪ್ರದೇಶಗಳಲ್ಲಿ ಸೈಕ್ಲಿಂಗ್ ಪ್ರೋತ್ಸಾಹಿಸುವಂತೆ ಮತ್ತು ಅದಕ್ಕೆ ಪೂರಕವಾದ ವಾತಾವರಣ ನಿರ್ಮಿಸುವಂತೆ ತಿಳಿಸಿದರು.





Leave a comment