SUDDIKSHANA KANNADA NEWS/ DAVANAGERE/ DATE:19-09-2024
ದಾವಣಗೆರೆ: ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ 57ನೇ ಜನುಮದಿನದ ಪ್ರಯುಕ್ತ ಸೆ. 21ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಒಂದು ದಿನದ ರಾಜ್ಯಮಟ್ಟದ 3×3 ಆಹ್ವಾನಿತ ಬಾಸ್ಕೆಟ್ ಬಾಲ್ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದು ಎಂದು ಜಿಲ್ಲಾ ಬಾಸ್ಕೆಟ್ ಬಾಲ್ ಕ್ಲಬ್ ನ ಉಪಾಧ್ಯಕ್ಷ ಗಡಿಗುಡಾಳ್ ಮಂಜುನಾಥ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10.30ಕ್ಕೆ ಆರಂಭವಾಗುವ ಕ್ರೀಡಾಕೂಟಕ್ಕೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಚಾಲನೆ ನೀಡಲಿದ್ದು, ಸಂಜೆ 6 ಗಂಟೆಗೆ ಕ್ರೀಡಾಕೂಟ ಮುಗಿದ ನಂತರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹಾಗೂ ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು. ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನಕ್ಕೆ 15 ಸಾವಿರ, ದ್ವಿತೀಯ 10 ಸಾವಿರ, ತೃತೀಯ 5 ಸಾವಿರ ರೂ ನಗದು ಬಹುಮಾನ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.
ಈ ಕ್ರೀಡೆಯಲ್ಲಿ ಪುರುಷರ ವಿಭಾಗದಲ್ಲಿ ರಾಜ್ಯದ 24 ತಂಡಗಳು ಈ ಪಂದ್ಯಾವಳಿಗೆ ಭಾಗವಹಿಸಲಿದ್ದಾರೆ. ಇದರ ಜೊತೆಗೆ 16 ವರ್ಷ ವಯೋಮಿತಿಯ ಬಾಲಕರಿಗೆ ಜಿಲ್ಲಾ ಮಟ್ಟದ 3X3 ಬಾಸ್ಕೆಟ್ ಬಾಲ್ ಪಂದ್ಯಗಳು ನಡೆಯಲಿವೆ. ಒಟ್ಟು 200 ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದು, ಈ ಕ್ರೀಡಾಪಟುಗಳಿಗೆ ಮಧ್ಯಾಹ್ನದ ಊಟ ವ್ಯವಸ್ಥೆ ಮಾಡಲಾಗಿದೆ. ಪುರುಷರ ವಿಭಾಗದಲ್ಲಿ ಮಾತ್ರ ನಗದು ಬಹುಮಾನಗಳನ್ನು ಕೊಡಲಾಗುವುದು ಎಂದರು,
ಗೋಷ್ಠಿಯಲ್ಲಿ ಗೌರವಾಧ್ಯಕ್ಷ ಸಿ.ರಾಮಮೂರ್ತಿ, ವಸಂತಕುಮಾರ್, ದರ್ಶನ್, ಸಚಿನ್ ಇತರರು ಇದ್ದರು.