SUDDIKSHANA KANNADA NEWS/ DAVANAGERE/ DATE:19-09-2024
ದಾವಣಗೆರೆ: ತೋಟಗಾರಿಕೆ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ 57 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿಗಳು ಸೆಪ್ಟೆಂಬರ್ 22 ರಂದು ದಾವಣಗೆರೆಯ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದ್ದಾರೆ ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರುಅಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಸಚಿವ ಮಲ್ಲಿಕಾರ್ಜುನ್ ಅವರು ದೀಪ ಬೆಳಗಿಸುವ ಮೂಲಕ ಜನ್ಮದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಕಾರಣರಾದ ದಾವಣಗೆರೆ ಉತ್ತರ ಮತ್ತು ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಅಭಿನಂದಿಸಲಾಗುವುದು ಎಂದು ಹೇಳಿದರು.
ಈಗಾಗಲೇ ಕಾರ್ಯಕ್ರಮಗಳನ್ನು ಜಿಲ್ಲಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದು ಈಗಾಗಲೇ ವಿವಿಧ ಸಾಮಾಜಿಕ ಕಾರ್ಯಗಳು ಕಳೆದ 10ನೇ ತಾರೀಖಿನಿಂದ ನಡೆಯುತ್ತಿವೆ. ಆವರಗೆರೆಯಲ್ಲಿರುವ ಗೋಶಾಲೆಯಲ್ಲಿ ಗೋವುಗಳಿಗೆ ಮೇವು ವಿತರಣೆ ಮಾಡಲಾಗಿದೆ, ಎಂಸಿಸಿ ಬಿ ಬ್ಲಾಕ್ ನ ಐಎಂಎ ಹಾಲ್ನಲ್ಲಿ ರಕ್ತದಾನ ಶಿಬಿರ ನಡೆಸಲಾಗಿದೆ. ವಿನೋಬನಗರ ಸೇರಿದಂತೆ ಇನ್ನೂ ನಾಲ್ಕು ವಾರ್ಡ್ ಗಳಲ್ಲಿಯೂ ಶಿಬಿರ ಮುಂದುವರಿಯಲಿದೆ ಎಂದು ಮಾಹಿತಿ ನೀಡಿದರು.
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ರಕ್ತದಾನ ಮಾಡಿ ಅನೇಕರ ಜೀವ ಉಳಿಸುವ ಕೆಲಸ ಮಾಡಿದ್ದಾರೆ. ಮಲ್ಲಿಕಾರ್ಜುನ್ ಅವರು ಮೂರು ಬಾರಿ ಸಚಿವರಾಗಿ ದಾವಣಗೆರೆ ನಗರ ಮತ್ತು ಜಿಲ್ಲೆಯನ್ನು ಭಾರತದ ಭೂಪಟದಲ್ಲಿ ಗುರುತಿಸುವಂತಹ ಅಭಿವೃದ್ಧಿ ಮಾಡಿದ್ದು, ಅವರ ಸೇವೆ ಇನ್ನಷ್ಟು ದಾವಣಗೆರೆ ನಗರಕ್ಕೆ ಸಿಗಲಿ ಎಂದು ಆಶಿಸಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳು, ಸಂಘ- ಸಂಸ್ಥೆಗಳು, ಮಹಿಳಾ ಸ್ವ ಸಹಾಯ ಸಂಘಗಳು, ಕಾಂಗ್ರೆಸ್ ಪಕ್ಷದ ಎಲ್ಲಾ ಘಟಕಗಳ ಪದಾಧಿಕಾರಿಗಳು ಹಾಗೂ ಮಲ್ಲಿಕಾರ್ಜುನ್ ಅವರ ಅಭಿಮಾನಿಗಳು ದಾವಣಗೆರೆ ಶಾಮನೂರು ರಸ್ತೆಯ ಬಾಪೂಜಿ ಬ್ಯಾಂಕ್ ಸಮುದಾಯಕ್ಕೆ ಆಗಮಿಸುವಂತೆ ಮನವಿ ಮಾಡಿದರು.
ಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್. ಬಿ. ಮಂಜಪ್ಪ, ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ. ಪಾಲಿಕೆ ಸದಸ್ಯರಾದ ಗಡಿಗುಡಾಳ್ ಮಂಜುನಾಥ್, ಎ. ನಾಗರಾಜ್, ಕೆ. ಚಮನ್ ಸಾಬ್, ಪರಶುರಾಮ್, ಕೆ. ಜಿ. ಶಿವಕುಮಾರ್, ಮುದ್ದೇಗೌಡ್ರು ಗಿರೀಶ್ ಮತ್ತಿತರರು ಹಾಜರಿದ್ದರು.