ದಾವಣಗೆರೆ: ಕೇಂದ್ರ ಸರ್ಕಾರವು ಪ್ರಸಕ್ತ ಸಾಲಿನ ಹಿಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲಬೆಲೆ ಯೋಜನೆಯಡಿ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ವತಿಯಿಂದ ಅಥವಾ ಮಾನ್ಯತೆ ಪಡೆದ ಉಪ ಏಜೆನ್ಸಿಗಳಿಂದ ಜಿಲ್ಲೆಯ ರೈತರ ಭತ್ತ ಖರೀದಿಸಲು ಉದ್ದೇಶಿಸಿದೆ.
ಅರ್ಹ ರೈತರು ಜಗಳೂರು ಹೊರತುಪಡಿಸಿ, ಜಿಲ್ಲೆಯ ಉಳಿದ 4 ಭತ್ತ ಖರೀದಿ ಕೇಂದ್ರಗಳಲ್ಲಿ ಭತ್ತ ಖಟಾವಿನವರೆಗೂ ಕಾಯದೇ ನಿಗಧಿಪಡಿಸಿದ ಕಾಲಮಿತಿಯೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಅವರು ತಿಳಿಸಿದ್ದಾರೆ.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ಹಿಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಗೆ ಸಂಬಂಧಿಸಿದಂತೆ ಏರ್ಪಡಿಸಲಾಗಿದ್ದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಕೃಷಿ ಮತ್ತು ಆಹಾರ ಇಲಾಖೆಯ ಅಧಿಕಾರಿಗಳು ಕೂಡಲೇ ಖರೀದಿ ಕೇಂದ್ರಗಳಲ್ಲಿ ಭತ್ತ ಖರೀದಿಗೆ ಅಗತ್ಯವಾಗಿರುವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅವರು ಸಲಹೆ ನೀಡಿದರು.
ರೈತರು ತಾವು ಪ್ರತಿ ಎಕರೆಗೆ ಬೆಳೆದ 25 ರಿಂದ 50ಕ್ವಿಂಟಾಲ್ ಭತ್ತವನ್ನು ಖರೀದಿ ಕೇಂದ್ರದಲ್ಲಿ ನೇರವಾಗಿ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ ಅಲ್ಲದೇ ಭತ್ತವನ್ನು ಸರಬರಾಜು ಮಾಡಿದ ರೈತರಿಗೆ ಅವರ ಬ್ಯಾಂಕ್ ಖಾತೆಗಳಿಗೆ ನೇ ನಗದು ವರ್ಗಾವಣೆ ಮುಖಾಂತರ ಮಾಡಲು ಕ್ರಮ ವಹಿಸಲಾಗಿದೆ. ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್ಗೆ 2369.00ರೂ.ಗಳನ್ನು ಹಾಗೂ ʼಎʼಗ್ರೇಡ್ ಭತ್ತ ಪ್ರತಿ ಕ್ವಿಂಟಾಲ್ಗೆ 2389.00ರೂ.ಗಳನ್ನು ನಿಗಧಿಪಡಿಸಲಾಗಿದೆ. ಮೇ ಮಾಸಾಂತ್ಯದವರೆಗೆ ಭತ್ತ ಖರೀದಿ ಪ್ರಕ್ರಿಯೆ ನಡೆಯಲಿದೆ ಎಂದವರು ತಿಳಿಸಿದ್ದಾರೆ.
ಖರೀದಿಗೆ ಸಂಬಂಧಿಸಿದ ಅಗತ್ಯ ಪ್ರಕ್ರಿಯೆಗಳನ್ನು ಕೂಡಲೇ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಅವಶ್ಯಕವಾಗಿರುವ ತಂತ್ರಾಂಶವನ್ನುಎನ್.ಐ.ಸಿ.ಯ ಸಹಯೋಗದೊಂದಿಗೆ ಆಹಾರ ಇಲಾಖೆಯ ಅಧಿಕಾರಿಗಳು ಸಿದ್ಧಪಡಿಸಿಕೊಂಡು, ಖರೀದಿಯ ಮುನ್ನ ಮತ್ತು ನಂತರದ ಎಲ್ಲಾ ದತ್ತಾಂಶಗಳನ್ನು ಕಾಲಕಾಲಕ್ಕೆ ದಾಖಲಿಸುವಂತೆ ಅವರು ಸೂಚಿಸಿದರು






Leave a comment