ದಾವಣಗೆರೆ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್-2026) ಮೇ 3 ರಂದು ನಡೆಯಲಿದ್ದು, ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ನೀಟ್ ಪರೀಕ್ಷೆ-2026 ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಕಲ್ಪಿಸಬೇಕು. ಬೇಸಿಗೆಯ ತಾಪ ಹೆಚ್ಚಿರುವುದರಿಂದ ಪರೀಕ್ಷೆಯ ಅವಧಿಯಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಲಾದ ಎಲ್ಲಾ ಸಿಬ್ಬಂದಿ ಮತ್ತು ಅಧಿಕಾರಿಗಳು ಕಡ್ಡಾಯವಾಗಿ ತರಬೇತಿ ನೀಡಬೇಕು ಎಂದರು.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಿಯಮಗಳಂತೆ, ಕ್ಯಾಲ್ಕುಲೇಟರ್, ಸ್ಕೇಲ್, ರೈಟಿಂಗ್ ಪ್ಯಾಡ್, ಪೆನ್ ಡ್ರೈವ್ಗಳು, ಎರೇಸರ್, ಲಾಗ್ ಟೇಬಲ್, ಎಲೆಕ್ಟ್ರಾನಿಕ್ ಉಪಕರಣಗಳು, ಪೆನ್ ಸ್ಕ್ಯಾನರ್, ಮೊಬೈಲ್ ಫೋನ್, ಬ್ಲೂಟೂತ್, ಇಯರ್ಫೋನ್ಗಳು, ಮೈಕ್ರೋಫೋನ್, ಪೇಜರ್, ಹೆಲ್ತ್ ಬ್ಯಾಂಡ್ ಎಲ್ಲಾ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳನ್ನು ತೆಗೆದುಕೊಂಡು ಹೋಗುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದರು.
14 ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಡಳಿತ ವತಿಯಿಂದ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಪರೀಕ್ಷೆ ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಲು, ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ತಡೆಯುವ ದೃಷ್ಟಿಯಿಂದ ಪರೀಕ್ಷೆ ನಡೆಯುವ ದಿನ, ಪರೀಕ್ಷೆ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಯಾವುದೇ ಜೆರಾಕ್ಸ್ ಹಾಗೂ ಕಂಪ್ಯೂಟರ್ ಸೆಂಟರ್ಗಳು ನಿಷೇಧಾಜ್ಞೆ ಸಮಯದಲ್ಲಿ ಕಾರ್ಯನಿರ್ವಹಿಸುವಂತಿಲ್ಲ ಎಂದರು.
ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು. ತುರ್ತು ವೈದ್ಯಕೀಯ ಸೇವೆಗಾಗಿ ಆರೋಗ್ಯ ಇಲಾಖೆಯ ವತಿಯಿಂದ ಪ್ರಥಮ ಚಿಕಿತ್ಸಕರ ತಂಡ ನಿಯೋಜಿಸಬೇಕು. ಪರೀಕ್ಷಾ ಕೇಂದ್ರದೊಳಗೆ ಯಾವುದೇ ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸದಂತೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಪರೀಕ್ಷಾ ದಿನದಂದು ನಿರಂತರ ವಿದ್ಯುತ್ ಸರಬರಾಜು ನೀಡಬೇಕು. ಬಿ.ಎಸ್.ಎನ್.ಎಲ್. ವತಿಯಿಂದ ಇಂಟರ್ ನೆಟ್ ಸೇವೆಯಲ್ಲಿ ತೊಂದರೆಯಾಗದAತೆ ನೋಡಿಕೊಳ್ಳಬೇಕು ಎಂದರು.
ಸಾರಿಗೆ ವ್ಯವಸ್ಥೆ :
14 ಪರೀಕ್ಷಾ ಕೇಂದ್ರಗಳಿಗೆ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಮತ್ತು ರೈಲು ನಿಲ್ದಾಣದಿಂದ ವಿಶೇಷ ನಗರ ಸಾರಿಗೆ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ, ಸದರಿ ಬಸ್ ಗಳು ಬೆಳಿಗ್ಗೆ 9 ಗಂಟೆಯಿಂದ ಸಂಚರಿಸಲಿವೆ ಎಂದು ತಿಳಿಸಿದರು.
ನೀಟ್ ಪರೀಕ್ಷೆ ನೋಡಲ್ ಅಧಿಕಾರಿ ಮಾತನಾಡಿ, ಜಿಲ್ಲೆಯಲ್ಲಿ ದಾವಣಗೆರೆ 13 ಮತ್ತು ಹರಿಹರ 1 ಸೇರಿ ಒಟ್ಟು 14 ಪರೀಕ್ಷಾ ಕೇಂದ್ರಗಳಿವೆ. ಒಟ್ಟು 7280 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯು ಬೆಳಿಗ್ಗೆ 10.30 ರಿಂದ ಅಪರಾಹ್ನ 01.30 ರವರೆಗೆ ನಡೆಯಲಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಕಡೆಯಿಂದ ಮೆಟಲ್ ಡಿಡೆಕ್ಟರ್ ಅಳವಡಿಸಲಾಗುತ್ತದೆ. ಬಾಲಕ ಹಾಗೂ ಬಾಲಕಿಯರಿಗೆ ಪ್ರತ್ಯೇಕವಾಗಿ ಪ್ರಿಸ್ಕಿಂಗ್ ನಡೆಸಲಾಗುವುದು. ಬಯೋಮೆಟ್ರಿಕ್ ದೃಢೀಕರಣದ ನಂತರವೇ ಪರೀಕ್ಷಾ ಕೇಂದ್ರ ಪ್ರವೇಶಿಸಲು ಅವಕಾಶ ನೀಡಲಾಗುತ್ತದೆ. ಪ್ರತಿ ಕೊಠಡಿಯಲ್ಲಿ ಸಿಸಿ ಟಿವಿ ಕ್ಯಾಮರಾ ಅಳವಡಿಸಲಾಗಿದೆ. ಇದರ ಜೊತೆಗೆ ಪರೀಕ್ಷಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ವಿಡಿಯೋಗ್ರಫಿ ಮಾಡಲಾಗುವುದು ಎಂದರು.
ಪರೀಕ್ಷಾ ಕೇಂದ್ರಗಳು:
ದಾವಣಗೆರೆಯ ದಾವಣಗೆರೆ ವಿಶ್ವವಿದ್ಯಾಲಯ,ಶಿವಗಂಗೋತ್ರಿ, ಸರ್ಕಾರಿ ಪದವಿ ಪೂರ್ವ ಬಾಲಕರ ಕಾಲೇಜು, ಪಿ.ಜೆ ಬಡಾವಣೆ, ಪಿ.ಬಿ ರಸ್ತೆ, ಡಿಆರ್ಎಂ ಸರ್ಕಾರಿ ಪದವಿ ಪೂರ್ವ ಕಾಲೇಜು, ಜಿಲ್ಲಾ ಕ್ರೀಡಾಂಗಣ ಹತ್ತಿರ , ಹದಡಿ ರಸ್ತೆ, ಎಸ್.ಎಲ್. ಪದವಿ ಪೂರ್ವ ಕಾಲೇಜು, ಎಸ್.ಎನ್. ಲೇಔಟ್, ಬಕ್ಕೇಶ್ವರ ಕಲ್ಯಾಣ ಮಂಟಪ ಹತ್ತಿರ, ಎಸ್.ಎ.ಜಿ.ಬಿ ಪಿ.ಯು ಕಾಲೇಜು, 2ನೇ ಮುಖ್ಯ, 2 ನೇ ಕ್ರಾಸ್, ಪಿ.ಜೆ. ಬಡಾವಣೆ, ಪಿ.ಎಂ, ಶ್ರೀ ಕೇಂದ್ರಿಯ ವಿದ್ಯಾಲಯ, ಕೊಂಡಜ್ಜಿ ರಸ್ತೆ, ಅವರಗೊಳ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, , ಜೀವ ಆರ್ಯುವೇದಿಕ ಆಸ್ಪತ್ರೆ ಹತ್ತಿರ, ಆಂಜನೇಯ ಬಡಾವಣೆ, .ಬಿಡಿಟಿ ಇಂಜಿನಿಯರಿಂಗ್ ಕಾಲೇಜು, ಹದಡಿ ರಸ್ತೆ, ಮೋತಿವೀರಪ್ಪ ಸರ್ಕಾರಿ ಪಿ.ಯು ಕಾಲೇಜು , ಪಿ.ಜೆ ಬಡಾವಣೆ, ಗುಂಡಿ ಸರ್ಕಲ್ ಹತ್ತಿರ, ಎಆರ್ಜಿ ಕಲಾ ಮತ್ತು ವಾಣಿಜ್ಯ ಕಾಲೇಜು , ಬಾಪೂಜಿ ಡೆಂಟಲ್ ಕಾಲೇಜು ಹಿಂಭಾಗ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಡೆಂಟಲ್ ಕಾಲೇಜು ರಸ್ತೆ, ಎಂ.ಸಿ.ಸಿ ಬಿ ಬ್ಲಾಕ್, ಅನುಭವ ಮಂಟಪ ಶಾಲೆ ಹಿಂಭಾಗ, ಎ.ವಿ ಕಮಲಮ್ಮ ಪಿ.ಯು. ಮಹಿಳಾ ಕಾಲೇಜು, ಅಕ್ಕಮಹಾದೇವಿ ರಸ್ತೆ, ರಾಜನಹಳ್ಳಿ ಸೀತಮ್ಮ ಸರ್ಕಾರಿ ಪಿ.ಯು ಮಹಿಳಾ ಕಾಲೇಜು,. ಪಿ.ಜೆ ಬಡಾವಣೆ, ಮತ್ತು ಹರಿಹರದ ಡಿಆರ್ಎಂ ಸರ್ಕಾರಿ ಪದವಿ ಪೂರ್ವ ಕಾಲೇಜು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಡಿವೈಎಸ್ಪಿ ಶರಣಪ್ಪ, ಶಾಲಾ ಶಿಕ್ಷಣ ಇಲಾಖೆ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೊಟ್ರೇಶ್, ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ಉಪ ನಿರ್ದೇಶಕ ಪಳಿನಿಸ್ವಾಮಿ, ಡಿಹೆಚ್ಓ ಡಾ.ಷಣ್ಮುಖಪ್ಪ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.





Leave a comment