ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಭಾರೀ ಬದಲಾವಣೆಯ ಮುನ್ಸೂಚನೆ ಸಿಕ್ಕಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರದಲ್ಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿಗಳು ದಟ್ಟವಾಗಿವೆ. ಈ ಬೆಳವಣಿಗೆಗಳ ನಡುವೆ, ಇಂದು ಬೆಂಗಳೂರಿನ ಸಿಎಂ ಅಧಿಕೃತ ನಿವಾಸದಲ್ಲಿ ಹಮ್ಮಿಕೊಳ್ಳಲಾಗಿದ್ದ ಉಪಾಹಾರ (ಬ್ರೇಕ್ಫಾಸ್ಟ್) ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾದ ಮುಟ್ಟಿ ಆಶೀರ್ವಾದ ಪಡೆದಿದ್ದಾರೆ.
ರಾಜೀನಾಮೆಗೆ ಹೈಕಮಾಂಡ್ ಸೂಚನೆ?
ಕಾಂಗ್ರೆಸ್ ಮೂಲಗಳ ಪ್ರಕಾರ, ಪಕ್ಷದ ಹೈಕಮಾಂಡ್ ಮತ್ತು ಪ್ರಮುಖ ನಾಯಕ ರಾಹುಲ್ ಗಾಂಧಿ ಅವರ ನೇರ ಸಂದೇಶದ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ಕೆಳಗಿಳಿಯಲು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಅವರ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗುವ ರೇಸ್ನಲ್ಲಿ ಮುಂಚೂಣಿಯಲ್ಲಿದ್ದಾರೆ. ಆದರೆ, ಈ ಬಗ್ಗೆ ಕಾಂಗ್ರೆಸ್ ವತಿಯಿಂದ ಇನ್ನು ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ.
ರಾಜ್ಯಪಾಲರು ಬೆಂಗಳೂರಿನಲ್ಲಿಲ್ಲ:
ವರದಿಗಳ ಪ್ರಕಾರ, ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಸಲ್ಲಿಸಲು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರ ಭೇಟಿಗೆ ಸಮಯ ಕೋರಿದ್ದರು. ಆದರೆ, ಕೌಟುಂಬಿಕ ತುರ್ತು ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಜ್ಯಪಾಲರು ಇಂದೋರ್ಗೆ ಪ್ರಯಾಣ ಬೆಳೆಸಿದ್ದು, ಸದ್ಯ ಬೆಂಗಳೂರಿನಲ್ಲಿ ಲಭ್ಯವಿಲ್ಲ ಎಂದು ರಾಜಭವನದ ಮೂಲಗಳು ತಿಳಿಸಿವೆ.
ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ನಿರಾಸಕ್ತಿ:
ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಹುದ್ದೆ ಹಾಗೂ ರಾಜ್ಯಸಭಾ ಸ್ಥಾನದ ಆಫರ್ ನೀಡಿದೆ ಎನ್ನಲಾಗಿದೆ. ಆದರೆ 77 ವರ್ಷದ ಹಿರಿಯ ನಾಯಕ ಸಿದ್ದರಾಮಯ್ಯ ಅವರು ರಾಜ್ಯಸಭೆಗೆ ಹೋಗಲು ನಿರಾಸಕ್ತಿ ಹೊಂದಿದ್ದು, ಶಾಸಕರಾಗಿಯೇ ಮುಂದುವರಿಯಲು ಬಯಸಿದ್ದಾರೆ ಎನ್ನಲಾಗಿದೆ.
ಅಧಿಕಾರ ಹಂಚಿಕೆ ಸೂತ್ರ:
2023ರ ವಿಧಾನಸಭಾ ಚುನಾವಣೆಯ ಗೆಲುವಿನ ಬಳಿಕ ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಆಗ ಎರಡುವರೆ ವರ್ಷಗಳ ಅಧಿಕಾರ ಹಂಚಿಕೆ (ರೊಟೇಷನಲ್ ಸಿಎಂ) ಸೂತ್ರದಡಿ ಡಿಕೆಶಿ ಮನವೊಲಿಸಲಾಗಿತ್ತು ಎಂಬ ಚರ್ಚೆಗಳು ನಡೆದಿದ್ದವು. ಇದೀಗ ನವೆಂಬರ್ 20, 2025ಕ್ಕೆ ಸರ್ಕಾರದ ಅರ್ಧಾವಧಿ ಮುಗಿದಿರುವುದರಿಂದ ನಾಯಕತ್ವ ಬದಲಾವಣೆಯ ಪ್ರಕ್ರಿಯೆ ವೇಗ ಪಡೆದುಕೊಂಡಿದೆ. ಸಿಎಂ ನಿವಾಸದ ಹೊರಗೆ ಸಿದ್ದರಾಮಯ್ಯ ಬೆಂಬಲಿಗರು ಜಮಾಯಿಸಿದ್ದು, ಘೋಷಣೆಗಳನ್ನು ಕೂಗುತ್ತಿದ್ದಾರೆ.
- Bengaluru
- Breakfast meeting
- Congress High Command
- DK Shivakumar
- Karnataka Politics
- Leadership transixtion
- Net CM Karnataka
- Rahul Gandhi
- Siddaramaiah Resignation
- Thaawarchand Gehlot
- ಅಧಿಕಾರ ಹಂಚಿಕೆ
- ಕರ್ನಾಟಕ ರಾಜಕೀಯ
- ಕಾಂಗ್ರೆಸ್ ಹೈಕಮಾಂಡ್
- ಡಿ. ಕೆ. ಶಿವಕುಮಾರ್
- ಥಾವರ್ಚಂದ್ ಗೆಹ್ಲೋಟ್
- ಬೆಂಗಳೂರು
- ಬ್ರೇಕ್ಫಾಸ್ಟ್ ಮೀಟಿಂಗ್
- ರಾಹುಲ್ ಗಾಂಧಿ
- ಸಿದ್ದರಾಮಯ್ಯ ರಾಜೀನಾಮೆ
- ಹೊಸ ಮುಖ್ಯಮಂತ್ರಿ





Leave a comment