ನವದೆಹಲಿ / ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಶುಕ್ರವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಸುಮಾರು 16 ರಿಂದ 18 ನಾಯಕರ ಹೆಸರುಗಳನ್ನು ಕಾಂಗ್ರೆಸ್ ಹೈಕಮಾಂಡ್ ಆಖೈರುಗೊಳಿಸಿದೆ.
ಸೋಮವಾರ ಸಂಜೆ 5 ಗಂಟೆಗೆ ಹೊಸ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆಯಿದೆ.
ದೆಹಲಿಯಲ್ಲಿ ಸುದೀರ್ಘ ಚರ್ಚೆ
ಶುಕ್ರವಾರ ನಡೆದ ಹೈಕಮಾಂಡ್ ನಾಯಕರ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಸಂಘಟನಾ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್ ಪಾಲ್ಗೊಂಡಿದ್ದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಿರಿಯ ನಾಯಕರು ಸಲ್ಲಿಸಿದ್ದ ಸಂಭಾವ್ಯ ಪಟ್ಟಿಯನ್ನು ಪರಿಶೀಲಿಸಿದ ವರಿಷ್ಠರು, ಪ್ರಾದೇಶಿಕ, ಜಾತಿ, ಧರ್ಮ ಮತ್ತು ಅನುಭವ-ಯುವಪಡೆಯ ಸಮತೋಲನವನ್ನು ಕಾಯ್ದುಕೊಂಡು 18 ಹೆಸರುಗಳಿಗೆ ಅನುಮೋದನೆ ನೀಡಿದ್ದಾರೆ.
ಸೋಮವಾರ ಸಂಜೆ ಪ್ರಮಾಣ ವಚನ
ಪಿಟಿಐ (PTI) ವರದಿಗಳ ಪ್ರಕಾರ, ಭಾನುವಾರ ರಾತ್ರಿ ಅಥವಾ ಸೋಮವಾರ ಬೆಳಿಗ್ಗೆ ಅಂತಿಮ ಪಟ್ಟಿಗೆ ಅಧಿಕೃತ ಅನುಮೋದನೆ ಸಿಗಲಿದ್ದು, ಸೋಮವಾರ ಸಂಜೆ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.
ಕರ್ನಾಟಕ ಸಚಿವ ಸಂಪುಟದಲ್ಲಿ ಸಿಎಂ ಸೇರಿ ಗರಿಷ್ಠ 34 ಸಚಿವರಾಗಲು ಅವಕಾಶವಿದೆ. ಪ್ರಸ್ತುತ 14 ಸಚಿವರು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, 20 ಸ್ಥಾನಗಳು ಖಾಲಿ ಉಳಿದಿದ್ದವು. ಈ ವಿಸ್ತರಣೆಯೊಂದಿಗೆ ಸಂಪುಟಕ್ಕೆ ಬಹುತೇಕ ಪೂರ್ಣ ಪ್ರಮಾಣದ ಸ್ವರೂಪ ಸಿಗಲಿದೆ.





Leave a comment