ಬೆಂಗಳೂರು: ಭದ್ರಾ ಡ್ಯಾಂನಿಂದ ವಿವಿಧ ನಾಲೆಗಳಿಗೆ ನೀರು ಹರಿಸುವ ಕುರಿತು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ಭದ್ರಾ ಕಾಡಾ (CADA) ಸಮಿತಿಯ ಉನ್ನತ ಮಟ್ಟದ ಸಭೆ ನಡೆಯಿತು.
ಜಲಾಶಯದಲ್ಲಿ ಲಭ್ಯವಿರುವ ನೀರಿನ ಪ್ರಮಾಣ, ಪ್ರಸ್ತುತ ಬೆಳೆಗಳ ಸ್ಥಿತಿ ಹಾಗೂ ಮುಂಬರುವ ದಿನಗಳಲ್ಲಿ ಕುಡಿಯುವ ನೀರು ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ನೀರಿನ ನಿರ್ವಹಣೆ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು.
ಈ ಸಭೆಯಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ, ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್, ಸಚಿವರಾದ ಕೆ.ಎಸ್. ಬಸವಂತಪ್ಪ ಹಾಗೂ ಶಾಸಕರಾದ ಡಿ.ಜಿ. ಶಾಂತನಗೌಡ ಉಪಸ್ಥಿತರಿದ್ದರು.
ಇವರೊಂದಿಗೆ ಮಾಜಿ ಶಾಸಕರು, ಮಾಜಿ ಸಚಿವರು, ವಿವಿಧ ರೈತ ಸಂಘಟನೆಗಳ ಮುಖಂಡರು ಮತ್ತು ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿ ತಮ್ಮ ಸಲಹೆ-ಅಭಿಪ್ರಾಯಗಳನ್ನು ಹಂಚಿಕೊಂಡರು.
ರೈತರ ಹಿತಾಸಕ್ತಿಯನ್ನು ಕಾಯುವುದು ನಮ್ಮ ಮೊದಲ ಆದ್ಯತೆಯಾಗಿದೆ. ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ ಹಾಗೂ ನೀರಿನ ಪೋಲಾಗದಂತೆ ಸಮರ್ಪಕ ವೇಳಾಪಟ್ಟಿಯೊಂದಿಗೆ ನಾಲೆಗಳಿಗೆ ನೀರು ಬಿಡುಗಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.





Leave a comment