ದಾವಣಗೆರೆ: ಅಪರೂಪದ ಲಿವರ್ (ಯಕೃತ್ತಿನ) ಟ್ಯೂಮರ್ನಿಂದ ಬಳಲುತ್ತಿದ್ದ 56 ವರ್ಷದ ಮಹಿಳೆಗೆ ಇಲ್ಲಿನ ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸುಮಾರು ಆರು ಗಂಟೆಗಳ ಕಾಲ ನಡೆದ ಈ ಅತ್ಯಂತ ಸಂಕೀರ್ಣ ಶಸ್ತ್ರಚಿಕಿತ್ಸೆಯಲ್ಲಿ, ವೈದ್ಯರು ಟ್ಯೂಮರ್ (ಗಡ್ಡೆ) ಯನ್ನುಸಂಪೂರ್ಣವಾಗಿ ತೆಗೆದುಹಾಕುವುದರ ಜೊತೆಗೆ ಲಿವರ್ನ ಆರೋಗ್ಯಕರ ಭಾಗಗಳಿಗೆ ಯಾವುದೇ ಹಾನಿಯಾಗದಂತೆ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿತ್ರದುರ್ಗ ಮೂಲದ ಈ ಮಹಿಳೆ, ಬೊಜ್ಜಿನ ಸಮಸ್ಯೆಯ ಜೊತೆಗೆ ಟೈಪ್-2 ಮಧುಮೇಹ ಮತ್ತು ಹೈಪೋಥೈರಾಯ್ಡಿಸಮ್ (ಥೈರಾಯ್ಡ್ ಸಮಸ್ಯೆ) ದಂತಹ ಕಾಯಿಲೆಗಳಿಂದಲೂ ಬಳಲುತ್ತಿದ್ದರು. ಕಳೆದ ಎರಡು ತಿಂಗಳಿನಿಂದ ನಿರಂತರ ಹೊಟ್ಟೆನೋವು ಹಾಗೂ ಹಸಿವಾಗದಿರುವ ಸಮಸ್ಯೆಯಿಂದ ಅವರು ಒದ್ದಾಡುತ್ತಿದ್ದರು. ಇದಕ್ಕಾಗಿ ಸ್ಥಳೀಯ ಕ್ಲಿನಿಕ್ಗಳು ಮತ್ತು ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಅಲ್ಲಿನ ತಪಾಸಣೆಯಲ್ಲಿ ಅವರಿಗೆ ಲಿವರ್ ಟ್ಯೂಮರ್ ಇರುವುದು ಪತ್ತೆಯಾಗಿತ್ತು.
ಸರಿಯಾದ ಚಿಕಿತ್ಸೆ ಸಿಗದೆ ಕಾಯಿಲೆ ಉಲ್ಬಣಗೊಂಡಿದ್ದಾಗ, ಅವರ ಪರಿಚಿತರೊಬ್ಬರು ದಾವಣಗೆರೆಯ ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ಗೆ ಭೇಟಿ ನೀಡಿ, ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಆರ್.ಕೆ. ಹನುಮಂತ ನಾಯ್ಕ್ ಅವರನ್ನು ಸಂಪರ್ಕಿಸಲು ಸಲಹೆ ನೀಡಿದರು. ಮೊದಲ ತಪಾಸಣೆಯ ನಂತರ, ಮಹಿಳೆಯನ್ನು ಸ್ಕ್ಯಾನಿಂಗ್ ಮತ್ತು ಇತರ ಪರೀಕ್ಷೆಗಳಿಗೆ ಒಳಪಡಿಸಲಾಯಿತು. ಈ ವೇಳೆ ಅವರ ಲಿವರ್ನ ಎಡಭಾಗದ (ಲೆಫ್ಟ್ ಲೋಬ್) ಆಳದಲ್ಲಿ ಗಡ್ಡೆಯೊಂದು ಬೆಳೆದಿರುವುದು ಕಂಡುಬಂತು. ಹೆಚ್ಚಿನ ಪರೀಕ್ಷೆಗಳ ನಂತರ ಇದು ‘ಇಂಟ್ರಾಹೆಪಾಟಿಕ್ ಚೋಲಾಂಜಿಯೋಕಾರ್ಸಿನೋಮ’ (intrahepatic cholangiocarcinoma) ಎಂಬ ಕಾಯಿಲೆ ಎಂದು ದೃಢಪಟ್ಟಿತು. ಈ ಹಿಂದೆಯೇ ಅವರಿಗೆ ಈ ಕಾಯಿಲೆ ಇರುವುದು ಪತ್ತೆಯಾಗಿದ್ದರೂ, ಶಸ್ತ್ರಚಿಕಿತ್ಸೆಯಲ್ಲಿನ ಸಂಕೀರ್ಣತೆಯ ಕಾರಣದಿಂದಾಗಿ ಹಿಂದಿನ ವೈದ್ಯರು ಅದನ್ನು ತೆಗೆದುಹಾಕಲು ಹಿಂದೇಟು ಹಾಕಿದ್ದರು.
ಸುಮಾರು 95 ಕೆ.ಜಿ ತೂಕವಿದ್ದ ಆ ಮಹಿಳೆ ಬೊಜ್ಜು ಮತ್ತು ಇತರ ಆರೋಗ್ಯ ಸಮಸ್ಯೆಗಳನ್ನು ಹೊಂದಿದ್ದರಿಂದ, ಇಂತಹ ದೊಡ್ಡ ಶಸ್ತ್ರಚಿಕಿತ್ಸೆಗೆ ಒಳಪಡಿಸುವುದು ಅತ್ಯಂತ ಅಪಾಯಕಾರಿಯಾಗಿತ್ತು. ಶಸ್ತ್ರಚಿಕಿತ್ಸೆಗೂ ಮುನ್ನ, ಈ ರೋಗಿಯು ಶಸ್ತ್ರಚಿಕಿತ್ಸೆಯನ್ನು ತಡೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ವೈದ್ಯರು ಹೃದಯ ಮತ್ತು ಶ್ವಾಸಕೋಶದ ವಿವರವಾದ ಪರೀಕ್ಷೆಗಳನ್ನು ನಡೆಸಿದರು.
ಈ ಸವಾಲಿನ ಪ್ರಕರಣವನ್ನು ಕೈಗೆತ್ತಿಕೊಂಡ ಡಾ. ಹನುಮಂತ ನಾಯ್ಕ್ ಮತ್ತು ಅವರ ತಂಡ, ಕ್ಯಾನ್ಸರ್ ಗಡ್ಡೆಯನ್ನು ಯಶಸ್ವಿಯಾಗಿ ತೆಗೆದುಹಾಕಲು ಸುಮಾರು ಆರು ಗಂಟೆಗಳ ಕಾಲ ಶ್ರಮಿಸಿತು. ಇದರ ಜೊತೆಗೆ ಸಾಕಷ್ಟು ಆರೋಗ್ಯಕರ ಲಿವರ್ ಸರಿಯಾಗಿ ಕಾರ್ಯನಿರ್ವಹಿಸುವಂತೆಯೂ ನೋಡಿಕೊಂಡಿತು. ಈ ಶಸ್ತ್ರಚಿಕಿತ್ಸೆಯು ಪಿತ್ತಕೋಶದ (ಗಾಲ್ ಬ್ಲಾಡರ್) ಜೊತೆಗೆ ಲಿವರ್ನ II, III, IVa ಮತ್ತು IVb ಭಾಗಗಳನ್ನು ತೆಗೆದುಹಾಕುವ ದೊಡ್ಡ ಶಸ್ತ್ರಚಿಕಿತ್ಸೆಯನ್ನು (ಮೇಜರ್ ಲೆಫ್ಟ್ ಹೆಪಟೆಕ್ಟಮಿ) ಒಳಗೊಂಡಿತ್ತು. ಈ ಪ್ರಕ್ರಿಯೆಯಲ್ಲಿ ಮಧ್ಯದ ಹೆಪಾಟಿಕ್ ರಕ್ತನಾಳವನ್ನು ಅತ್ಯಂತ ಎಚ್ಚರಿಕೆಯಿಂದ ರಕ್ಷಿಸಲಾಯಿತು.
ಶಸ್ತ್ರಚಿಕಿತ್ಸೆಯ ನಂತರ ಮಹಿಳೆಯು ಅತ್ಯಂತ ತ್ವರಿತವಾಗಿ ಚೇತರಿಸಿಕೊಂಡರು. ಶಸ್ತ್ರಚಿಕಿತ್ಸೆ ಮುಗಿದ ಆರು ಗಂಟೆಗಳಲ್ಲೇ ದ್ರವಾಹಾರ ಸೇವಿಸಲು ಆರಂಭಿಸಿದ ಅವರು, ಕ್ರಮೇಣ ಮೃದುವಾದ ಆಹಾರವನ್ನು ಸೇವಿಸುವ ಹಂತಕ್ಕೆ ತಲುಪಿದರು. ಅವರ ಆರೋಗ್ಯ ಸ್ಥಿರವಾಗಿದ್ದರಿಂದ ಕೇವಲ ಐದು ದಿನಗಳಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು.
ಶಸ್ತ್ರಚಿಕಿತ್ಸೆ ಬಗ್ಗೆ ಮಾತನಾಡಿದ ಡಾ. ಆರ್. ಕೆ. ಹನುಮಂತ ನಾಯ್ಕ್, “ಟ್ಯೂಮರ್ನ ಗಾತ್ರ ಮತ್ತು ಅದು ಇದ್ದ ಜಾಗ, ಅದರ ಜೊತೆಗೆ ರೋಗಿಯ ಬೊಜ್ಜು ಮತ್ತು ಇತರ ವೈದ್ಯಕೀಯ ಸಮಸ್ಯೆಗಳಿಂದಾಗಿ ಇದು ತಾಂತ್ರಿಕವಾಗಿ ಅತ್ಯಂತ ಸವಾಲಿನ ಶಸ್ತ್ರಚಿಕಿತ್ಸೆಯಾಗಿತ್ತು. ಆರೋಗ್ಯಕರ ಲಿವರ್ ಅನ್ನು ಉಳಿಸಿಕೊಂಡು ಕ್ಯಾನ್ಸರ್ ಗಡ್ಡೆಯನ್ನು ಸಂಪೂರ್ಣವಾಗಿ ತೆಗೆದುಹಾಕುವುದು ನಮ್ಮ ಮೊದಲ ಆದ್ಯತೆಯಾಗಿತ್ತು. ಶಸ್ತ್ರಚಿಕಿತ್ಸೆಗೂ ಮುನ್ನ ಎಚ್ಚರಿಕೆಯ ಮೌಲ್ಯಮಾಪನ, ಶಸ್ತ್ರಚಿಕಿತ್ಸೆಯ ನಿಖರವಾದ ಯೋಜನೆ ಮತ್ತು ಶಸ್ತ್ರಚಿಕಿತ್ಸೆಯ ನಂತರದ ವ್ಯವಸ್ಥಿತ ಆರೈಕೆಯು ಈ ಯಶಸ್ಸಿಗೆ ಕಾರಣವಾಯಿತು” ಎಂದು ತಿಳಿಸಿದರು.
ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕರಾದ ಸುನಿಲ್ ಭಂಡಾರಿಗಲ್ ಮಾತನಾಡಿ, “ಹೆಚ್ಚಿನ ಅಪಾಯದಲ್ಲಿದ್ದ ರೋಗಿಗೆ ಇಂತಹ ಸಂಕೀರ್ಣವಾದ ಲಿವರ್ ಟ್ಯೂಮರ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿಭಾಯಿಸಿರುವುದು ನಮ್ಮ ಶಸ್ತ್ರಚಿಕಿತ್ಸಾ ತಂಡದ ಪರಿಣತಿ ಮತ್ತು ವಿವಿಧ ವಿಭಾಗಗಳ ವೈದ್ಯರ ಸಂಯೊಜನೆ ಆರೈಕೆಯ (multidisciplinary care) ಮಹತ್ವವನ್ನು ತೋರಿಸುತ್ತದೆ. ಸಂಕೀರ್ಣ ಆರೋಗ್ಯ ಸಮಸ್ಯೆಗಳಿಗೆ ಸುಧಾರಿತ, ಸಕಾಲಿಕ ಮತ್ತು ರೋಗಿ-ಕೇಂದ್ರಿತ ಚಿಕಿತ್ಸೆಯನ್ನು ಒದಗಿಸುವುದೇ ನಮ್ಮ ಪ್ರಮುಖ ಗುರಿಯಾಗಿದೆ” ಎಂದು ಹೇಳಿದರು.
- Davangere Doctors Achievement
- Davangere News
- Dr. R.K. Hanumanth Naik
- Intrahepatic Cholangiocarcinoma
- Major Left Hepatectomy
- Rare Liver Tumor Surgery
- SS Narayana Health
- Surgical Gastroenterology
- ಇಂಟ್ರಾಹೆಪಾಟಿಕ್ ಚೋಲಾಂಜಿಯೋಕಾರ್ಸಿನೋಮ
- ಎಸ್.ಎಸ್. ನಾರಾಯಣ ಹೆಲ್ತ್
- ಡಾ. ಆರ್.ಕೆ. ಹನುಮಂತ ನಾಯ್ಕ್
- ದಾವಣಗೆರೆ ಸುದ್ದಿ
- ಮೇಜರ್ ಲೆಫ್ಟ್ ಹೆಪಟೆಕ್ಟಮಿ
- ಯಕೃತ್ತಿನ ಕ್ಯಾನ್ಸರ್
- ಲಿವರ್ ಶಸ್ತ್ರಚಿಕಿತ್ಸೆ
- ವೈದ್ಯಕೀಯ ಸಾಧನೆ





Leave a comment