ನವದೆಹಲಿ: ಗಂಡ-ಹೆಂಡತಿ ನಡುವಿನ ಕ್ಷುಲ್ಲಕ ಜಗಳ ವಿಕೋಪಕ್ಕೆ ಹೋಗಿ, ಪತ್ನಿಯ ಕಡೆಯವರು 31 ವರ್ಷದ ಸಾಫ್ಟ್ವೇರ್ ಎಂಜಿನಿಯರ್ ಒಬ್ಬರನ್ನು ಹೊಡೆದು ಕೊಂದಿರುವ ದಾರುಣ ಘಟನೆ ದೆಹಲಿಯ ನಿಹಾಲ್ ವಿಹಾರ ಪ್ರದೇಶದಲ್ಲಿ ನಡೆದಿದೆ.
ಮೃತರನ್ನು ನೊಯ್ಡಾದ ಅಡೋಬ್ ಸಂಸ್ಥೆಯಲ್ಲಿ ತಂತ್ರಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದ ಲಕ್ಷ್ಮಿ ಪಾರ್ಕ್ ನಿವಾಸಿ ವಿನಯ್ ಗುಪ್ತಾ (31) ಎಂದು ಗುರುತಿಸಲಾಗಿದೆ. 3.5 ವರ್ಷಗಳ ಹಿಂದೆ ವಿವಾಹವಾಗಿದ್ದ ಈ ದಂಪತಿಗೆ ನಾಲ್ಕೂವರೆ ತಿಂಗಳ ಅವಳಿ ಮಕ್ಕಳಿದ್ದಾರೆ.
ಶನಿವಾರ ಬೆಳಿಗ್ಗೆ ದಂಪತಿ ನಡುವೆ ಸಣ್ಣ ವಿಷಯಕ್ಕೆ ಗಲಾಟೆ ನಡೆದಿದ್ದು, ಈ ವೇಳೆ ಪತ್ನಿ ತನ್ನ ತವರು ಮನೆಯವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾಳೆ. ಮನೆಗೆ ಧಾವಿಸಿದ ಆಕೆಯ ಪೋಷಕರು ಮತ್ತು ಸಂಬಂಧಿಕರು ವಿನಯ್ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ವಿನಯ್ ಅವರ ತಾಯಿ ಅತಿಥಿಗಳಿಗೆ ನೀರು ತರಲು ಹೋದಾಗ ಈ ದಾಳಿ ನಡೆದಿದ್ದು, ಅವರು ಎಷ್ಟೇ ಬೇಡಿಕೊಂಡರೂ ಹಂತಕರು ಹಲ್ಲೆ ನಿಲ್ಲಿಸಲಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ತೀವ್ರವಾಗಿ ಗಾಯಗೊಂಡಿದ್ದ ವಿನಯ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು.
ಘಟನೆಗೆ ಸಂಬಂಧಿಸಿದಂತೆ ನಿಹಾಲ್ ವಿಹಾರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 103(1) ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ವಿಧಿವಿಜ್ಞಾನ (Forensic) ತಂಡ ಭೇಟಿ ನೀಡಿ ಸಾಕ್ಷ್ಯ ಸಂಗ್ರಹಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.





Leave a comment