SUDDIKSHANA KANNADA NEWS/ DAVANAGERE/ DATE:05-02-2025
ದಾವಣಗೆರೆ: ಅಕ್ರಮ ಮರಳು ದಂಧೆಕೋರರಿಗೆ ಬಿಸಿ ಮುಟ್ಟಿಸುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡುತ್ತಿದೆ. ಅಕ್ರಮ ಮರಳು ಸಂಗ್ರಹಣೆ, ಸಾಗಣೆ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ.
ಮಲೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ಮತ್ತು ಅಕ್ರಮ ಕಾನೂನು ಬಾಹಿರ ಚಟುವಟಿಕೆ ತಡೆಗಟ್ಟುವ ಸಲುವಾಗಿ ಪೊಲೀಸರ ತಂಡ ದಾಳಿ ನಡೆಸಿ ಮರಳು ವಶಪಡಿಸಿಕೊಂಡಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ್ ಎಂ. ಸಂತೋಷ, ಜಿ. ಮಂಜುನಾಥ ಹಾಗೂ ದಾವಣಗೆರೆ ಗ್ರಾಮಾಂತರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಬಿ. ಎಸ್. ಬಸವರಾಜ್ ಮಾರ್ಗದರ್ಶನದಲ್ಲಿ ಹಾಗೂ ಹರಿಹರ ವೃತ್ತ ನಿರೀಕ್ಷಕ ಸುರೇಶ ಸಗರಿ ಮತ್ತು ಮಲೆಬೆನ್ನೂರು ಪಿ.ಎಸ್.ಐ ಪ್ರಭು ಡಿ. ಕೆಳಗಿನಮನಿ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು.
ಮಲೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಳಲಹಳ್ಳಿ ಗ್ರಾಮದ ಬಳಿ ಇರುವ ತುಂಗಾಭದ್ರಾ ನದಿ ದಂಡೆಯಲ್ಲಿ ಯಾರೋ ಅಪರಿಚಿತರು ಮರಳನ್ನು ಅಕ್ರಮವಾಗಿ ಸಾಗಣಿಕೆ ಮಾಡಿ ಲಾಭ ಮಾಡಿಕೊಳ್ಳುವ ದುರುದ್ದೇಶದಿಂದ ಮರಳನ್ನು ಸಂಗ್ರಹಿಸಿಟ್ಟಿದ್ದರು. ಹರಿಹರ ವೃತ್ತ ನಿರೀಕ್ಷಕ ಸುರೇಶ ಸಗರಿ ಮಾರ್ಗದರ್ಶನದಲ್ಲಿ ಮಲೆಬೆನ್ನೂರು ಪೊಲೀಸ್ ಠಾಣೆಯ ಪಿಎಸ್ಐ ಪ್ರಭು ಡಿ. ಕೆಳಗಿನಮನಿ ಅವರನ್ನೊಳಗೊಂಡ ತಂಡವು ದಾಳಿ ಮಾಡಿ, ಸುಮಾರು ಅಂದಾಜು ಬೆಲೆ 12,000 ರೂ ಬೆಲೆಯ ಸುಮಾರು 16 ಮೆಟ್ರಿಕ್ ಟನ್ ಮರಳನ್ನು ವಶ ಪಡಿಸಿಕೊಂಡಿದೆ. ಈ ಬಗ್ಗೆ ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.