ನಾಗ್ಪುರ: ಕೇಂದ್ರ ಸಚಿವ ಸಂಪುಟ ವಿಸ್ತರಣೆಯ ಊಹಾಪೋಹಗಳ ನಡುವೆಯೇ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು “ನಾನು ಮೊದಲಿನಂತೆ ಹೆಚ್ಚು ಕೆಲಸ ಮಾಡಲು ಸಾಧ್ಯವಿಲ್ಲ, ಹೊಸ ಪೀಳಿಗೆಗೆ ಸಾರ್ವಜನಿಕ ಜವಾಬ್ದಾರಿಗಳನ್ನು ಹಸ್ತಾಂತರಿಸುವ ಸಮಯ ಬಂದಿದೆ” ಎಂಬ ಮಹತ್ವದ ಹೇಳಿಕೆ ನೀಡಿದ್ದಾರೆ.
ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಜೀವನದಲ್ಲಿ 30 ವರ್ಷಗಳಿಂದ ಸಕ್ರಿಯವಾಗಿರುವ ತಾವು ಅನೇಕ ಏಳು-ಬೀಳುಗಳನ್ನು ಕಂಡಿರುವುದಾಗಿ ತಿಳಿಸಿದರು. “ಈಗ ನಾನು ಹೆಚ್ಚು ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ನನ್ನ ಪಾಲ್ಗೊಳ್ಳುವಿಕೆ ಕಡಿಮೆಯಾಗಿದೆ. ಹೊಸ ಪೀಳಿಗೆ ಬಂದಿದ್ದು, ಹಿರಿಯರು ಅವರಿಗೆ ಕೇವಲ ಮಾರ್ಗದರ್ಶನ ನೀಡುತ್ತಿದ್ದಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಹೊಸ ಪೀಳಿಗೆಗೆ ಅವಕಾಶ ನೀಡಬೇಕು” ಎಂದು ಗಡ್ಕರಿ ಸ್ಪಷ್ಟಪಡಿಸಿದ್ದಾರೆ.
ತಮ್ಮ ಕೆಲಸದ ಹೊರೆ ಕಡಿಮೆಯಾಗಿದ್ದರೂ, ಮುಂಬರುವ ದಿನಗಳಲ್ಲಿ ಅಭಿವೃದ್ಧಿ ಕಾರ್ಯಗಳು ಮತ್ತಷ್ಟು ವೇಗ ಪಡೆಯಲಿವೆ ಎಂದು ಅವರು ಭರವಸೆ ನೀಡಿದರು. ಮಹಾರಾಷ್ಟ್ರದ ಯಾವುದೇ ಬುಡಕಟ್ಟು ಗ್ರಾಮವೂ ವಿದ್ಯುತ್ ಸಂಪರ್ಕದಿಂದ ವಂಚಿತವಾಗಬಾರದು ಎಂಬುದು ತಮ್ಮ ಪ್ರಮುಖ ಗುರಿಯಾಗಿದೆ ಎಂದು ಅವರು ಇದೇ ವೇಳೆ ತಿಳಿಸಿದರು.
ಇತ್ತೀಚೆಗಷ್ಟೇ ಬಿಜೆಪಿಯಲ್ಲಿ ದೊಡ್ಡ ಮಟ್ಟದ ಸಾಂಸ್ಥಿಕ ಬದಲಾವಣೆಗಳು ನಡೆದಿದ್ದು, 65 ಸದಸ್ಯರ ಹೊಸ ರಾಷ್ಟ್ರೀಯ ತಂಡವನ್ನು ಪ್ರಕಟಿಸಲಾಗಿದೆ. ಇದರಲ್ಲಿ 51 ಹೊಸ ಮುಖಗಳಿಗೆ ಅವಕಾಶ ನೀಡುವ ಮೂಲಕ ಹೊಸ ಪೀಳಿಗೆಗೆ ಮಣೆ ಹಾಕಲಾಗಿದೆ. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಗಡ್ಕರಿ ಅವರ ಈ ಹೇಳಿಕೆ, ಮುಂಬರುವ ನರೇಂದ್ರ ಮೋದಿ ಸಚಿವ ಸಂಪುಟ ಪುನರ್ರಚನೆಯ ವದಂತಿಗಳಿಗೆ ಮತ್ತಷ್ಟು ಪುಷ್ಟಿ ನೀಡಿದೆ.





Leave a comment