ದಾವಣಗೆರೆ: ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳ ಅಡಿಕೆ ಬೆಳೆಗಾರರ ನ್ಯಾಯಯುತ ಬೇಡಿಕೆಗಳಿಗಾಗಿ, ಕೆರೆ ತುಂಬಿಸುವ ಯೋಜನೆ ಜಾರಿಗೆ ಆಗ್ರಹಿಸಿ ಹಾಗೂ ಭದ್ರಾ ಜಲಾಶಯದಿಂದ ಅಪ್ಪರ್ ಭದ್ರಾ ಯೋಜನೆಗೆ 3 ಟಿಎಂಸಿ ನೀರು ಬಿಡುವ ಕ್ರಮವನ್ನು ಖಂಡಿಸಿ ಅಡಿಕೆ ಬೆಳೆಗಾರರ ಒಕ್ಕೂಟದ ನೇತೃತ್ವದಲ್ಲಿ ಮೂರು ದಿನಗಳ ಕಾಲ ಬೃಹತ್ ಪಾದಯಾತ್ರೆ ನಡೆಸುತ್ತಿದ್ದು, ದಾವಣಗೆರೆ ಎಸಿ ಕಚೇರಿಗೆ ಮುತ್ತಿಗೆ ಹಾಕುವ ಪ್ರತಿಭಟನೆಗೆ ಪೊಲೀಸರು ತಡೆಯೊಡ್ಡಿದ್ದಕ್ಕೆ ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ ಕೆಂಡಾಮಂಡಲರಾದ ಘಟನೆ ನಡೆದಿದೆ.
ಹೊನ್ನಾಳಿಯಿಂದ ಆರಂಭವಾದ ಪಾದಯಾತ್ರೆ ವಿವಿಧ ಗ್ರಾಮಗಳ ಮೂಲಕ ಸಾಗಿ ಇಂದು ದಾವಣಗೆರೆಗೆ ತಲುಪಿ ಎಸಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ರೈತರ ನ್ಯಾಯಯುತ ಹೋರಾಟವನ್ನು ಪೊಲೀಸರು ಹತ್ತಿಕ್ಕಲು ಮುಂದಾಗಿರುವುದು ಅತ್ಯಂತ ಖಂಡನೀಯ. ರೈತರ ಧ್ವನಿಯನ್ನು ಪೊಲೀಸ್ ಬಲದಿಂದ ಅಡಗಿಸಲು ಸಾಧ್ಯವಿಲ್ಲ. ರೈತರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.
ಹೊನ್ನಾಳಿ–ನ್ಯಾಮತಿ ತಾಲ್ಲೂಕಿನ ರೈತರ ಕೃಷಿ ಹಾಗೂ ಕುಡಿಯುವ ನೀರಿನ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಕೆರೆಗಳನ್ನು ತುಂಬಿಸುವ ಯೋಜನೆಗೆ ಆದ್ಯತೆ ನೀಡಬೇಕು. ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ ಸರ್ಕಾರ ಕೂಡಲೇ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ನಮ್ಮ ಭಾಗದ ರೈತರ ಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ಕ್ರಮವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ರೈತರ ಪರವಾಗಿ ಸದಾ ಧ್ವನಿ ಎತ್ತುತ್ತೇನೆ. ಅಗತ್ಯವಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರವಾದ ಹೋರಾಟವನ್ನು ರೂಪಿಸಲಾಗುವುದು. ರೈತರ ಹಕ್ಕಿಗಾಗಿ ಹೋರಾಟ. ನ್ಯಾಯ ಸಿಗುವವರೆಗೂ ವಿರಮಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.





Leave a comment