ಬೆಂಗಳೂರು: ಕುಮಾರಣ್ಣನವರೇ, ತಾವೊಬ್ಬ ಕೇಂದ್ರ ಸಚಿವರು, ತೂಕವಿಲ್ಲದ ಮಾತುಗಳನ್ನಾಡಿ ತೂಕ ಕಳೆದುಕೊಳ್ಳಬೇಡಿ, ಕೆಪಿಎಸ್ಸಿ ವಿಷಯವಾಗಿ ತಮ್ಮ ವಿರುದ್ದದ ಆರೋಪಗಳಿಗೆ ತಾರ್ಕಿಕ ಉತ್ತರಗಳನ್ನು ನೀಡುವ ಬದಲಾಗಿ ಪಲಾಯನದ ಪತ್ರಿಕಾಗೋಷ್ಠಿ ನಡೆಸಿದ್ದೀರಿ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
2011ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಆಯ್ಕೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂದು ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನೇಮಕಾತಿ ರದ್ದುಗೊಳಿಸಿ ತೀರ್ಪು ನೀಡಿದ್ದರೂ, ರಾಜ್ಯ ಸರ್ಕಾರದ ಮೇಲ್ಮನವಿಯನ್ನು ವಜಾಗೊಳಿಸಿದ್ದರೂ ಸಹ ದೇವೇಗೌಡರು ಹಾಗೂ ಕುಮಾರಸ್ವಾಮಿಯವರು ಸದರಿ ಅಭ್ಯರ್ಥಿಗಳನ್ನು ನೇಮಕ ಮಾಡುವಂತೆ ಅಂದಿನ ಮುಖ್ಯಮಂತ್ರಿಗಳಿಗೆ ಶಿಫಾರಸ್ಸು ಪತ್ರ ನೀಡಿರುತ್ತಾರೆ ಎಂದು ತಿಳಿಸಿದ್ದಾರೆ.
ಶಿಫಾರಸು ಲಾಬಿ ಮಾಡುವುದರ ಹಿಂದೆ ಕುಮಾರಸ್ವಾಮಿಯವರ ಹಿತಾಸಕ್ತಿ ಏನಿತ್ತು? ಉಚ್ಛ ನ್ಯಾಯಾಲಯವೇ ಈ ಆಯ್ಕೆಯಲ್ಲಿ ಅಕ್ರಮವನ್ನು ಕಂಡಿರುವಾಗ ಕುಮಾರಸ್ವಾಮಿಯವರು ಮತ್ತು ದೇವೇಗೌಡರು ಕ್ಲೀನ್ ಚಿಟ್ ನೀಡಿ ಶಿಫಾರಸು ಮಾಡಿದ್ದೇಕೆ? ಎಂದು ಪ್ರಶ್ನಿಸಿದ್ದಾರೆ.
ಶ್ರೀ ಕುಮಾರಸ್ವಾಮಿರವರೇ, ತಮ್ಮ ಸಂಬಂಧಿಕ ಅಧಿಕಾರಿಗಳ ನೇಮಕಾತಿಯನ್ನು ರದ್ದುಪಡಿಸಿದ್ದರೂ, CAT ಯಿಂದ ತಡೆಯಾಜ್ಞೆ ತಂದು IAS ಗೆ ಬಡ್ತಿ ಕೊಡಿಸಿ ಮುಂದುವರೆಸಿರುವುದು ಯಾರ ಚಿತಾವಣೆಯಿಂದ ಎಂಬುದು ಎಲ್ಲರಿಗೂ ತಿಳಿದಿದೆ.ಇದರ ಬಗ್ಗೆ ತಾವು ಮಾತನಾಡುವುದಿಲ್ಲವೇಕೆ? ಎಂದು ಪ್ರಶ್ನಿಸಿದ್ದಾರೆ.
ಅಕ್ರಮದಲ್ಲಿ ಜೈಲಿಗೆ ಹೋಗಿದ್ದ ಹಿಂದಿನ ಕೆಪಿಎಸ್ಸಿ ಅಧ್ಯಕ್ಷರೊಬ್ಬರನ್ನು ಭೇಟಿಯಾಗಲು ಕುಮಾರಸ್ವಾಮಿಯವರು ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದು ಜಗತ್ತಿಗೆ ತಿಳಿದಿಲ್ಲ ಎಂದುಕೊಂಡಿದ್ದಾರಾ? ಜೈಲಿಗೆ ಹೋಗಿ ಭೇಟಿಯಾಗುವಂತಹದ್ದೇನಿತ್ತು? ತಮ್ಮ ಹೆಸರು ಹೊರಬರದಂತೆ ಮನವಿ ಮಾಡುವುದಕ್ಕಾ, ಬೆದರಿಕೆ ಹಾಕುವುದಕ್ಕಾ? ಕುಮಾರಸ್ವಾಮಿಯವರೇ, ಕೆಪಿಎಸ್ಸಿಯ ಅಕ್ರಮದ ಜಾತಕವನ್ನು ಜಾಲಾಡಿದರೆ ಎಲ್ಲೆಲ್ಲೂ ನಿಮ್ಮ ಕುಂಡಲಿ, ನಕ್ಷತ್ರಗಳೇ ಕಾಣಸಿಗುತ್ತವೆ. ಉಚ್ಛ ನ್ಯಾಯಾಲಯದ ಅದೇಶವನ್ನೇ ಧಿಕ್ಕರಿಸಿ ನೇಮಕಾತಿ ಶಿಫಾರಸು ಮಾಡಿದ್ದವರು, RDPR ಇಲಾಖೆಯ ನೇಮಕಾತಿಯನ್ನು ಪ್ರಶ್ನಿಸುತ್ತಿರುವುದು ಹಾಸ್ಯವಲ್ಲವೇ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.





Leave a comment