ದಾವಣಗೆರೆ: ರಾಜ್ಯದಲ್ಲಿ ತಂಬಾಕುಯುಕ್ತ ಗುಟ್ಕಾ, ಪಾನ್ ಮಸಾಲಾ ನಿಷೇಧ ಮಾಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು. ಟಿ. ಖಾದರ್ ಕ್ರಮಕ್ಕೆ ಪ್ರಕೃತಿ ಸಂರಕ್ಷಣಾ ಸಂಸ್ಥೆ ಸ್ವಾಗತಿಸಿದ್ದು, ಇದೊಂದು ಒಳ್ಳೆಯ ಕಾರ್ಯ ಎಂದು ಬಣ್ಣಿಸಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ರಾಜ್ಯಾಧ್ಯಕ್ಷ ಕೆ. ಬಿ. ಕೊಟ್ರೇಶ್ ಅವರು, ರಾಜ್ಯದಲ್ಲಿ ಗುಟ್ಕಾ ಹಾಗೂ ಇತರೆ ತಂಬಾಕು ಉತ್ಪನ್ನಗಳ ಬಳಕೆಯಿಂದ ಸಾರ್ವಜನಿಕ ಆರೋಗ್ಯದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ಪರಿಗಣಿಸಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಕೈಗೊಂಡಿರುವ ಗುಟ್ಕಾ ನಿಷೇಧ ಕ್ರಮವನ್ನು ಪ್ರಕೃತಿ ಸಂರಕ್ಷಣಾ ಸಂಸ್ಥೆಯು ಸಂಪೂರ್ಣವಾಗಿ ಬೆಂಬಲಿಸುತ್ತದೆ ಎಂದು ತಿಳಿಸಿದರು.
ಗುಟ್ಕಾ ಹಾಗೂ ಇತರೆ ತಂಬಾಕು ಉತ್ಪನ್ನಗಳ ಸೇವನೆಯಿಂದ ಲಕ್ಷಾಂತರ ಜನರು ಕ್ಯಾನ್ಸರ್ ಸೇರಿದಂತೆ ವಿವಿಧ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಒಳಗಾಗುವ ಸಾಧ್ಯತೆ ಇದೆ. ಆದ್ದರಿಂದ, ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಇಂತಹ ಕ್ರಮ ಅತ್ಯಂತ ಅಗತ್ಯವಾಗಿದೆ. ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಲು ಹಾಗೂ ಕ್ಯಾನ್ಸರ್ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲು ಸರ್ಕಾರಗಳು ಕೋಟ್ಯಂತರ ರೂಪಾಯಿಗಳನ್ನು ವೆಚ್ಚ ಮಾಡುತ್ತಿವೆ. ಸಾರ್ವಜನಿಕ ಆರೋಗ್ಯಕ್ಕೆ ಹಾನಿಕಾರಕವಾಗಿರುವ ಧೂಮಪಾನ ಹಾಗೂ ಮದ್ಯಪಾನಕ್ಕೆ ಸಂಬಂಧಿಸಿದ ಉತ್ಪನ್ನಗಳ ಮೇಲೂ ಕರ್ನಾಟಕ ರಾಜ್ಯ ಸರ್ಕಾರವು ಕಟ್ಟುನಿಟ್ಟಿನ ನಿಯಂತ್ರಣ ಹಾಗೂ ಅಗತ್ಯವಿದ್ದಲ್ಲಿ ಸಂಪೂರ್ಣ ನಿಷೇಧ ಜಾರಿಗೊಳಿಸಬೇಕೆಂದು ಮನವಿ ಮಾಡಿದರು.
ಸರ್ಕಾರದ ಗುಟ್ಕಾ ನಿಷೇಧ ಕ್ರಮಕ್ಕೆ ಸಂಸ್ಥೆಯ ವತಿಯಿಂದ ಸಂಪೂರ್ಣ ಸಹಕಾರ ಮತ್ತು ಬೆಂಬಲವನ್ನು ನೀಡುವುದಾಗಿ ಪ್ರಕಟಿಸುತ್ತಿದ್ದೇವೆ. ಇದೇ ಉದ್ದೇಶದಿಂದ “ಗುಟ್ಕಾ ಬ್ಯಾನ್, ನಶಾಮುಕ್ತ ಕರ್ನಾಟಕ” ಅಭಿಯಾನವನ್ನು ಹಮ್ಮಿಕೊಳ್ಳಲು
ಉದ್ದೇಶಿಸಲಾಗಿದೆ. ಈ ಕುರಿತು ಚರ್ಚಿಸಲು ಮಠಾಧೀಶರು, ಪ್ರಗತಿಪರ ಚಿಂತಕರು, ವಿದ್ಯಾರ್ಥಿ ಮುಖಂಡರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು, ಪ್ರಗತಿಪರ ರೈತರು, ಹೋರಾಟಗಾರರು ಹಾಗೂ ಬುದ್ಧಿಜೀವಿಗಳನ್ನು ಸಮಾಲೋಚನಾ
ಸಭೆಗೆ ಆಹ್ವಾನಿಸಲಾಗುತ್ತದೆ ಎಂದು ತಿಳಿಸಿದರು.
ಹಳೆಯ ಪ್ರವಾಸಿ ಮಂದಿರ ರಸ್ತೆಯ ರೋಟರಿ ಬಾಲಭವನದಲ್ಲಿ ಆಗಸ್ಟ್ 4ರಂದು ಬೆಳಿಗ್ಗೆ 11.30 ಕ್ಕೆ ಸಮಾಲೋಚನಾ ಸಭೆ ಏರ್ಪಡಿಸಿದ್ದು ಕರ್ನಾಟಕ ರಾಜ್ಯವನ್ನು ಗುಟ್ಕಾ ಮುಕ್ತ ಹಾಗೂ ನಶಾಮುಕ್ತವಾಗಿಸುವ ನಿಟ್ಟಿನಲ್ಲಿ ಸಲಹೆಗಳನ್ನು ನೀಡಿ, ಈ ಅಭಿಯಾನ ಯಶಸ್ವಿಗೊಳಿಸಲು ಸಹಕರಿಸುವಂತೆ ಕೊಟ್ರೇಶ್ ಅವರು ಮನವಿ ಮಾಡಿದರು.
ಗೋಷ್ಠಿಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ಸುಲ್ತಾನೆಪ್ಪ ಹೆಚ್. ಗೊಣ್ಣಿ, ಪ್ರಧಾನ ಕಾರ್ಯದರ್ಶಿ ಗಿರೀಶ್ ದೇವರಮನೆ, ಕಾನೂನು ಸಲಹೆಗಾರ ಜಿ. ರಮೇಶ್, ಸಹಕಾರ್ಯದರ್ಶಿ ಎನ್. ಆರ್. ಪ್ರವೀಣ್ ಕುಮಾರ್, ಸುನಂದಾ, ಹನುಮಂತಪ್ಪ, ಎಸ್. ಉಮಾದೇವಿ, ನಾಗರಾಜ ಬಿ. ಸುರ್ವೆ, ಪ್ರಸನ್ನ ಬೆಳೆಕೆರೆ, ಕೇಶವ ಎಂ. ಶೇಟ್ ಮತ್ತಿತರರು ಹಾಜರಿದ್ದರು.





Leave a comment