ದಾವಣಗೆರೆ: ರಾಜ್ಯ ಸರ್ಕಾರದ ಗುಟ್ಕಾ ನಿಷೇಧ ನಿರ್ಧಾರ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ನೀರು ಹರಿಸುವ ಆದೇಶದ ವಿರುದ್ಧ ಅಡಿಕೆ ಬೆಳೆಗಾರರು, ರೈತಪರ ಸಂಘಟನೆಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ನೇತೃತ್ವದಲ್ಲಿ ಕರೆ ನೀಡಿರುವ ದಾವಣಗೆರೆ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಕಕ್ತವಾಗಿದೆ.
ಶಾಲಾ ಕಾಲೇಜುಗಳು ಎಂದಿನಂತೆ ಇದ್ದರೆ, ವಾಹನಗಳ ಓಡಾಟ ವಿರಳವಾಗಿತ್ತು. ಬೆಳಿಗ್ಗೆ ಆರು ಗಂಟೆಯಿಂದಲೇ ಪ್ರತಿಭಟನಾಕಾರರು ಅಲ್ಲಲ್ಲಿ ಟೈರ್ ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
ದಾವಣಗೆರೆ ನಗರದಲ್ಲಿ ಇಂದು ಬಂದ್ ಹಿನ್ನೆಲೆಯಲ್ಲಿ ಬೈಕ್ ಗಳಲ್ಲಿ ಸಂಚರಿಸಿ ಅಂಗಡಿ ಮುಂಗಟ್ಟುಗಳನ್ನು ಪ್ರತಿಭಟನಾಕಾರರು ಮುಚ್ಚಿಸಿದರು. ಭದ್ರಾ ಡ್ಯಾಂ ನೀರಿಗಾಗಿ ಹೋರಾಟ ಮಾಡುತ್ತಿದ್ದೇವೆ. ದಯವಿಟ್ಟು ಅಂಗಡಿಗಳನ್ನು ಮುಚ್ಚಿ ಸಹಕರಿಸಿ ಎಂದು ಪ್ರತಿಭಟನಾಕಾರರು ಮನವಿ ಮಾಡಿದರು.
ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರದ ಈ ಜನವಿರೋಧಿ ಹಾಗೂ ರೈತವಿರೋಧಿ ನೀತಿಗಳಿಂದ ಅನ್ನದಾತರ ಬದುಕು ಬೀದಿಗೆ ಬಿದ್ದಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಬಸ್ ನಿಲ್ದಾಣಗಳು, ವಾಣಿಜ್ಯ ಮಳಿಗೆಗಳ ಮಾಲೀಕರು ಕೆಲವೆಡೆ ಸ್ವಯಂಪ್ರೇರಿತರಾಗಿ ಬಂದ್ನಲ್ಲಿ ಪಾಲ್ಗೊಂಡರು. ರೈತರ ನ್ಯಾಯಯುತ ಬೇಡಿಕೆಗಳು ಈಡೇರುವವರೆಗೆ ಹೋರಾಟ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.





Leave a comment