ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದೇಶದ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯ ಕೋರಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಗೂ ಗುಣಮಟ್ಟದ ಶಿಕ್ಷಣ ಮತ್ತು ಸಮಾನ ಅವಕಾಶಗಳನ್ನು ಒದಗಿಸುವ ಶಿಕ್ಷಣ ವ್ಯವಸ್ಥೆಯನ್ನು ಜಂಟಿಯಾಗಿ ನಿರ್ಮಿಸುವಂತೆ ಕರೆ ನೀಡಿದ್ದಾರೆ.
ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ದೇಶದ ಭವಿಷ್ಯದ ಪೀಳಿಗೆಯನ್ನು ರೂಪಿಸುವಲ್ಲಿ ಮತ್ತು ಅವರಿಗೆ ಸರಿಯಾದ ಮಾರ್ಗದರ್ಶನ ನೀಡುವಲ್ಲಿ ಶಿಕ್ಷಕರ ಕೊಡುಗೆ ಅತ್ಯಂತ ಅಮೂಲ್ಯವಾಗಿದೆ ಎಂದು ಬಣ್ಣಿಸಿದ್ದಾರೆ.
“ತಮ್ಮ ಜ್ಞಾನ, ಸೇವೆ ಮತ್ತು ಸಮರ್ಪಣಾ ಮನೋಭಾವದ ಮೂಲಕ ನೀವು ವಿದ್ಯಾರ್ಥಿಗಳ ಭವಿಷ್ಯವನ್ನು ತಿದ್ದಿ ತೀಡುತ್ತಿದ್ದೀರಿ. ಇಂದಿನ ಭಾರತದ ಶಿಕ್ಷಣ ವ್ಯವಸ್ಥೆಯು ನಮ್ಮ ಮುಂದೆ ಹಲವಾರು ಗಂಭೀರ ಪ್ರಶ್ನೆಗಳನ್ನು ಎತ್ತುತ್ತಿದೆ. ಪ್ರತಿಯೊಬ್ಬ ಮಗುವಿಗೆ ಪ್ರಕಾಶಮಾನವಾದ ಭವಿಷ್ಯವನ್ನು ಕಲ್ಪಿಸಲು ನಾವೆಲ್ಲರೂ ಒಟ್ಟಾಗಿ ಶ್ರಮಿಸಬೇಕಾಗಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹಿರಿಯ ನಾಯಕ ಜೈರಾಮ್ ರಮೇಶ್ ಅವರು ಭಾರತದ ಎರಡನೇ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ನೆನಪಿನಲ್ಲಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಖರ್ಗೆ ಅವರು, “ಶಿಕ್ಷಕರು ಮೌಲ್ಯಗಳನ್ನು ಬಿತ್ತಿ ದೇಶದ ಬಲವಾದ ಬುನಾದಿಯನ್ನು ನಿರ್ಮಿಸುತ್ತಾರೆ” ಎಂದು ಶ್ಲಾಘಿಸಿದರು.





Leave a comment