Home ದಾವಣಗೆರೆ ಡಿಜೆ ಸೌಂಡ್‌ಗೆ ಬ್ರೇಕ್, ಜಾನಪದ ಕಲೆಗೆ ಪ್ರೋತ್ಸಾಹ: ದಾವಣಗೆರೆಯಲ್ಲಿ ಗಣೇಶ ಹಬ್ಬಕ್ಕೆ ಹೈಟೆಕ್ ಡ್ರೋನ್ ಕಾವಲು!
ದಾವಣಗೆರೆಬೆಂಗಳೂರು

ಡಿಜೆ ಸೌಂಡ್‌ಗೆ ಬ್ರೇಕ್, ಜಾನಪದ ಕಲೆಗೆ ಪ್ರೋತ್ಸಾಹ: ದಾವಣಗೆರೆಯಲ್ಲಿ ಗಣೇಶ ಹಬ್ಬಕ್ಕೆ ಹೈಟೆಕ್ ಡ್ರೋನ್ ಕಾವಲು!

Share
ದಾವಣಗೆರೆ
Share

ದಾವಣಗೆರೆ: ಭಾರತೀಯ ಸಂಸ್ಕೃತಿ ಮತ್ತು ಐಕ್ಯತೆಯ ಪ್ರತೀಕವಾಗಿರುವ ಗಣೇಶೋತ್ಸವವನ್ನು ದಾವಣಗೆರೆ ಜಿಲ್ಲೆಯಾದ್ಯಂತ ಪ್ರತಿಯೊಬ್ಬರೂ ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸಬೇಕು. ಹಬ್ಬದ ಆಚರಣೆಯ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರಲು ಯತ್ನಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ  ಶೇಖರ್ ಎಚ್. ಟಿ. ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ನಾಗರಿಕ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಡಿಜೆ ಬದಲು ಜಾನಪದ ಕಲೆಗೆ ಆದ್ಯತೆ

ಗಣೇಶ ಮೂರ್ತಿ ಪ್ರತಿಷ್ಠಾಪನೆಯಿಂದ ಹಿಡಿದು ವಿಸರ್ಜನೆ ಮೆರವಣಿಗೆ ಮುಗಿಯುವವರೆಗೂ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ವ್ಯಾಪಕ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗುವುದು. ವಿಸರ್ಜನಾ ಸ್ಥಳಗಳಲ್ಲಿ ಬ್ಯಾರಿಕೇಡ್, ಸೂಕ್ತ ಬೆಳಕಿನ ವ್ಯವಸ್ಥೆ, ಕುಡಿಯುವ ನೀರು ಹಾಗೂ ಸುರಕ್ಷತೆಗಾಗಿ ಈಜುಗಾರರನ್ನು (ಸ್ವಿಮ್ಮರ್ಸ್) ನಿಯೋಜಿಸಲಾಗುತ್ತದೆ. ಮೆರವಣಿಗೆಯ ಸಮಯದಲ್ಲಿ ಲಕ್ಷಾಂತರ ರೂಪಾಯಿ ವ್ಯಯಿಸಿ ಡಿಜೆ ಸೌಂಡ್ ಸಿಸ್ಟಮ್ ಬಳಸುವ ಬದಲು, ನಮ್ಮ ನಾಡಿನ ಸಾಂಪ್ರದಾಯಿಕ ಕಲೆಗಳಾದ ಡೊಳ್ಳು ಕುಣಿತ, ಚಂಡೆ, ಮದ್ದಳೆ ಹಾಗೂ ವೀರಗಾಸೆಯಂತಹ ಜಾನಪದ ಕಲಾತಂಡಗಳಿಗೆ ಪ್ರೋತ್ಸಾಹ ನೀಡಬೇಕೆಂದು ಸಾರ್ವಜನಿಕರಲ್ಲಿ ಅವರು ಮನವಿ ಮಾಡಿದರು.

ಹಳೆಯ ಸಾಂಪ್ರದಾಯಿಕ ಮಾರ್ಗಗಳಲ್ಲೇ ಮೆರವಣಿಗೆ

ಇಲಾಖೆಯ ಅಧಿಕೃತ ದಾಖಲೆಗಳಲ್ಲಿ ನಿಗದಿಯಾಗಿರುವ ಹಳೆಯ ಸಾಂಪ್ರದಾಯಿಕ ಮಾರ್ಗಗಳಲ್ಲೇ ಗಣೇಶ ವಿಸರ್ಜನೆ ಮೆರವಣಿಗೆ ಸಾಗಬೇಕು. ಯಾವುದೇ ಕಾರಣಕ್ಕೂ ಹೊಸ ಮಾರ್ಗಗಳನ್ನು ಬದಲಾಯಿಸಲು ಅವಕಾಶ ನೀಡುವುದಿಲ್ಲ. ಹಿಂದೆ ನಿಯಮ ಉಲ್ಲಂಘಿಸಿ ಹೊಸ ಮಾರ್ಗಗಳಲ್ಲಿ ತೆರಳಿದಾಗ ಘರ್ಷಣೆಗಳು ನಡೆದ ಉದಾಹರಣೆಗಳಿದ್ದು, ಈ ಬಾರಿ ಅಂತಹ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಉನ್ನತ ತಂತ್ರಜ್ಞಾನ ಹಾಗೂ ಡ್ರೋನ್ ಕಾವಲು

ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಮತ್ತು ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗುತ್ತಿದೆ. ಮೆರವಣಿಗೆಯ ಸಂಪೂರ್ಣ ಚಲನವಲನಗಳ ಮೇಲೆ ಕಣ್ಣಿಡಲು ಸುಮಾರು 1.5 ಕಿಲೋಮೀಟರ್ ದೂರದ ದೃಶ್ಯಗಳನ್ನು ನಿಖರವಾಗಿ ಸೆರೆಹಿಡಿಯಬಲ್ಲ 4 ಹೈಟೆಕ್ ಡ್ರೋನ್ ಕ್ಯಾಮೆರಾಗಳನ್ನು ಬಳಸಲಾಗುವುದು.

ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣು

ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ವದಂತಿಗಳನ್ನು ತಡೆಯಲು ಪ್ರತಿಯೊಂದು ಪೊಲೀಸ್ ಠಾಣೆ ಮಟ್ಟದಲ್ಲೂ ‘ಸೋಷಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್’ ಆರಂಭಿಸಲಾಗಿದೆ. ವಾಟ್ಸಾಪ್, ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಮ್‌ಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಪೋಸ್ಟ್, ಸ್ಟೇಟಸ್ ಅಥವಾ ಸುಳ್ಳು ವದಂತಿಗಳನ್ನು ಹರಡಿದರೆ ತಕ್ಷಣ ಪ್ರಕರಣ ದಾಖಲಿಸಿ, ತಪ್ಪಿತಸ್ಥರನ್ನು ಬಂಧಿಸಲಾಗುವುದು ಎಂದರು.

ಗಣೇಶ ಪಂಡಾಲ್ ಆಯೋಜಕರು ಕಡ್ಡಾಯವಾಗಿ ಪೊಲೀಸ್ ಮತ್ತು ಸ್ಥಳೀಯ ಆಡಳಿತದಿಂದ ಪೂರ್ವ ಅನುಮತಿ ಪಡೆಯಬೇಕು. ಪ್ರತಿಯೊಬ್ಬರೂ ಕಾನೂನಿನ ಚೌಕಟ್ಟಿನಲ್ಲಿ ನಡೆದುಕೊಂಡು, ಪೊಲೀಸ್ ಇಲಾಖೆಯ ಮಾರ್ಗದರ್ಶನಗಳನ್ನು ಪಾಲಿಸಿ ಗಣೇಶೋತ್ಸವವನ್ನು ಯಶಸ್ವಿಗೊಳಿಸಬೇಕೆಂದು ಕೋರಿದರು.

ಈ ಸಭೆಯಲ್ಲಿ ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ಪರಮೇಶ್ವರ್ ಹೆಗಡೆ, ಮಹಾನಗರ ಪಾಲಿಕೆ ಆಯುಕ್ತ ಮಹಾಂತೇಶ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್ ಸೇರಿದಂತೆ ಹಲವು ಜಿಲ್ಲಾ ಮತ್ತು ತಾಲೂಕು ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles