ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸುವೇಂದು ಅಧಿಕಾರಿ ನೇತೃತ್ವದ ಸರ್ಕಾರ ರಾಜ್ಯದಾದ್ಯಂತ ಸಮೀಕ್ಷೆ ನಡೆಸಿದ ಬಳಿಕ 252 ಮದರಸಾಗಳನ್ನು ಮುಚ್ಚಲು ಆದೇಶ ನೀಡಿದೆ. ಇದಲ್ಲದೆ, ಸುಮಾರು 100 ಮದರಸಾಗಳಿಗೆ ಶೋಕಾಸ್ (ಕಾರಣ ಕೇಳಿ) ನೋಟಿಸ್ ಜಾರಿ ಮಾಡಿದೆ.
ರಾಜ್ಯದ ಅಲ್ಪಸಂಖ್ಯಾತ ವ್ಯವಹಾರಗಳು ಮತ್ತು ಮದರಸಾ ಶಿಕ್ಷಣ ಸಚಿವ ಕ್ಷುದಿರಾಮ್ ಟುಡು ಈ ಬಗ್ಗೆ ಮಾಹಿತಿ ನೀಡಿದ್ದು, ಜೂನ್ ಆರಂಭದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮದರಸಾಗಳ ಮೂಲಸೌಕರ್ಯ, ಅನುಮೋದನೆ ಸ್ಥಿತಿ ಮತ್ತು ನಿರ್ವಹಣಾ ವ್ಯವಸ್ಥೆಗಳನ್ನು ನಿರ್ಣಯಿಸಲು ಸಮೀಕ್ಷೆ ನಡೆಸಲಾಗಿತ್ತು ಎಂದಿದ್ದಾರೆ. ಸೂಕ್ತ ಅನುಮತಿ ಮತ್ತು ಮೂಲಸೌಕರ್ಯಗಳಿಲ್ಲದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪಂಚಾಯತ್ ರಾಜ್ ಸಚಿವ ದಿಲೀಪ್ ಘೋಷ್ ಮಾತನಾಡಿ, “ಕೆಲವು ಮದರಸಾಗಳ ಬಗ್ಗೆ ಪದೇ ಪದೇ ದೂರುಗಳು ಕೇಳಿಬರುತ್ತಿದ್ದವು. ಉಗ್ರಗಾಮಿ ಅಥವಾ ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪದ ಮೇಲೆ ಬಂಧಿತರಾದ ಕೆಲವರು ಇಂತಹ ಸಂಸ್ಥೆಗಳಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿರುವುದು ಕಂಡುಬಂದಿದೆ” ಎಂದು ಗಂಭೀರ ಆರೋಪ ಮಾಡಿದ್ದಾರೆ. ಆದರೆ, ಕಾನೂನಿನ ಪ್ರಕಾರ ಮತ್ತು ಸರ್ಕಾರದ ಅನುಮತಿಯೊಂದಿಗೆ ನಡೆಯುತ್ತಿರುವ ಮದರಸಾಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಮತ್ತೊಂದೆಡೆ, ವಿರೋಧ ಪಕ್ಷವಾದ ತೃಣಮೂಲ ಕಾಂಗ್ರೆಸ್ನ ಶಾಸಕ ಕುನಾಲ್ ಘೋಷ್ ಸರ್ಕಾರದ ಈ ನಡೆಯನ್ನು ಟೀಕಿಸಿದ್ದು, “ಎಲ್ಲಾ ಮದರಸಾಗಳನ್ನು ಒಂದೇ ತಕ್ಕಡಿಯಲ್ಲಿ ತೂಗಬಾರದು” ಎಂದು ಎಚ್ಚರಿಸಿದ್ದಾರೆ. ಶೋಕಾಸ್ ನೋಟಿಸ್ಗಳಿಗೆ ಬರುವ ಉತ್ತರಗಳನ್ನು ಪರಿಶೀಲಿಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ





Leave a comment