Home ದಾವಣಗೆರೆ ಸರ್ವರ್ ಸಮಸ್ಯೆಗೆ ಕಂಗಾಲಾಗಬೇಡಿ: ರೇಷನ್ ಕಾರ್ಡ್ ಇ-ಕೆವೈಸಿ ದಿನಾಂಕ ವಿಸ್ತರಿಸಿ ಸರ್ಕಾರ ಆದೇಶ
ದಾವಣಗೆರೆನವದೆಹಲಿಬೆಂಗಳೂರು

ಸರ್ವರ್ ಸಮಸ್ಯೆಗೆ ಕಂಗಾಲಾಗಬೇಡಿ: ರೇಷನ್ ಕಾರ್ಡ್ ಇ-ಕೆವೈಸಿ ದಿನಾಂಕ ವಿಸ್ತರಿಸಿ ಸರ್ಕಾರ ಆದೇಶ

Share
ರೇಷನ್ ಕಾರ್ಡ್
Share

ಬೆಂಗಳೂರು: ರಾಜ್ಯದಲ್ಲಿ ಪಡಿತರ ಚೀಟಿ ಇ-ಕೆವೈಸಿ (e-KYC) ಪ್ರಕ್ರಿಯೆಗೆ ಎದುರಾಗಿದ್ದ ತಾಂತ್ರಿಕ ತೊಡಕುಗಳು ಹಾಗೂ ಸರ್ವರ್ ಮಂದಗತಿಯಿಂದಾಗಿ ಸಾರ್ವಜನಿಕರು ಅನುಭವಿಸುತ್ತಿದ್ದ ತೊಂದರೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಇ-ಕೆವೈಸಿ ಪೂರ್ಣಗೊಳಿಸಲು ಇದ್ದ ಅಂತಿಮ ಗಡುವನ್ನು ಅಕ್ಟೋಬರ್ 20, 2026 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ. ಇದರಿಂದ ರೇಷನ್ ಕಾರ್ಡ್ ಹೊಂದಿರುವವರು ನಿರಾಳರಾಗುವಂತೆ ಮಾಡಿದೆ. 

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ರಿಜ್ವಾನ್ ಅರ್ಷದ್ ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದು, “ಸರ್ವರ್ ಸಮಸ್ಯೆಯಿಂದಾಗಿ ನ್ಯಾಯಬೆಲೆ ಅಂಗಡಿಗಳ ಮುಂದೆ ಸಾರ್ವಜನಿಕರು ಪರದಾಡುತ್ತಿರುವ ವಿಚಾರ ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳ ಮೂಲಕ ನನ್ನ ಗಮನಕ್ಕೆ ಬಂದಿದೆ. ಜನರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸುವುದು ನಮ್ಮ ಸರ್ಕಾರದ ಆದ್ಯ ಕರ್ತವ್ಯ. ತಾಂತ್ರಿಕ ಕಾರಣಗಳಿಂದಾಗಿ ಯಾವುದೇ ಬಡ ಕುಟುಂಬವೂ ತನ್ನ ಹಕ್ಕಿನ ಆಹಾರಧಾನ್ಯದಿಂದ ವಂಚಿತರಾಗಬಾರದು ಎಂಬ ದೃಢ ನಿಲುವಿನೊಂದಿಗೆ ಇ-ಕೆವೈಸಿ ಗಡುವನ್ನು ವಿಸ್ತರಿಸಲಾಗಿದೆ” ಎಂದು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯಾದ್ಯಂತ ಪಡಿತರ ಚೀಟಿದಾರರಿಗೆ ಐದು ವರ್ಷಕ್ಕೊಮ್ಮೆ ಕಡ್ಡಾಯವಾಗಿ ಮಾಡಿಸಬೇಕಾದ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸರ್ಕಾರ ಸೆಪ್ಟೆಂಬರ್ 30ರವರೆಗೆ ಗಡುವು ನೀಡಿತ್ತು. ಆದರೆ, ರಾಜ್ಯದ ಲಕ್ಷಾಂತರ ಫಲಾನುಭವಿಗಳು ಒಂದೇ ಬಾರಿಗೆ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಇ-ಕೆವೈಸಿ ಮಾಡಿಸಲು ಮುಂದಾದ ಕಾರಣ ಆಹಾರ ಇಲಾಖೆಯ ಸರ್ವರ್ ಸಂಪೂರ್ಣ ಮಂದಗತಿಯಲ್ಲಿ ಸಾಗಿತ್ತು. ಇದರಿಂದಾಗಿ ಪ್ರತಿದಿನ ನ್ಯಾಯಬೆಲೆ ಅಂಗಡಿಗಳ ಮುಂದೆ ಸಾರ್ವಜನಿಕರು, ವಿಶೇಷವಾಗಿ ದಿನಗೂಲಿ ಕಾರ್ಮಿಕರು ಹಾಗೂ ವೃದ್ಧರು ತಾಸುಗಟ್ಟಲೆ ಸಾಲಿನಲ್ಲಿ ನಿಂತು ಕಂಗಾಲಾಗಿದ್ದರು.

ಅಲ್ಲದೆ, ಸರ್ವರ್ ಸಮಸ್ಯೆಯನ್ನು ತಕ್ಷಣ ಬಗೆಹರಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಫಲಾನುಭವಿಗಳು ಯಾವುದೇ ಗೊಂದಲವಿಲ್ಲದೆ ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು ಎಂದು ಸಚಿವರು ಮನವಿ ಮಾಡಿದ್ದಾರೆ.

ಸಾರ್ವಜನಿಕರು ಮತ್ತು ನ್ಯಾಯಬೆಲೆ ಅಂಗಡಿಯ ಮಾಲೀಕರಿಂದ ವ್ಯಾಪಕ ದೂರುಗಳು ಕೇಳಿಬಂದಿದ್ದವು. ಸಾರ್ವಜನಿಕರ ಈ ಸಂಕಷ್ಟವನ್ನು ಪರಿಗಣಿಸಿದ ಆಹಾರ ಹಾಗೂ ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಅವರು ಇಲಾಖೆಯ ಅಧಿಕಾರಿಗಳು ಮತ್ತು ಐಟಿ ತಂಡದೊಂದಿಗೆ ತುರ್ತು ಪರಿಶೀಲನೆ ನಡೆಸಿದರು. ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ಉಚಿತ ಪಡಿತರ ಸಿಗಬೇಕು, ಸರ್ವರ್ ದೋಷದಿಂದಾಗಿ ಯಾರೊಬ್ಬರೂ ಆಹಾರಧಾನ್ಯದಿಂದ ವಂಚಿತರಾಗಬಾರದು ಎಂಬ ತೀರ್ಮಾನಕ್ಕೆ ಬಂದ ಸಚಿವರು, ಇ-ಕೆವೈಸಿ ಮಾಡಿಸಲು ಅಕ್ಟೋಬರ್ 20ರವರೆಗೆ ಹೆಚ್ಚುವರಿ ಕಾಲಾವಕಾಶ ನೀಡಿದ್ದಾರೆ. ಈ ನಿರ್ಧಾರದಿಂದಾಗಿ ರಾಜ್ಯದ ಕೋಟ್ಯಂತರ ಪಡಿತರ ಚೀಟಿದಾರರು ನಿಟ್ಟುಸಿರು ಬಿಡುವಂತಾಗಿದೆ.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles