ದಾವಣಗೆರೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ದಾವಣಗೆರೆಯ ವಿನೋಬನಗರದ ಖಾಸಗಿ ಹೋಟೆಲ್ ಒಂದರಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಯುವಕರ್ತರು ಪಕೋಡ ತಯಾರಿಸಿ, ಸಾರ್ವಜನಿಕರಿಗೆ ಮಾರಾಟ ಮಾಡುವ ಮೂಲಕ ‘ರಾಷ್ಟ್ರೀಯ ನಿರುದ್ಯೋಗ ದಿವಸ್’ ಆಚರಿಸಿ ಆಕ್ರೋಶ ವ್ಯಕ್ತಪಡಿಸಿದರು.
ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಈ ವಿಶಿಷ್ಟ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗ ನೀತಿ ಹಾಗೂ ಆಡಳಿತ ವೈಫಲ್ಯದ ವಿರುದ್ಧ ತೀವ್ರ ವಾಗ್ದಾಳಿ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ದಿನೇಶ್ ಕೆ. ಶೆಟ್ಟಿ ಅವರು, “ನಮ್ಮ ದೇಶದ ಅತಿದೊಡ್ಡ ಶಕ್ತಿ ಎಂದರೆ ಅದು ಯುವಜನತೆ. ಆದರೆ, ಇಂದು ಅದೇ ಯುವಕರು ಒಂದು ಸಣ್ಣ ಉದ್ಯೋಗಕ್ಕಾಗಿ ಬೀದಿ ಬೀದಿ ಅಲೆಯುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ,” ಎಂದರು.
ಮುಂದುವರಿದು ಮಾತನಾಡಿದ ಅವರು, “ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮುನ್ನ ‘ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ’ ಎಂದು ಮೋದಿ ಸರ್ಕಾರ ಭರವಸೆ ನೀಡಿತ್ತು. ಆದರೆ, ಅಧಿಕಾರಕ್ಕೆ ಬಂದು ವರ್ಷಗಳು ಕಳೆದರೂ ಯುವಕರಿಗೆ ಕೆಲಸ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ನಿರುದ್ಯೋಗಿಗಳಿಗೆ ಪರಿಹಾರ ನೀಡುವ ಬದಲು ‘ಪಕೋಡ ಮಾರಿ, ಚಹಾ ಮಾರಿ’ ಎಂದು ಹೇಳಿಕೆ ನೀಡುತ್ತಿರುವುದು ದೇಶದ ಯುವ ಸಮುದಾಯಕ್ಕೆ ಮಾಡುತ್ತಿರುವ ದೊಡ್ಡ ಅವಮಾನ. ಕೇಂದ್ರ ಸರ್ಕಾರ ತಕ್ಷಣವೇ ಯುವಕರಿಗೆ ಕೆಲಸ ಕೊಡಬೇಕು, ಇಲ್ಲದಿದ್ದರೆ ಗೌರವಯುತವಾಗಿ ರಾಜೀನಾಮೆ ನೀಡಬೇಕು,” ಎಂದು ಉಗ್ರವಾಗಿ ಆಗ್ರಹಿಸಿದರು.
ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿದ ಮುಖಂಡರು:
ಹೋಟೆಲ್ ಮುಂಭಾಗದಲ್ಲಿ ಸ್ವತಃ ಪಕೋಡ ಕರಿದು, ಸಾರ್ವಜನಿಕರಿಗೆ ಮಾರಾಟ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. ಈ ಆಚರಣೆ ಹಾಗೂ ಪ್ರತಿಭಟನಾ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಎ. ನಾಗರಾಜ್, ಉಮೇಶ್, ಯೂಥ್ ಕಾಂಗ್ರೆಸ್ ಅಧ್ಯಕ್ಷ ವರುಣ್ ಬೆಣ್ಣೆಹಳ್ಳಿ, ಪ್ರಮುಖರಾದ ರವಿ ಎಸ್., ಸುರೇಶ್ ಉತ್ತಂಗಿ, ದಾನಪ್ಪ, ಮುಜಾಹಿದ್, ಸತೀಶ್, ಯುವರಾಜ್ ಸೇರಿದಂತೆ ಹಲವಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.





Leave a comment