SUDDIKSHANA KANNADA NEWS/ DAVANAGERE/ DATE-15-05-2025
ದಾವಣಗೆರೆ: ನಗರದ ಹದಡಿ ರಸ್ತೆಯ ಕ್ಲಬ್ ನಲ್ಲಿ ರೌಡಿಶೀಟರ್ ಕಣುಮಾ ಅಲಿಯಾಸ್ ಸಂತೋಷ್ ಕುಮಾರ್ ಹತ್ಯೆ ಬಳಿಕ ಪೊಲೀಸರು ರೌಡಿಶೀಟರ್ ಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಬೆಳ್ಳಂಬೆಳಿಗ್ಗೆ ದಾಳಿ ಮಾಡಿ ಶಾಕ್ ಕೊಟ್ಟಿದ್ದಾರೆ.
ರೌಡಿಶೀಟರ್ ಗಳ ಮನೆಗೆ ದಿಢೀರ್ ಆಗಿ ಭೇಟಿ ನೀಡಿದ ಪೊಲೀಸರು, ರೌಡಿಗಳ ಚಲನವಲನ, ಮನೆಯನ್ನು ಶೋಧಿಸಿದರು. ರೌಡಿಶೀಟರ್ ಗಳು ಪೊಲೀಸರು ಮನೆಗೆ ಬರುತ್ತಿದ್ದಂತೆ ಶಾಕ್ ಆದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರ ನಿರ್ದೇಶನದಂತೆ ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ವಿಜಯ್ ಕುಮಾರ್ ಎಂ. ಸಂತೋಷ್, ಜಿ. ಮಂಜುನಾಥರ ಮಾರ್ಗದರ್ಶನದಲ್ಲಿ ಸಹಾಯಕ ಪೊಲೀಸ್ ಅಧೀಕ್ಷಕ ಸ್ಯಾಮ್ ವರ್ಗೀಸ್ ಹಾಗೂ ನಗರ ಡಿವೈಎಸ್ಪಿ ಶರಣ ಬಸವೇಶ್ವರ ಬಿ. ಅವರ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ತಂಡಗಳು ದಾಳಿ ನಡೆಸಿ, ರೌಡಿಶೀಟರ್ ಗಳಿಗೆ ಎಚ್ಚರಿಕೆ ನೀಡಿದವು.
ಇತ್ತೀಚಿಗೆ ದಾವಣಗೆರೆಯಲ್ಲಿ ನಡೆದ ಕೊಲೆ ಪ್ರಕರಣ, ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಅಪರಾಧ ತಡೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ರೌಡಿಶೀಟರ್ ಗಳ ಮನೆಗಳಿಗೆ ದಿಢೀರನೆ ಭೇಟಿ ನೀಡಿ
ಪೊಲೀಸರು ಪರಿಶೀಲಿಸಿದರು. ಒಟ್ಟು52 ರೌಡಿಶೀಟರ್ ಮನೆಗಳಿಗೆ ಭೇಟಿ ನೀಡಿದ್ದು, ಈ ವೇಳೆ ಯಾವುದೇ ಕಾನೂನು ಬಾಹಿರವಾಗಿ ವಸ್ತುಗಳು ಕಂಡು ಬಂದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಭೇಟಿ ನೀಡಿದ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಯಾವುದೇ ಕಾನೂನು ಬಾಹಿರ ಹಾಗೂ ಕಾನೂನು ಸುವ್ಯವಸ್ಥೆ ಗೆ ಧಕ್ಕೆ ಬರುವಂತಹ ಕೃತ್ಯಗಳಲ್ಲಿ ತೊಡಗಬಾರದು ಎಂದು ಎಚ್ಚರಿಕೆ ನೀಡಿದರು. ಸೂಕ್ತ ಸೂಚನೆಗಳನ್ನು ನೀಡಿದ್ದಾರೆ.
ಬಾಲ ಬಿಚ್ಚಿದರೆ ಹುಷಾರ್ ಎಂಬ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ.