SUDDIKSHANA KANNADA NEWS/ DAVANAGERE/ DATE:30-01-2025
ಬೆಂಗಳೂರು: ಸಾಲಗಾರರು ಎದುರಿಸುತ್ತಿರುವ ಕಿರುಕುಳವನ್ನು ತಪ್ಪಿಸಲು ಹಾಗೂ ಸಾಲ ನೀಡಿದವರು ಬಲವಂತದ ವಸೂಲಿ ಮಾಡುವುದನ್ನು ನಿಯಂತ್ರಿಸುವ ಉದ್ದೇಶದಿಂದ ಬಲಿಷ್ಠ ಕಾಯ್ದೆ ರಚಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೃಷ್ಣಾದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಉನ್ನತ ಮಟ್ಟದ ಸಭೆಯಲ್ಲಿ ಸಿಎಂ ಈ ವಿಷಯ ತಿಳಿಸಿದ್ದಾರೆ.
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ತಪ್ಪಿಸುವ ಉದ್ದೇಶದಿಂದ ರಚಿಸಲಾಗಿರುವ ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು ಮತ್ತೊಮ್ಮೆ ಪರಿಶೀಲಿಸಿ, ಬಲಿಷ್ಠ ಕಾಯ್ದೆಯನ್ನು ಆದಷ್ಟು ಬೇಗನೆ ಜಾರಿ ಮಾಡಲು ನಿರ್ಧರಿಸಲಾಗಿದೆ. ಈ ಕುರಿತು ಕಾನೂನು ಇಲಾಖೆ, ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳ ತಂಡ ರಚಿಸಲಾಗುವುದು ಎಂದರು
ಕಾಯ್ದೆ ಸಂಪೂರ್ಣ ಸಂವಿಧಾನಬದ್ಧವಾಗಿದ್ದು, ಯಾವುದೇ ಲೋಪದೋಷಗಳನ್ನು ಹೊಂದಿರಬಾರದು. ಕಾಯ್ದೆಯಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ. ಒಂಬುಡ್ಸ್ಮೆನ್ ಗಳ ನೇಮಕ ಮಾಡಲಾಗುವುದು. ಅಮಾನವೀಯವಾಗಿ
ಬಲವಂತದ ಸಾಲ ವಸೂಲಾತಿ ಮಾಡುವವರಿಗೆ ಜಾಮೀನುರಹಿತ ಪ್ರಕರಣ ದಾಖಲು ಸೇರಿದಂತೆ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸುವ ಅವಕಾಶ ಸಿಗಲಿದೆ. ನೋಂದಣಿಯಾಗದ ಲೇವಾದೇವಿಗಾರರ ಕಿರುಕುಳವನ್ನು ತಪ್ಪಿಸಲು ಕಠಿಣ ಕಾನೂನು ಜಾರಿ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಪ್ರಸ್ತುತವಿರುವ ಕಾನೂನಿನಲ್ಲಿ ಮೈಕ್ರೋ ಫೈನಾನ್ಸ್ಗಳ ಕಿರುಕುಳ ನಿಯಂತ್ರಿಸಲು ಹಲವು ಅವಕಾಶಗಳಿದ್ದು, ಅದನ್ನು ಯಾಕೆ ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿಲ್ಲ. ದೂರು ದಾಖಲು ಮಾಡುವ ತನಕ ಕಾಯದೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು ಎಂದು ಸೂಚಿಸಿದರು.