SUDDIKSHANA KANNADA NEWS/ DAVANAGERE/ DATE:31-10-2024
ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳು, ಯೋಜನೆಗಳನ್ನು ನಡೆಸಲು ಹೆಚ್ಚಿನ ಅನುದಾನ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದು, ಪೂರಕವಾಗಿ ಸ್ಪಂದಿಸಿರುವ ಸಿಎಂ ಅವರು ಬಜೆಟ್ ನಲ್ಲಿ ವಿಶೇಷವಾಗಿ ಪ್ರಾಧಾನ್ಯತೆ ನೀಡುವ ವಿಶ್ವಾಸ ಇದೆ ಎಂದು ಮಹಾನಗರ ಪಾಲಿಕೆ ಮೇಯರ್ ಕೆ. ಚಮನ್ ಸಾಬ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಬಜೆಟ್ ನಲ್ಲಿ ದಾವಣಗೆರೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಲಾಗಿದ್ದು, ಬಜೆಟ್ ನಲ್ಲಿ ಬಜೆಟ್ ಗೆ ಹೆಚ್ಚಿನ ಆದ್ಯತೆ ಸಿಗುವ ನಂಬಿಕೆ ಇದೆ ಎಂದು ಹೇಳಿದರು.
ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕರ ಅನುಕೂಲಕ್ಕೆ ಸಹಾಯ ಕೇಂದ್ರ ಆರಂಭಿಸುವಂತೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಹೆಲ್ಪ್ ಲೈನ್ ಡೆಸ್ಕ್ ಕಾರ್ಯಾರಂಭ ಶುರು ಮಾಡಲಾಗಿದೆ. ಸಾರ್ವಜನಿಕರು ಅನುಕೂಲ ಪಡೆದುಕೊಳ್ಳಬಹುದು. ನಗರದಲ್ಲಿ ಸ್ವಚ್ಛತೆ, ವಿದ್ಯುತ್ ದೀಪ, ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಪಾಲಿಕೆ ವ್ಯಾಪ್ತಿಯಲ್ಲಿನ ಹೊರವಲಯದ ಬಡಾವಣೆಗಳಲ್ಲಿನ ಸಮಸ್ಯೆಗಳು ಗಮನಕ್ಕೆ ಬಂದಿವೆ. ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳುವ ಕುರಿತಂತೆ ಸುದೀರ್ಘವಾಗಿ ಚರ್ಚೆ ಮಾಡಲಾಗಿದ್ದು, ಸಚಿವರೊಂದಿಗೆ ಚರ್ಚೆ
ನಡೆಸಿ ಕ್ರಮ ಕೈಗೊಳ್ಳಲಾಗುವುದು. ದಾವಣಗೆರೆ ದಕ್ಷಿಣ ಮತ್ತು ಉತ್ತರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಹಲವು ಬಡಾವಣೆಗಳಲ್ಲಿಯೂ ಸಮಸ್ಯೆಗಳಿರುವುದು ಗಮನಕ್ಕೆ ಬಂದಿದೆ. ಇದಕ್ಕಾಗಿ 200 ಕೋಟಿ ರೂಪಾಯಿ ವಿಶೇಷ ಅನುದಾನದ
ಅವಶ್ಯಕತೆ ಇದೆ ಎಂದು ಚಮನ್ ಸಾಬ್ ತಿಳಿಸಿದರು.
ಒಳಚರಂಡಿ ವಲಯ 2 ರಲ್ಲಿ ಎಸ್ ಟಿ ಪಿ ಘಟಕ ನಿರ್ಮಾಣ ಮಾಡಬೇಕಿದೆ. ಕರ್ನಾಟಕ ರಾಜ್ಯ ನೀರು ಸರಬರಾಜು ಮತ್ತು ಒಳಚರಂಡಿ ಸಮೀಕ್ಷೆ ನಡೆಸಿ ರೂ. 142 ಕೋಟಿ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲಾಗಿದ್ದು, ಇದನ್ನು ಸರ್ಕಾರಕ್ಕೆ
ಕಳುಹಿಸಿಕೊಡಲಾಗಿದೆ. ಇದಕ್ಕೆ ಮಂಜೂರಾತಿ ನೀಡುವಂತೆ ಮನವಿ ಮಾಡಿಕೊಳ್ಳಲಾಗಿದೆ ಎಂದರು.
ಅತ್ಯಾಧುನಿಕ ಕಸಾಯಿ ಖಾನೆ ನಿರ್ಮಾಣಕ್ಕೆ 22 ಕೋಟಿ ರೂಪಾಯಿ, ಎಲ್ ಇ ಡಿ ಬೀದಿದೀಪಕ್ಕೆ 8 ಕೋಟಿ ರೂಪಾಯಿ, ರಿಂಗ್ ರಸ್ತೆ ನಿರ್ಮಾಣಕ್ಕೆ 120 ಕೋಟಿ ರೂಪಾಯಿ ಮತ್ತು 32 ಕೋಟಿ ರೂಪಾಯಿ ಎಸ್ ಎಫ್ ಸಿ ಅನುದಾನ ಮಂಜೂರು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರ ಮನವೊಲಿಸುವ ಪ್ರಯತ್ನ ಮಾಡಲಾಗಿದೆ. ಇದಕ್ಕೆ ಹಣ ಬಿಡುಗಡೆ ಮಾಡುವ ವಿಶ್ವಾಸ ಇದೆ ಎಂದು ಚಮನ್ ಸಾಬ್ ತಿಳಿಸಿದರು.
ಗೋಷ್ಠಿಯಲ್ಲಿ ಉಪಮೇಯರ್ ಸೋಗಿ ಶಾಂತಕುಮಾರ್, ಪಾಲಿಕೆಯ ಆಡಳಿತ ಪಕ್ಷದ ಸದಸ್ಯರಾದ ಜಿ. ಎಸ್. ಮಂಜುನಾಥ್ ಗಡಿಗುಡಾಳ್, ನಾಗರಾಜ್ ಮತ್ತಿತರರು ಹಾಜರಿದ್ದರು.