SUDDIKSHANA KANNADA NEWS/ DAVANAGERE/ DATE:20-02-2024
ದಾವಣಗೆರೆ: ರಾಜ್ಯದಲ್ಲಿ ಸಂಭವಿಸಿದ ಭೀಕರ ಬರಗಾಲ ಮತ್ತು ಬೇಸಿಗೆ ಪೂರ್ವದಲ್ಲಿ ಅಂತರ್ಜಲ ಮಟ್ಟ ಕುಸಿತದಿಂದ ರೈತರು ಕಂಗಾಲಾಗಿದ್ದು, ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ರೈತರ ಸಾಲಮನ್ನಾ ಮಾಡಬೇಕೆಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯಿಸಿದರು.
ವಿಧಾನಸಭೆ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲೆ ಸಭಾಪತಿಗಳು ಮಾತನಾಡಲು ಅವಕಾಶ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಪ್ರಸ್ತುತ ರೈತರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ ಶಾಸಕ ಬಸವಂತಪ್ಪ, ಈ ಹಿಂದೆ
ಮನಮೋಹನ್ ಸಿಂಗ್ ಪ್ರಧಾನಿ ಆಗಿದ್ದ ಸಂದರ್ಭದಲ್ಲಿ 72 ಸಾವಿರ ಕೋಟಿ ರೂಪಾಯಿ ರೈತರ ಸಾಲಮನ್ನಾ ಮಾಡಿದ್ದರು. ರಾಜ್ಯದಲ್ಲಿ ಈ ಬಾರಿ ಮಳೆ ಇಲ್ಲದೆ ಬರ ಎದುರಿಸಿದೆ. ಅಲ್ಲದೇ ಬೇಸಿಗೆ ಆರಂಭದಲ್ಲಿಯೇ
ಅಂತರ್ಜಲ ಮಟ್ಟ ಕುಸಿದು ಅಡಿಕೆ, ತೆಂಗು, ಬಾಳೆ ಬೆಳೆಗಾರರು, ಬೆಳೆ ಉಳಿಸಿಕೊಳ್ಳಲು ಭಗೀರಥ ಯತ್ನ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ರೈತರು ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಮಾಡಿರುವ ಸಾಲನ್ನಾ ಮಾಡಬೇಕು ಮತ್ತು ಬರ ಪರಿಹಾರದ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು.
ಈ ಬಗ್ಗೆ ರಾಜ್ಯದ ಸಂಸದರು, ವಿರೋಧ ಪಕ್ಷದ ನಾಯಕರು ಕೇಂದ್ರದ ಮೇಲೆ ಒತ್ತಡ ಹಾಕಿ ಸಾಲಮನ್ನಾ ಮಾಡಿಸಬೇಕೆಂದು ಸಲಹೆ ನೀಡಿದರು.
ಚುನಾವಣಾ ಪೂರ್ವದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದಾಗ ಇವರು ಈ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವುದಿಲ್ಲ ಎಂದಿದ್ದರು. ಸರ್ಕಾರ ಅಧಿಕಾರಕ್ಕೆ ಬಂದು ಈ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿ ಅನುಷ್ಠಾನಕ್ಕೆ ತಂದ ಮೇಲೆ ಈಗ ವಿಪಕ್ಷದವರು ಗ್ಯಾರಂಟಿ ಜಾರಿಗೆ ತಂದ ಮೇಲೆ ಆರ್ಥಿಕತೆ ದಿವಾಳಿಯಾಗಿದೆ ಎಂದು ಹೇಳಿ ರೈತರನ್ನು ಮತ್ತು ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಿತ್ತಿದ್ದಾರೆ ಎಂದರು.
ಈ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣ ಆ ಸಮುದಸಯಕ್ಕೆ ಸೇರಬೇಕೆಂಬ ಉದ್ದೇಶದಿಂದ ಈ ದೇಶದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಸರ್ಕಾರ
ವಿಶೇಷ ಕಾಯ್ದೆ ಜಾರಿಗೆ ತಂದಿತ್ತು. ಅದರಂತೆ ಆ ಸಮುದಾಯಕ್ಕೆ ಹಣ ಸಂದಾಯವಾಗುತ್ತಿದೆ. ಸ್ವಲ್ಪ ಐದಾರು ಪರ್ಸೆಂಟ್ ವ್ಯತ್ಯಾಸ ಆಗಿರಬಹುದು. ಮುಂದಿನ ದಿನಗಳಲ್ಲಿ ಮೀಸಲಿಟ್ಟ ಹಣ ಸಂಪೂರ್ಣವಾಗಿ
ವಿನಿಯೋಗವಾಗಲಿದೆ ಎಂದು ತಿಳಿಸಿದರು.
ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ ಮನೆಗೊಂದು ನಲ್ಲಿ ಅಳವಡಿಸಲಾಗಿದೆ. ಆದರೆ ಆ ನಲ್ಲಿಗಳಲ್ಲಿ ಬರುವ ನೀರು ಹಿಡಿಯಲು ಮಹಿಳೆಯರು ಕೂಲಿನಾಲಿ ಬಿಟ್ಟು ಇಡೀ ದಿವಸ ನಿಲ್ಲುವ
ಪರಿಸ್ಥಿತಿ ಬಂದಿದೆ. ಯಾವುದೇ ಯೋಜನೆಗಳನ್ನು ಅನುಷ್ಠಾನಕ್ಕೆ ತಂದ ಮೇಲೆ ಜನರಿಗೆ ಉಪಯೋಗ ಆಗಬೇಕು. ಅದರಿಂದ ಇನ್ನಷ್ಟು ಸಮಸ್ಯೆಗಳು ಆಗಬಾರದು ಎಂದು ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರು ಕುಡಿಯುವ ನೀರಿಗೆ ಪರಿತಪಿಸುವುದನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.