SUDDIKSHANA KANNADA NEWS/ DAVANAGERE/ DATE:08-02-2024
ದಾವಣಗೆರೆ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ರಾಜ್ಯದ ಜನರು ಬೇಸತ್ತಿದ್ದಾರೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ವಿನಾ ಕಾರಣ ಕೇಂದ್ರ ಸರ್ಕಾರದ ಮೇಲೆ ಬೊಟ್ಟು ತೋರಿಸುವ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಅಪ್ರಸ್ತುತ ಎಂಬುದನ್ನು ಜನರು ತೋರಿಸಲಿದ್ದಾರೆ. ಲೋಕಸಭೆಯ 28 ಕ್ಷೇತ್ರಗಳಲ್ಲಿಯೂ ಗೆಲ್ಲಬೇಕೆಂಬ ಪಣ ತೊಟ್ಟಿದ್ದೇವೆ. ನೀವೆಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಿ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕರೆ ನೀಡಿದರು.
ನಗರದ ಹದಡಿ ರಸ್ತೆಯಲ್ಲಿರುವ ಶಾಮನೂರು ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು,
ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ದುರಾಡಳಿತ ಹೆಚ್ಚಾಗಿದೆ. ರಾಜ್ಯದ ಜನರು ಪಶ್ಚಾತ್ತಾಪಡುವ ರೀತಿಯಲ್ಲಿ ಅಧಿಕಾರ ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರದ ಮೇಲೆ ವಿನಾಕಾರಣ ಬೊಟ್ಟು ಮಾಡುವ, ಆರೋಪ ಮಾಡುವ ಕಾಂಗ್ರೆಸ್ ಸುಳ್ಳುಗಳಿಂದ ಜನರು ಗೊಂದಲಕ್ಕೆ ಈಡಾಗಿದ್ದಾರೆ. ಕೇಂದ್ರ ಸರ್ಕಾರವು ರಾಜ್ಯಕ್ಕೆ ಎಲ್ಲಾ ರೀತಿಯ ಅನುದಾನ, ಬರಬೇಕಿರುವ ತೆರಿಗೆ ಸೇರಿದಂತೆ ಸಂಪೂರ್ಣ ಸಹಕಾರ ನೀಡಿದೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಆರೋಪಕ್ಕೆ ತಲೆಕೆಡಿಸಿಕೊಳ್ಳಬೇಡಿ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.
ದೇಶ ವಿಭಜನೆ ಬಗ್ಗೆ ಮಾತನಾಡುವ ಹಾಗೂ ಒಕ್ಕೂಟ ವ್ಯವಸ್ಥೆ ಪ್ರಶ್ನಿಸುವ ಕಾಂಗ್ರೆಸ್ ನಾಯಕರಿಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜನರೇ ತಕ್ಕ ಪಾಠ ಕಲಿಸಲಿದ್ದಾರೆ. ಕೇಂದ್ರದಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ಕಂಡು ಕೇಳಿರಿಯದಷ್ಟು ಅಭಿವೃದ್ಧಿಗಳಾಗಿವೆ. ಎಲ್ಲಾ ರಾಜ್ಯಗಳಿಗೂ ಅನುದಾನ ನೀಡಿದೆ. ಭ್ರಷ್ಟಾಚಾರ ಮುಕ್ತ ಆಡಳಿತವನ್ನು ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೀಡಿದೆ. ಜನಪ್ರಿಯ ಕಾರ್ಯಕ್ರಮಗಳನ್ನು ಘೋಷಿಸಿದೆ. ಮೋದಿ ಅವರ ಜನಪ್ರಿಯತೆ ಸಹಿಸದೇ ಕಾಂಗ್ರೆಸ್ ಸುಳ್ಳು ಹೇಳುತ್ತಿದೆ. ಇದಕ್ಕೆ ತಕ್ಕ ಉತ್ತರ ನೀಡೋಣ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವುದು ಎಲ್ಲರಿಗೂ ಗೊತ್ತಾಗಿದೆ ಎಂದು ಹೇಳಿದರು.
ವೇದಿಕೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ. ಎಸ್. ಈಶ್ವರಪ್ಪ, ಶಾಸಕ ಬಿ. ಪಿ. ಹರೀಶ್, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಎಂ. ಪಿ. ರೇಣುಕಾಚಾರ್ಯ, ವಿಧಾನ ಪರಿಷತ್ ಮಾಜಿ ಮುಖ್ಯಸಚೇತಕ ಶಿವಯೋಗಿಸ್ವಾಮಿ, ಮಾಜಿ ಶಾಸಕರಾದ ಪ್ರೊ. ಲಿಂಗಣ್ಣ, ಗುರುಸಿದ್ದನಗೌಡ, ಮಾಡಾಳ್ ವಿರೂಪಾಕ್ಷಪ್ಪ, ನೂತನ ಜಿಲ್ಲಾಧ್ಯಕ್ಷ ಎನ್. ರಾಜಶೇಖರ್, ನಿಕಟಪೂರ್ವ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ಶಿವಕುಮಾರ್, ಲೋಕಿಕೆರೆ ನಾಗರಾಜ್, ಅಜಯ್ ಕುಮಾರ್ ಮತ್ತಿತರರು ಹಾಜರಿದ್ದರು.