ಬೆಂಗಳೂರು: ರಾಜಧಾನಿ ಬೆಂಗಳೂರಿನ ರಾಜೇಶ್ವರಿ ನಗರದ ಹೆಗ್ಗನಹಳ್ಳಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸಿವಿಲ್ ಎಂಜಿನಿಯರ್ ಪತಿಯೋರ್ವ ತನ್ನ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ತಾನು ಆತ್ಮಹತ್ಯೆಗೆ ಶರಣಾಗಿದ್ದಾನೆ.
ದಕ್ಷಿಣ ಕನ್ನಡ ಮೂಲದ ಸಿವಿಲ್ ಎಂಜಿನಿಯರಿಂಗ್ ಪದವೀಧರ ಸುಮಂತ್ (32) ಹಾಗೂ ಹುಬ್ಬಳ್ಳಿ ಮೂಲದ ಟೆಕ್ಕಿ ಪದ್ಮಾವತಿ (29) ಮೃತಪಟ್ಟ ದಂಪತಿ. ಇವರಿಬ್ಬರೂ ಕಳೆದ ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದು, ಪ್ರಸ್ತುತ ಹೆಗ್ಗನಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಘಟನೆಯ ವಿವರ:
ದಂಪತಿ ನಡುವೆ ತೀವ್ರ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಸುಮಂತ್ ಪತ್ನಿ ಪದ್ಮಾವತಿ ಮೇಲೆ ಹಲ್ಲೆ ನಡೆಸಿ, ದಿಂಬಿನಿಂದ ಮುಖ ಒತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಪದ್ಮಾವತಿ ಉಸಿರಾಟ ನಿಂತಿರುವುದನ್ನು ಗಮನಿಸಿದ ಸುಮಂತ್, ತಕ್ಷಣವೇ ತನ್ನ ತಾಯಿಗೆ ಕರೆ ಮಾಡಿ ನಡೆದ ವಿಷಯ ತಿಳಿಸಿದ್ದಾನೆ. ನಂತರ “ನಾನೂ ಸಾಯುತ್ತಿದ್ದೇನೆ” ಎಂದು ತಾಯಿಗೆ ಮೆಸೇಜ್ ಕಳುಹಿಸಿ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾನೆ.
ತಾಯಿಯು ತಕ್ಷಣ ಮನೆಮಾಲೀಕರಿಗೆ ಮಾಹಿತಿ ನೀಡಿದ್ದು, ಸ್ಥಳೀಯರು ಹಾಗೂ ಮಾಲೀಕರು ಬಂದು ನೋಡಿದಾಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ಸುದ್ದಿ ತಿಳಿದ ರಾಜಗೋಪಾಲನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.





Leave a comment