ಉತ್ತರ ಕನ್ನಡ (ಭಟ್ಕಳ): ಇಲ್ಲಿನ ತಾಲಾಂದ್ನಿಂದ ಆರಂಭವಾದ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಇಸ್ಮಾಯಿಲ್ ಸುನ್ನಿ ಜಾಮಿಯಾ ಮಸೀದಿ ಹಾಗೂ ತಾಜುಸ್ ಸುನ್ನಃ ಅರೇಬಿಕ್ ಮದರಸಾ ಕಟ್ಟಡದ ಮೇಲೆ ಅಜ್ಞಾತ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿದ ಘಟನೆ ಬುಧವಾರ ರಾತ್ರಿ ನಡೆದಿದೆ. ಕಲ್ಲು ತೂರಾಟದಿಂದಾಗಿ ಮಸೀದಿ ಹಾಗೂ ಮದರಸಾದ ಕಿಟಕಿ ಗಾಜುಗಳು ಹಾನಿಗೊಳಗಾಗಿವೆ.
ಈ ಘಟನೆಯಿಂದಾಗಿ ಸ್ಥಳೀಯವಾಗಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಅಬ್ದುಲ್ ಆಲಿಮ್ ಹಾಗೂ ಶಹಾಬುಲ್ ಅಮೀನ್ ಗವಾಯಿ ನೀಡಿ ದೂರಿನನ್ವಯ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲ್ಲು ತೂರಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದ ನೂರಾರು ಜನರು ಪೊಲೀಸ್ ಠಾಣೆಯ ಎದುರು ಧರಣಿ ನಡೆಸಿದರು.
ಘಟನಾ ಸ್ಥಳಕ್ಕೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ದೀಪನ್ ಎಂ.ಎನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕರು ಶಾಂತಿ ಕಾಪಾಡುವಂತೆ ಮತ್ತು ತನಿಖೆಗೆ ಸಹಕರಿಸುವಂತೆ ಮನವಿ ಮಾಡಿದ ಎಸ್ಪಿ, “ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಭರವಸೆ ನೀಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.





Leave a comment