ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸಾಮಾಜಿಕ ನ್ಯಾಯದಲ್ಲಿ ಬಿಜೆಪಿ- ಆರ್ ಎಸ್ ಎಸ್ ಗೆ ನಂಬಿಕೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

On: May 2, 2025 1:53 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-02-05-2025

ಬೆಂಗಳೂರು: ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಅವರಿಗೆ ಬದ್ಧತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಅವರು ಇಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ತೂಬಿನಕೆರೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು.

ನೂರು ವರ್ಷಗಳ ಇತಿಹಾಸ ನೋಡಿದರೆ ಅವರು ಯಾವಾಗಲೂ ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತಲೇ ಬಂದವರು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಮಿಲ್ಲರ್ ಆಯೋಗದಿಂದ ಹಿಡಿದು ಇಂದಿನವರೆಗೆ ವಿರೋಧ ಮಾಡುತ್ತಲೇ ಬಂದಿದ್ದಾರೆ. ಆರ್.ಎಸ್.ಎಸ್. 1925 ರಂದು ಪ್ರಾರಂಭವಾಗಿದ್ದು 2025 ಕ್ಕೆ ನೂರು ವರ್ಷಗಳಾಗುತ್ತಿದೆ.ಅವರು ಮೀಸಲಾತಿಯನ್ನು ಎಂದೂ ಒಪ್ಪಿಲ್ಲ ಎಂದರು.

ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆಗಬೇಕು:

ರಾಹುಲ್ ಗಾಂಧಿಯವರು ಎರಡು ವರ್ಷಗಳಿಂದ ಈ ಬಗ್ಗೆ ಬಹಳ ಗಂಭೀರವಾಗಿ ಒತ್ತಾಯ ಮಾಡುತ್ತಿದ್ದರು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಕೂಡ ಇದನ್ನು ಸೇರಿಸಲು ಅವರೇ ಕಾರಣಕರ್ತರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿಯವರಿಗೆ ಪತ್ರವನ್ನೂ ಬರೆದಿದ್ದರು. ಈ ಎಲ್ಲರ ಹೋರಾಟ ಮತ್ತು ಒತ್ತಡದ ನಂತರ ಜಾತಿಗಣತಿ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಆದರೆ ಯಾವಾಗ ಎಂದು ಸಮಯ ನಿಗದಿ ಮಾಡಿಲ್ಲ. ಜನಗಣತಿಯಲ್ಲಿಯೇ ಜಾತಿ ಗಣತಿಯನ್ನು ಮಾಡುವುದಾಗಿ ಹೇಳಿದ್ದಾರೆ. ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆಗಬೇಕು. ಸಂವಿಧಾನಕ್ಕೆ ತಿದ್ದುಪಡಿ ತಂದು ಮೀಸಲಾತಿಯ ಗರಿಷ್ಠ ಪರಿಮಿತಿಯನ್ನು ಹೆಚ್ಚು ಮಾಡಬೇಕು ಎಂದು ಒತ್ತಾಯಿಸಿದರು.

ಸರ್ವೋಚ್ಚ ನ್ಯಾಯಾಲಯದ ವಿಭಾಗೀಯ ಪೀಠವು ಶೇ.50% ಗಿಂತ ಹೆಚ್ಚಬಾರದು ಎಂದು ಹೇಳಿದೆ. ಮೀಸಲಾತಿ 50% ಆದರೆ, ಜನಸಂಖ್ಯೆಯ ಅನುಗುಣವಾಗಿ ಮೀಸಲಾತಿ ನೀಡಬೇಕು ಎಂದರು.

ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕೊಡಬೇಕಾಗಿರುವುದು ಅತ್ಯಂತ ಅನಿವಾರ್ಯ ಮತ್ತು ಅಗತ್ಯ. ಸಮ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಆರ್ಥಿಕವಾಗಿ ಸಾಮಾಜಿಕವಾಗಿ ಸಬಲರಾಗಬೇಕು. ಆಗ ಮಾತ್ರ ಜಾತಿಯನ್ನು ಹೋಗಲಾಡಿಸಲು ಸಾಧ್ಯವಾಗುತ್ತದೆ ಎಂದರು.

ಮೀಸಲಾತಿಯಲ್ಲಿ ಶೇ.50 ರಷ್ಟು ಗರಿಷ್ಠ ಪರಿಮಿತಿಯನ್ನು ತೆಗೆಯಬೇಕು, ಖಾಸಗಿ ಕ್ಷೇತ್ರದಲ್ಲಿಯೂ ಮೀಸಲಾತಿಯನ್ನು ತರಬೇಕೆಂದು ಪ್ರಧಾನಿಗಳನ್ನು ಒತ್ತಾಯಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಸಮೀಕ್ಷೆಯ ಸಮಯವನ್ನು ನಿಗದಿ ಮಾಡಬೇಕು. ನ್ಯಾಯಮೂರ್ತಿ ರೋಹಿಣಿ ಸಮಿತಿಯ ಶಿಫಾರಸುಗಳನ್ನೂ ಜಾರಿಗೊಳಿಸುವ ಜೊತೆಗೆ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನೂ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment