Home ದಾವಣಗೆರೆ ನೀಟ್ ಹಗರಣ ಮುಚ್ಚಿಹಾಕಲು ಬಿಜೆಪಿ ನಾಟಕ; ಬೆಂಗಳೂರು ಟ್ರಾಫಿಕ್ ನೆಪವೊಡ್ಡಿ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವುದು ರಾಜಕೀಯ ದಿವಾಳಿತನ: ಬಿ.ಕೆ. ಹರಿಪ್ರಸಾದ್ ಆಕ್ರೋಶ!
ದಾವಣಗೆರೆಕ್ರೈಂ ನ್ಯೂಸ್ನವದೆಹಲಿಬೆಂಗಳೂರು

ನೀಟ್ ಹಗರಣ ಮುಚ್ಚಿಹಾಕಲು ಬಿಜೆಪಿ ನಾಟಕ; ಬೆಂಗಳೂರು ಟ್ರಾಫಿಕ್ ನೆಪವೊಡ್ಡಿ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವುದು ರಾಜಕೀಯ ದಿವಾಳಿತನ: ಬಿ.ಕೆ. ಹರಿಪ್ರಸಾದ್ ಆಕ್ರೋಶ!

Share
ಬೆಂಗಳೂರು
Share

ಬೆಂಗಳೂರು: ಅರಮನೆ ಮೈದಾನದಲ್ಲಿ ನಡೆದ ಕಾಂಗ್ರೆಸ್‌ನ ಸಂಕಲ್ಪ ಸಮಾವೇಶದ ಜನದಟ್ಟಣೆಯಿಂದಾಗಿ ಬೆಂಗಳೂರಿನಲ್ಲಿ ಉಂಟಾದ ಸಣ್ಣಪುಟ್ಟ ಟ್ರಾಫಿಕ್ ಸಮಸ್ಯೆ ಮತ್ತು ಅದರಿಂದ ನೀಟ್ ಪರೀಕ್ಷೆಗೆ ಹಾಜರಾಗಲು ತೊಂದರೆಯಾದ ಎರಡು-ಮೂರು ವಿದ್ಯಾರ್ಥಿಗಳಿಗೆ ಕೆಪಿಸಿಸಿ ಅಧ್ಯಕ್ಷ ಬಿ. ಕೆ. ಹರಿಪ್ರಸಾದ್ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷೆಯಿಂದ ಹೊರಗುಳಿದ ವಿದ್ಯಾರ್ಥಿಗಳಿಗೆ ಸಾಂತ್ವನ ಹೇಳಿ, ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಕಾಂಗ್ರೆಸ್ ತಂಡ ಶ್ರಮಿಸಲಿದೆ ಎಂದು ಭರವಸೆ ನೀಡಿದರು.

ಲಕ್ಷಾಂತರ ಜನರು ಭಾಗವಹಿಸುವ ಮುನ್ಸೂಚನೆ ಇದ್ದ ಹಿನ್ನೆಲೆಯಲ್ಲಿ ಗೃಹ ಇಲಾಖೆ ಎರಡು ದಿನ ಮುಂಚಿತವಾಗಿಯೇ ಅಧಿಕೃತ ಬದಲಿ ರಸ್ತೆಗಳ ಪ್ರಕಟಣೆ ಹೊರಡಿಸಿತ್ತು. ಆದಾಗ್ಯೂ ನಿರೀಕ್ಷೆ ಮೀರಿ ಜನಸಾಗರ ಹರಿದುಬಂದಿದ್ದರಿಂದ ಸಣ್ಣಪುಟ್ಟ ಲೋಪಗಳು ಉಂಟಾಗಿರಬಹುದು ಎಂದು ಅವರು ಸ್ಪಷ್ಟಪಡಿಸಿದರು.

ಬಿಜೆಪಿ ವಿರುದ್ಧ ವಾಗ್ದಾಳಿ:

ಇದೇ ವೇಳೆ ಟ್ರಾಫಿಕ್ ಸಮಸ್ಯೆಯನ್ನೇ ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ಹರಿಪ್ರಸಾದ್ ತೀವ್ರ ಆಕ್ರೋಶ ಹೊರಹಾಕಿದರು. “ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಿಂದ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅನಿಶ್ಚಿತತೆಯಲ್ಲಿದೆ. ಮಾನಸಿಕ ಒತ್ತಡ ತಾಳಲಾರದೆ ದೇಶಾದ್ಯಂತ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳು ಪತ್ರ ಬರೆದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ಗಂಭೀರ ಪರಿಸ್ಥಿತಿಗೆ ಕಾರಣ ಯಾರು ಎಂಬ ಪ್ರಶ್ನೆಗೆ ಉತ್ತರ ನೀಡಲು ಬಿಜೆಪಿಗೆ ಧೈರ್ಯವಿಲ್ಲ” ಎಂದು ಕಿಡಿಕಾರಿದರು.

ರಾಜ್ಯಾದ್ಯಂತ ಗೈರುಹಾಜರಿ – ಕಾಂಗ್ರೆಸ್ ಪ್ರಶ್ನೆ:

ಬೆಂಗಳೂರಿನ ಕಾರ್ಯಕ್ರಮದಿಂದಲೇ ವಿದ್ಯಾರ್ಥಿಗಳು ಪರೀಕ್ಷೆಗೆ ಬರಲಿಲ್ಲ ಎನ್ನುವ ಬಿಜೆಪಿ ವಾದವನ್ನು ತಳ್ಳಿಹಾಕಿದ ಅವರು, ರಾಜ್ಯದ ಇತರ ಜಿಲ್ಲೆಗಳ ಅಂಕಿ-ಅಂಶಗಳನ್ನು ಮುಂದಿಟ್ಟರು. ಮೈಸೂರಿನಲ್ಲಿ 1,847, ಯಾದಗಿರಿಯಲ್ಲಿ 286 ಹಾಗೂ ದಕ್ಷಿಣ ಕನ್ನಡದಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಗೈರಾಗಿದ್ದಾರೆ. ಹಾಗಾದರೆ ಈ ಎಲ್ಲ ಜಿಲ್ಲೆಗಳಲ್ಲೂ ಕಾಂಗ್ರೆಸ್ ಸಮಾವೇಶ ನಡೆದಿತ್ತೇ? ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ತಲುಪಿದ್ದು, ಕಾಂಗ್ರೆಸ್ ಮೇಲೆ ಬೆರಳು ತೋರಿಸುವುದು ಬಿಜೆಪಿಯ ಹಳೆಯ ಚಾಳಿಯಾಗಿದೆ ಎಂದು ಅವರು ಟೀಕಿಸಿದರು.

ವಿದ್ಯಾರ್ಥಿಗಳ ಬದುಕಿನೊಂದಿಗೆ ಆಟವಾಡಿ ಈಗ ನೀತಿ ಪಾಠ ಹೇಳಲು ಹೊರಟಿರುವ ಕೇಂದ್ರ ಶಿಕ್ಷಣ ಸಚಿವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಮತ್ತು ಬಿಜೆಪಿ ದೇಶದ ಕ್ಷಮೆ ಕೇಳಬೇಕು ಎಂದು ಹರಿಪ್ರಸಾದ್ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಮಾಜಿ ಸಚಿವ ಹೆಚ್. ಆಂಜನೇಯ, ಹಾಗೂ ಮಾಜಿ ಎಂಎಲ್ಸಿ ನಾರಾಯಣಸ್ವಾಮಿ ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *