SUDDIKSHANA KANNADA NEWS/ DAVANAGERE/ DATE:23-11-2023
ಬೆಂಗಳೂರು: ಲೋಕಸಭೆ ಚುನಾವಣೆ ಹತ್ತಿರ ಬರುತ್ತಿರುವುದರಿಂದ ರಾಜಕೀಯ ಲಾಭ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಗಣತಿ ವಿಷಯ ಪ್ರಸ್ತಾಪ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರ ನೂತನ ಕಚೇರಿ ಉದ್ಘಾಟನೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿಯ ವಿಚಾರದಲ್ಲಿ ಸಿದ್ದರಾಮಯ್ಯನವರು ಮೊದಲಿನಿಂದಲೂ ಗೊಂದಲದ ಗೂಡು ಮಾಡಿದ್ದಾರೆ ಎಂದು ಆರೋಪಿಸಿದರು.
ಆರಂಭದಲ್ಲಿ ಜಾತಿಗಣತಿ ಅಂದರು, ಆಮೇಲೆ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ವರದಿ ಅಂದರು. ಸರ್ಕಾರಿ ಆದೇಶದಲ್ಲಿ ಸಾಮಾಜಿಕ ಶೈಕ್ಷಣಿಕ ವರದಿ ಅಂತ ಬರೆದಿದ್ದಾರೆ ಎಂದರು.
ಹಿಂದುಳಿದ ವರ್ಗಗಳ ಆಯೋಗ ಮಾಡಿರುವುದು ಸರಿಯಾಗಿ ಸಮೀಕ್ಷೆ ಆಗಿಲ್ಲ, ಸದಸ್ಯರು, ಅಧ್ಯಕ್ಷರಿಗೆ ಸಾಮ್ಯತೆ ಇರಲಿಲ್ಲ, ರಾಜಕೀಯ ಹಸ್ತಕ್ಷೇಪ ಇತ್ತು, ಇಷ್ಟೆಲ್ಲ ನಡೆದಿದ್ದರೂ ಸಿಎಂ ಸಿದ್ದರಾಮಯ್ಯ ಅವರು ಸುಮ್ಮನಿದ್ದರು. ಆಗ ವರದಿ ಪಡೆದಿಲ್ಲ. ಈಗ ಚುನಾವಣೆ ಬರುತ್ತಿದೆ ಎಂದು ರಾಜಕೀಯ ಲಾಭ ಪಡೆಯುವ ಕೆಲಸ ಮಾಡುತ್ತಿದ್ದಾರೆ. ಸ್ಪಷ್ಟ ವರದಿ ಬಂದ ಮೇಲೆ ನಮ್ಮ ತೀರ್ಮಾನ ತಿಳಿಸುತ್ತೇವೆ ಎಂದು ಹೇಳಿದರು.