ದಾವಣಗೆರೆ: ಬಿಜೆಪಿ ಕಾರ್ಯಕರ್ತರಲ್ಲಿ ಗೆಲುವಿನ ರಣೋತ್ಸಾಹ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
ಇಂದು ಸಂಜೆ ಇಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿಯೊಂದು ಬೂತಿನಲ್ಲಿ ನಮ್ಮ ಅಭ್ಯರ್ಥಿ ಪರವಾಗಿ ಪರಿಸ್ಥಿತಿ- ವಾತಾವರಣ ಹೇಗಿದೆ ಎಂಬುದನ್ನು ತಿಳಿಯುವ ಪ್ರಯತ್ನ ಮಾಡುತ್ತಿದ್ದೇವೆ. ನಮ್ಮ ಬೂತಿನ ಪ್ರಮುಖರ ಆತ್ಮವಿಶ್ವಾಸ ನೋಡಿದರೆ, ಅತಿ ಹೆಚ್ಚು ಲೀಡ್ ಪಡೆಯುವ ಮಾತನಾಡುತ್ತಿದ್ದಾರೆ. ಅಂಕಿ ಸಂಖ್ಯೆ ಸಹಿತ ವರದಿ ನೀಡಿದ್ದಾರೆ. ಅವರ ವರದಿ ನೋಡಿದಾಗ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಐತಿಹಾಸಿಕ ಗೆಲುವನ್ನು ಬಿಜೆಪಿ ಅಭ್ಯರ್ಥಿಯದು ಆಗಲಿದೆ ಎಂಬ ವಿಶ್ವಾಸ ನನಗಿದೆ ಎಂದರು.
ಪ್ರಶ್ನೆಗೆ ಉತ್ತರಿಸಿದ ಅವರು, ಅಲ್ಪಸಂಖ್ಯಾತರು, ಹಿಂದೂಗಳು ಸೇರಿ ಮತದಾರರು ಕಾಂಗ್ರೆಸ್ಸಿನ ವಿರುದ್ಧ ಆಕ್ರೋಶಿತರಾಗಿದ್ದಾರೆ. ಯಾರಿಗೂ ಕಾಂಗ್ರೆಸ್ ಪರ ಮತಯಾಚನೆ ಮಾಡುವ ಧೈರ್ಯ ಬರಲು ಸಾಧ್ಯವಿಲ್ಲ ಎಂದು ನುಡಿದರು. ನಮ್ಮ ಕಾರ್ಯಕರ್ತರು, ಮುಖಂಡರು 15-20 ದಿನಗಳಿಂದ ನಮ್ಮ ಅಭ್ಯರ್ಥಿ ಪರ ಕೆಲಸ ಮಾಡುತ್ತಿದ್ದಾರೆ. ಎಚ್.ಡಿ.ಕುಮಾರಸ್ವಾಮಿಯವರು ಬಂದು ಬೆಂಬಲ ನೀಡಿದ್ದಾರೆ. ಬಿಜೆಪಿ ಗೆಲುವು ಖಚಿತ ಎಂದು ತಿಳಿಸಿದರು.
ಸಾಮಾನ್ಯವಾಗಿ ಆಡಳಿತ ಪಕ್ಷದ ಪರವಾಗಿ ಮತದಾರರ ಒಲವಿರುತ್ತದೆ. ಎರಡೂ ಕಡೆಗಳಲ್ಲಿ ಆಡಳಿತ ಪಕ್ಷದ ವಿರೋಧಿ ಅಲೆ ಇದೆ. ಮತದಾರರು ಕಾಂಗ್ರೆಸ್ಸಿನ ವಿರುದ್ಧ ದಂಗೆ ಎದ್ದಿದ್ದೇಕೆ ಎಂದು ಸಿದ್ದರಾಮಯ್ಯ, ಡಾ. ಪರಮೇಶ್ವರ್, ಎಂ.ಬಿ.ಪಾಟೀಲರು ವಿಶ್ಲೇಷಿಸಬೇಕಿದೆ. ಮುಖ್ಯಮಂತ್ರಿಗಳಾದಿಯಾಗಿ ಸಚಿವಸಂಪುಟವೇ ವಿಧಾನಸೌಧದ ಮೂರನೇ ಮಹಡಿಯನ್ನು ಮರೆತು ಬಂದು ಕೂತಿದ್ದಾರೆಂದರೆ ಎಷ್ಟು ಹತಾಶರಾಗಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ತಿಳಿಸಿದರು.
ವೈದ್ಯಕೀಯ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ್ದನ್ನು ನೋಡಿದರೆ ಕಾಂಗ್ರೆಸ್ಸಿನ ಹತಾಶೆ ಸ್ಪಷ್ಟಗೊಂಡಿದೆ. ಪರಮೇಶ್ವರ್ ಆದಿಯಾಗಿ ಜಗತ್ತಿನ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ವಾಸ್ತವಿಕತೆಯನ್ನು ಮರೆತಿದ್ದಾರೆ ಎಂದು ಹೇಳಿದರು.





Leave a comment