ಚನ್ನಗಿರಿ: ತಾಲ್ಲೂಕಿನ ಹಿರೇವುಡಾ ಗ್ರಾಮದ ಬಳಿ ಸಾರ್ವಜನಿಕ ರಸ್ತೆಯಲ್ಲಿ ಮಹಿಳೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಸರವನ್ನು ದೋಚಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಚನ್ನಗಿರಿ ಠಾಣೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತರಿಂದ ₹5,30,000 ಮೌಲ್ಯದ 45 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ವಶಪಡಿಸಿಕೊಳ್ಳಲಾಗಿದೆ.
ಚಿತ್ರದುರ್ಗ ಮೂಲದ ಆರೋಪಿಗಳ ಬಂಧನ: ಬಂಧಿತ ಆರೋಪಿಗಳನ್ನು ಚಿತ್ರದುರ್ಗ ಜಿಲ್ಲೆಯ ಸುನೀಲ್ ನಾಯ್ಕ @ ರಾಖಾ (26), ದಿನೇಶ ನಾಯ್ಕ @ ಧನು (24) ಹಾಗೂ ಪ್ರಸ್ತುತ ಚನ್ನಗಿರಿ ತಾಲೂಕಿನಲ್ಲಿ ವಾಸವಾಗಿದ್ದ ಸುನೀಲ್ ನಾಯ್ಕ (32) ಎಂದು ಗುರುತಿಸಲಾಗಿದೆ. ಬಂಧಿತ ಮೂವರೂ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಘಟನೆಯ ವಿವರ:
ಕಳೆದ ಆಗಸ್ಟ್ 18ರಂದು ಹಿರೇವುಡಾ ಗ್ರಾಮದ ನಿವಾಸಿ ಲತಾ (50) ಅವರು ಚನ್ನಗಿರಿಯಿಂದ ತಮ್ಮ ಗ್ರಾಮಕ್ಕೆ ಬೈಕ್ನಲ್ಲಿ ತೆರಳುತ್ತಿದ್ದರು. ಅಕಳೀಕಟ್ಟೆ ಗ್ರಾಮದ ಕುರಿ ಶಿವಣ್ಣ ತೋಟದ ಬಳಿ ತಲುಪಿದಾಗ, ಹಿಂಬದಿಯಿಂದ ಬೈಕ್ನಲ್ಲಿ ಬಂದ ಆರೋಪಿಗಳು ಅವರ ಕುತ್ತಿಗೆಯಲ್ಲಿದ್ದ 45 ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರವನ್ನು ಕವರ್ ಮಾಡಿಕೊಂಡು, ಬೈಕ್ ನಿಲ್ಲಿಸದೆ ಪರಾರಿಯಾಗಿದ್ದರು. ಈ ಕುರಿತು ಸಂತ್ರಸ್ತೆ ನೀಡಿದ ದೂರಿನನ್ವಯ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ (ಗುನ್ನೆ ನಂ. 489/2026, ಕಲಂ 309(4) BNS ಅಡಿಯಲ್ಲಿ) ಪ್ರಕರಣ ದಾಖಲಾಗಿತ್ತು.
ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸ್ ಪಡೆ:
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕ ಶೇಖರ್ ಹೆಚ್.ಟಿ. ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ ಅವರ ಮಾರ್ಗದರ್ಶನದಲ್ಲಿ, ಚನ್ನಗಿರಿ ಡಿವೈಎಸ್ಪಿ ರುದ್ರಪ್ಪ ಎಸ್. ಉಜ್ಜನಕೊಪ್ಪ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ರವೀಶ್ ಕೆ.ಎನ್. ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ತನಿಖೆ ಚುರುಕುಗೊಳಿಸಿದ ತಂಡವು ಆರೋಪಿಗಳನ್ನು ಪತ್ತೆ ಹಚ್ಚಿ, ಅವರಿಂದ ಸಂಪೂರ್ಣ ಮಾಲನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ.
ಪ್ರಕರಣವನ್ನು ಕ್ಷಿಪ್ರವಾಗಿ ಭೇದಿಸಿದ ತನಿಖಾ ತಂಡದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕಾರ್ಯವೈಖರಿಯನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.





Leave a comment