SUDDIKSHANA KANNADA NEWS/ DAVANAGERE/ DATE-29-04-2025
ದಾವಣಗೆರೆ ದಾವಣಗೆರೆ ಜಿಲ್ಲೆಯು ಅಭಿವೃದ್ಧಿ ಹೊಂದಿದ ಪ್ರದೇಶವಾಗಿ ಹೊರ ಹೊಮ್ಮಿದೆ. ಆದರೆ 0.78 ಸೂಚ್ಯಂಕದೊಂದಿಗೆ ಚನ್ನಗಿರಿ ಅತ್ಯಂತ ಹಿಂದುಳಿದ ತಾಲ್ಲೂಕಾಗಿದೆ. ಜಗಳೂರು ಮತ್ತು ಹೊನ್ನಾಳಿ ಅನುಕ್ರಮವಾಗಿ 0.80 ಮತ್ತು 0.86 ಸೂಚ್ಯಂಕದೊಂದಿಗೆ ಅತೀ ಹಿಂದುಳಿದ ತಾಲ್ಲೂಕು ಪ್ರದೇಶಗಳಾಗಿವೆ ಎಂದು ಪ್ರಾದೇಶಿಕ ಅಸಮತೋಲನಾ ನಿವಾರಣಾ ಆಯೋಗದ ಅಧ್ಯಕ್ಷರು ಹಾಗೂ ಆರ್ಥಿಕ ತಜ್ಞರಾದ ಪ್ರೊ. ಎಂ.ಗೋವಿಂದರಾವ್
ಅಭಿಪ್ರಾಯಪಟ್ಟರು.
ಜಿಲ್ಲಾ ಪಂಚಾಯಿತಿ ಎಸ್. ಎಸ್. ಮಲ್ಲಿಕಾರ್ಜುನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ರಾಜ್ಯದ 175 ತಾಲ್ಲೂಕುಗಳನ್ನು ಅಧ್ಯಯನ ಮಾಡಿ ಡಾ. ಡಿ.ಎಂ. ನಂಜುಂಡಪ್ಪ ಅವರು 39 ಅತ್ಯಂತ ಹಿಂದುಳಿದ ತಾಲ್ಲೂಕುಗಳು, 40 ಅತಿ ಹಿಂದುಳಿದ ತಾಲ್ಲೂಕುಗಳು ಹಾಗೂ 35 ಹಿಂದುಳಿದ ತಾಲ್ಲೂಕುಗಳು ಎಂದು ಹಿಂದುಳಿದಿರುವಿಕೆಯನ್ನು ಗುರುತಿಸಿದ್ದರು. ಇದರಲ್ಲಿ ಉತ್ತರ ಕರ್ನಾಟಕ ಭಾಗದ 26 ಅತ್ಯಂತ ಹಿಂದುಳಿದ ತಾಲ್ಲೂಕುಗಳಾಗಿದ್ದರೆ, ದಕ್ಷಿಣ ಕರ್ನಾಟಕದ 13 ತಾಲ್ಲೂಕುಗಳು ಇದ್ದವು ಎಂದರು.
ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ದಾವಣಗೆರೆ ಜಿಲ್ಲೆಗೆ ಶಿಫಾರಸ್ಸಿನ ಅನ್ವಯ, ಸರ್ಕಾರ 2007-08 ರಿಂದ 2023-24 ರವರೆಗೆ 821 ಕೋಟಿ ರೂ. ಗಳ ಹಂಚಿಕೆ ಮಾಡಿ ಇದರಲ್ಲಿ ರೂ. 698 ಕೋಟಿ ಅಭಿವೃದ್ದಿಗೆ ಬಿಡುಗಡೆಯಾಗಿದ್ದು, ಈ ಪೈಕಿ 640 ಕೋಟಿ ರೂ. ಖರ್ಚಾಗಿದೆ.
ರಾಜ್ಯದಲ್ಲಿ ಪ್ರಸ್ತುತ 240 ತಾಲ್ಲೂಕುಗಳಿವೆ, ಇಷ್ಟೊಂದು ಹಣ ಖರ್ಚು ಮಾಡಿದ ಬಳಿಕ, ತಾಲ್ಲೂಕುಗಳ ಹಿಂದುಳಿದಿರುವಿಕೆ ಕಡಿಮೆ ಆಗಿದೆಯೇ, ಯಾವೆಲ್ಲಾ ಕ್ಷೇತ್ರದಲ್ಲಿ ಏನೇನು ಅಭಿವೃದ್ಧಿಯಾಗಿದೆ. ಹಣ ನೀಡಿದರೂ ಅಭಿವೃದ್ಧಿ ಆಗಲಿಲ್ಲವೆಂದರೆ ಅದಕ್ಕೆ ಕಾರಣಗಳೇನು, ಎಂಬುದನ್ನು ಕೂಲಂಕಷವಾಗಿ ಪರಿಶೀಲಿಸಿ, ರಾಜ್ಯದಲ್ಲಿನ ಅಸಮತೋಲನ ಸರಿಪಡಿಸಿ, ಸಮಗ್ರ ಕರ್ನಾಟಕ ಅಭಿವೃದ್ಧಿಗೊಳ್ಳಲು ಏನೆಲ್ಲ ಕ್ರಮ ವಹಿಸಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗ ರಚಿಸಿದೆ ಎಂದು ತಿಳಿಸಿದರು.
ಆಯೋಗ ಮಾರ್ಚ್-2024ರಲ್ಲಿ ರಚಿಸಲಾಗಿದ್ದರೂ, ಸೆಪ್ಟೆಂಬರ್-2024 ರಿಂದ ಪೂರ್ಣ ಪ್ರಮಾಣದಲ್ಲಿ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಕಾರ್ಯನಿರ್ವಹಿಸಲು ಪ್ರಾರಂಭಿಸಿತು. ರಾಜ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಮತ್ತು ಬೆಂಗಳೂರು ನಗರ ಜಿಲ್ಲೆಗಳು ಮಾತ್ರ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ದಿಯ ವೇಗ ಹೊಂದಿದ್ದು, ಉಳಿದ ಜಿಲ್ಲೆಗಳಲ್ಲಿ ಅಭಿವೃದ್ಧಿ ವೇಗ ಪಡೆದಿಲ್ಲ. ಮೂಲಭೂತ ಸೌಕರ್ಯ, ವಿದ್ಯುತ್, ರಸ್ತೆ, ಹಣಕಾಸು, ಶಿಕ್ಷಕರು ಮತ್ತು ವಿದ್ಯಾರ್ಥಿ ಅನುಪಾತ, ಸಾಕ್ಷರತೆ, ವೈದ್ಯಕೀಯ ವ್ಯವಸ್ಥೆ, ಕೈಗಾರಿಕೆ, ನೀರಾವರಿ, ಕೃಷಿ, ಸೇವಾ ವಲಯ ಮುಂತಾದ 32 ಸೂಚ್ಯಂಕಗಳನ್ನು
ಆಧರಿಸಿ ಆಯೋಗ ವರದಿ ಸಂಗ್ರಹಿಸಲಿದೆ. ಆಯೋಗ ಪ್ರತಿ ಜಿಲ್ಲೆಗೆ ಭೇಟಿ ನೀಡಿ, ಅಲ್ಲಿನ ಜನರ ಅನುಭವ, ಅಭಿಪ್ರಾಯ ಪಡೆದು, ಸಂಗ್ರಹಿಸಿದ ಮಾಹಿತಿ, ಅಧ್ಯಯನದ ವರದಿಗಳ ಆಧಾರದಲ್ಲಿ ಅಸಮತೋಲನ ನಿವಾರಣೆ ಹಾಗೂ ಸಮಗ್ರ ಕರ್ನಾಟಕದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಶಿಫಾರಸ್ಸುಗಳ ವರದಿಯನ್ನು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದರು.