ಬೆಂಗಳೂರು: ಕರ್ನಾಟಕದ ಕ್ರಿಶ್ಚಿಯನ್ ಸಮುದಾಯದ ಉನ್ನತ ಮಟ್ಟದ ನಿಯೋಗವೊಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿಯಾಗಿ ಪ್ರಮುಖ ಬೇಡಿಕೆಗಳನ್ನೊಳಗೊಂಡ ಮನವಿ ಪತ್ರವನ್ನು ಸಲ್ಲಿಸಿದೆ.
ಬೆಂಗಳೂರು ಆರ್ಚ್ಬಿಷಪ್ ಡಾ. ಪೀಟರ್ ಮಚಾಡೊ ಅವರ ನೇತೃತ್ವದಲ್ಲಿ ತೆರಳಿದ್ದ ನಾಯಕರ ತಂಡವು, ರಾಜ್ಯದಲ್ಲಿ 2021ರಲ್ಲಿ ಜಾರಿಗೆ ತರಲಾದ ‘ಕರ್ನಾಟಕ ಧರ್ಮ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ’ (ಮತಾಂತರ ನಿಷೇಧ ಕಾಯ್ದೆ) ಯನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ಒತ್ತಾಯಿಸಿತು. ಈ ಕಾಯ್ದೆಯು ನಾಗರಿಕರ ಸಾಂವಿಧಾನಿಕ ಹಕ್ಕುಗಳಿಗೆ ಧಕ್ಕೆ ತರುತ್ತಿದೆ ಎಂದು ನಿಯೋಗ ಕಳವಳ ವ್ಯಕ್ತಪಡಿಸಿದೆ.
ಪ್ರಮುಖ ಬೇಡಿಕೆಗಳು:
ಮತಾಂತರ ಕಾಯ್ದೆ ರದ್ದು: 2021ರ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯಲು ರಾಜ್ಯ ಸರ್ಕಾರಕ್ಕೆ ಸೂಚಿಸಬೇಕು.
%1 ಪ್ರತ್ಯೇಕ ಮೀಸಲಾತಿ: ಹಿಂದುಳಿದ ವರ್ಗಗಳ ವರ್ಗೀಕರಣದ ಅಡಿಯಲ್ಲಿ ಕ್ರಿಶ್ಚಿಯನ್ ಸಮುದಾಯಕ್ಕೆ %1 ಪ್ರತ್ಯೇಕ ಮೀಸಲಾತಿ ಕಲ್ಪಿಸಬೇಕು.
ರಾಜಕೀಯ ಪ್ರಾತಿನಿಧ್ಯ: ವಿಧಾನ ಪರಿಷತ್ತಿಗೆ ಸಮುದಾಯದ ನಾಯಕರೊಬ್ಬರನ್ನು ನಾಮನಿರ್ದೇಶನ ಮಾಡಬೇಕು ಹಾಗೂ ವಿವಿಧ ಸರ್ಕಾರಿ ಮಂಡಳಿ, ನಿಗಮಗಳಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು.
ನಿಯೋಗದ ಕುಂದುಕೊರತೆಗಳನ್ನು ಆಲಿಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಈ ವಿಷಯಗಳನ್ನು ಕರ್ನಾಟಕ ರಾಜ್ಯ ಸರ್ಕಾರದ ನಾಯಕರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಂಗಳೂರು ಬಿಷಪ್ ಡಾ. ಪೀಟರ್ ಪಾಲ್, ಮೈಸೂರು ಬಿಷಪ್ ಡಾ. ಫ್ರಾನ್ಸಿಸ್ ಸೆರಾವೊ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.





Leave a comment