ದಾವಣಗೆರೆ: ದಾವಣಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪೂರ್ವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಯ ಗೊಂದಲ ನಿವಾರಿಸುವಂತೆ ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಘಟಕದ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಘಟಕವು ಡಿಸಿ ಜಿ. ಎಂ. ಗಂಗಾಧರ ಸ್ವಾಮಿ ಮತ್ತು ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಅವರಿಗೆ ಮನವಿ ಸಲ್ಲಿಸಿತು.
ಮನವಿ ಸಲ್ಲಿಸುವ ವೇಳೆ ಮಾತನಾಡಿದ ಸೈಯದ್ ಖಾಲಿದ್ ಅಹ್ಮದ್ ಅವರು, ಪೂರ್ವ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಜನಸಾಮಾನ್ಯರಿಗೆ ತೊಂದರೆ ಆಗುತ್ತಿದೆ ಎಂಬ ಮಾಹಿತಿ ಸಿಕ್ಕಿದೆ. ಕೆಲ ಲೋಪದೋಷಗಳು ಇದ್ದು, ಕೂಡಲೇ ಸರಿಪಡಿಸಬೇಕು ಎಂದು ಒತ್ತಾಯಿಸಿದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ಎದುರಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಿಸಲಾಗುತ್ತದೆ. ಈ ವೇಳೆ ಕೆಲವೆಡೆ ಗೊಂದಲ ಉಂಟಾಗಿದೆ. ಜನಸಾಮಾನ್ಯರು ಮೃತಪಟ್ಟವರ ಹೆಸರು ತೆಗೆದು ಹಾಕಲು, ಹೊಸಬರ ಹೆಸರು ಸೇರ್ಪಡೆ ಮಾಡಲು ಸಮಸ್ಯೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಗೆ ಆದಷ್ಟು ಬೇಗ ಪರಿಹಾರ ಒದಗಿಸಬೇಕು. ಜನಸಾಮಾನ್ಯರಿಗೆ ಆಗುತ್ತಿರುವ ಸಮಸ್ಯೆಗಳನ್ನು ನಿವಾರಿಸಿ, ಸುಗಮ ಪ್ರಕ್ರಿಯೆ ನಡೆಸಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಅವರು ಇನ್ನು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಾರಂಭವಾಗಿಲ್ಲ. ಪೂರ್ವ ಮತದಾರರ ಪಟ್ಟಿ ಪರಿಷ್ಕರಿಸಲಾಗುತ್ತಿದೆ. ಯಾವುದೇ ಗಾಬರಿಯಾಗುವ ಅವಶ್ಯಕತೆ ಇಲ್ಲ. ಪಾರದರ್ಶಕವಾಗಿ ನಡೆಸಲಾಗುತ್ತದೆ ಎಂದು ಭರವಸೆ ನೀಡಿದರು.
ಪ್ರೀ ಎಸ್ಐಆರ್ ಪ್ರಕ್ರಿಯೆಯ ಸುಗಮ ಕಾರ್ಯಾಚರಣೆ ಹಾಗೂ ಎಸ್ಐಆರ್ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು ಡಿಸಿ ಮತ್ತು ಎಆರ್ಒ ಅವರನ್ನು ಭೇಟಿ ಯುವ ಘಟಕದ ಮುಖಂಡರು ಮನವಿ ಮಾಡಿದರು. ಈ ಸಂಬಂಧ ಜಿಲ್ಲಾಧಿಕಾರಿ ಅವರು ಸಭೆ ನಡೆಸಿ ಜನರಲ್ಲಿ ಜಾಗೃತಿ ಮೂಡಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಫಜ್ಲೂರ್ ರಹಮಾನ್, ಡಾ. ಸಯ್ಯದ್ ಜಿಲಾನಿ, ಬಾಷಾ, ಝಕೀರ್, ಮಷ್ತಾಕ್, ಕಾಶಿಫ್ ಮತ್ತಿತರರು ಹಾಜರಿದ್ದರು.





Leave a comment