SUDDIKSHANA KANNADA NEWS/ DAVANAGERE/ DATE-05-05-2025
ದಾವಣಗೆರೆ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಖಚಿತ ಎಂದು ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಘೋಷಿಸಿದ್ದಾರೆ.
ನಗರದ ಪೂಜಾ ಇಂಟರ್ ನ್ಯಾಷನಲ್ ಹೊಟೇಲ್ ನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದಾದರೂ ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದು ಖಚಿತ ಎಂದು ತಿಳಿಸಿದರು.
ರಾಷ್ಟ್ರೀಯ ಪಕ್ಷಗಳು ಟಿಕೆಟ್ ಕೊಟ್ಟರೆ ಸರಿ. ಇಲ್ಲದಿದ್ದರೆ ಪಕ್ಷೇತರನಾಗಿಯಾದರೂ ಕಣಕ್ಕಿಳಿಯಲು ಸಿದ್ಧನಿದ್ದೇನೆ. ದಾವಣಗೆರೆ ಉತ್ತರ, ಹೊನ್ನಾಳಿ, ಹರಿಹರ, ಹರಪನಹಳ್ಳಿ ಕ್ಷೇತ್ರದಲ್ಲಿಯೂ ಸ್ಪರ್ಧೆ ಮಾಡಬೇಕೆಂಬ ಒತ್ತಡ ಇದೆ. ಈ ನಿಟ್ಟಿನಲ್ಲಿ ಆಲೋಚನೆ ಮಾಡುತ್ತಿದ್ದೇನೆ. ಚುನಾವಣೆ ಹತ್ತಿರ ಬಂದಾಗ ಸರ್ವೆ ಮಾಡಿಸಿ ಎಲ್ಲಿ ಗೆಲ್ಲುವ ಸಾಧ್ಯತೆ ಹೆಚ್ಚಿದೆಯೋ ಆ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಎಂದು ಘೋಷಿಸಿದರು.