Home ಕ್ರೈಂ ನ್ಯೂಸ್ KPSC 400 ವೈದ್ಯಾಧಿಕಾರಿ ನೇಮಕಾತಿ ಅಕ್ರಮ: ದಾವಣಗೆರೆಯ ಅಭ್ಯರ್ಥಿ ಮನೆ ಮೇಲೆ ಇಡಿ ದಿಢೀರ್ ದಾಳಿ! ಸಿಕ್ಕಿದ್ದೇನು?
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

KPSC 400 ವೈದ್ಯಾಧಿಕಾರಿ ನೇಮಕಾತಿ ಅಕ್ರಮ: ದಾವಣಗೆರೆಯ ಅಭ್ಯರ್ಥಿ ಮನೆ ಮೇಲೆ ಇಡಿ ದಿಢೀರ್ ದಾಳಿ! ಸಿಕ್ಕಿದ್ದೇನು?

Share
ದಾವಣಗೆರೆ
Share

ದಾವಣಗೆರೆ: ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ್ದ 400 ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪದ ತನಿಖೆ ಈಗ ಮತ್ತಷ್ಟು ಚುರುಕುಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಇಂದು ದಾವಣಗೆರೆ ನಗರದಲ್ಲಿ ದಿಢೀರ್ ದಾಳಿ ನಡೆಸಿದ್ದಾರೆ.

ಬೆಂಗಳೂರು ವಲಯದ ಇಡಿ ಅಧಿಕಾರಿಗಳ ತಂಡವು ದಾವಣಗೆರೆ ನಗರದ ಎಂಸಿಸಿ ‘ಬಿ’ ಬ್ಲಾಕ್‌ನಲ್ಲಿರುವ ನಂದೀಶ್ ಎಂಬ ಅಭ್ಯರ್ಥಿಯ ನಿವಾಸದ ಮೇಲೆ ದಾಳಿ ನಡೆಸಿದ್ದು, ತೀವ್ರ ವಿಚಾರಣೆ ನಡೆಸಿದೆ. ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದ್ದು, ಅಧಿಕಾರಿಗಳು ಸತತ ಆರು ಗಂಟೆಗೂ ಹೆಚ್ಚು ಕಾಲ ಸುದೀರ್ಘವಾಗಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

70 ರಿಂದ 80 ಲಕ್ಷ ರೂ. ಲಂಚದ ಆರೋಪ:

ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪ್ರತಿ ಹುದ್ದೆಗೆ 70 ರಿಂದ 80 ಲಕ್ಷ ರೂಪಾಯಿಗಳವರೆಗೆ ಬೃಹತ್ ಪ್ರಮಾಣದ ಲಂಚ ಪಡೆದಿರುವ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ಅಕ್ರಮಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಈಗಾಗಲೇ ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಹಗರಣದ ಗಂಭೀರತೆ ಪರಿಗಣಿಸಿ ಸರ್ಕಾರವು ಈಗಾಗಲೇ ಅಂದಿನ ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದೆ.

ಪ್ರಕರಣದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ನಡೆದಿರುವ ಶಂಕೆ ಇರುವುದರಿಂದ, ಇಡಿ ಅಧಿಕಾರಿಗಳು ದಾವಣಗೆರೆ ಸೇರಿದಂತೆ ರಾಜ್ಯದಾದ್ಯಂತ ಒಟ್ಟು 21 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *