ದಾವಣಗೆರೆ: ಭಾರತ ಮಾತೆಯ ರಕ್ಷಣೆಗಾಗಿ ತಮ್ಮ ಪ್ರಾಣವನ್ನು ಅರ್ಪಿಸಿದ ವೀರ ಯೋಧರ ಶೌರ್ಯ, ತ್ಯಾಗ ಮತ್ತು ದೇಶಭಕ್ತಿಯನ್ನು ಸ್ಮರಿಸುವ ಉದ್ದೇಶದಿಂದ ಕಾರ್ಗಿಲ್ ವಿಜಯ ದಿವಸ್ ಅನ್ನು ಸಿದ್ಧಗಂಗಾ ಲೋಕಲ್ ಅಸೋಸಿಯೇಷನ್, ದಾವಣಗೆರೆ ವತಿಯಿಂದ ಅತ್ಯಂತ ಗೌರವ ಹಾಗೂ ಶ್ರದ್ಧೆಯಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸ್ಕೌಟ್ ಮಾಸ್ಟರ್ ಮಹೇಶ್ ಎಂ.ಸಿ. ಅವರು ಕಾರ್ಗಿಲ್ ಯುದ್ಧದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ತಿಳಿಸಿದರು.
1999ರಲ್ಲಿ ಪಾಕಿಸ್ತಾನದ ನುಸುಳುಕೋರರು ಕಾರ್ಗಿಲ್ ಪ್ರದೇಶದ ಎತ್ತರದ ಪರ್ವತ ಶಿಖರಗಳನ್ನು ಅಕ್ರಮವಾಗಿ ಆಕ್ರಮಿಸಿಕೊಂಡ ಸಂದರ್ಭದಲ್ಲಿ ಭಾರತೀಯ ಸೇನೆಯು “ಆಪರೇಷನ್ ವಿಜಯ್” ನಡೆಸಿ ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿಯೂ ಧೈರ್ಯ, ಶೌರ್ಯ ಮತ್ತು ದೇಶಪ್ರೇಮದಿಂದ ಹೋರಾಡಿ ಶತ್ರುಗಳನ್ನು ಹಿಮ್ಮೆಟ್ಟಿಸಿ ವಿಜಯ ಸಾಧಿಸಿತು ಎಂದು ವಿವರಿಸಿದರು.
ಭಾರತೀಯ ಯೋಧರು ಹಿಮಾಚ್ಛಾದಿತ ಪರ್ವತ ಪ್ರದೇಶಗಳಲ್ಲಿ ತೀವ್ರ ಚಳಿ, ಕಡಿಮೆ ಆಮ್ಲಜನಕ ಮತ್ತು ನಿರಂತರ ಶತ್ರುಗಳ ಗುಂಡಿನ ದಾಳಿಯನ್ನು ಲೆಕ್ಕಿಸದೆ ದೇಶದ ಗಡಿಯನ್ನು ರಕ್ಷಿಸಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡಿದರು. ಅನೇಕ ವೀರ ಯೋಧರು ತಮ್ಮ ಅಮೂಲ್ಯ ಜೀವವನ್ನು ದೇಶಕ್ಕಾಗಿ ಅರ್ಪಿಸಿದರು. ಅವರ ಈ ತ್ಯಾಗದಿಂದಲೇ ಇಂದು ನಾವು ಸುರಕ್ಷಿತವಾಗಿ ಬದುಕುತ್ತಿದ್ದೇವೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಈ ಸಂಧರ್ಭದಲ್ಲಿ ಸ್ಥಳೀಯ ಸಂಸ್ಥೆಯ ಸ್ಕೌಟ್ ಮಾಸ್ಟರ್ ನಿಂಗರಾಜು, ತಬಸುಮ್ ಬಾನು , ನೀಲಮ್ಮ ತಲವಾಡ ಇವರು ಉಪಸ್ಥಿತರಿದ್ದು ಮಕ್ಕಳಿಗೆ ರಾಷ್ಟ್ರಧ್ವಜ ಮತ್ತು ಸಶಸ್ತ್ರ ಪಡೆಗಳಿಗೆ ಸದಾ ಗೌರವ ನೀಡಬೇಕು ಹಾಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸ್ಪೂರ್ತಿ ತುಂಬಿದರು.





Leave a comment