ದಾವಣಗೆರೆ: “ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಫಲಿತಾಂಶ ಪ್ರಕಟವಾಗುವ ಮೊದಲೇ ಬಿಜೆಪಿ ಗೆದ್ದಿರುವುದು ಖಚಿತವಾಗಿದೆ. ಇದನ್ನು ಕಾಂಗ್ರೆಸ್ ಮುಖಂಡರೇ ತಮ್ಮ ಪತ್ರಿಕಾಗೋಷ್ಟಿ, ಹೈಕಮಾಂಡ್ಗೆ ದೂರು ಹಾಗೂ ರಾಜೀನಾಮೆಗಳ ಮೂಲಕ ಪರೋಕ್ಷವಾಗಿ ಒಪ್ಪಿಕೊಳ್ಳುತ್ತಿದ್ದಾರೆ,” ಎಂದು ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಉಪಚುನಾವಣೆಯು ಶೋಷಿತ ವರ್ಗಗಳ ಸ್ವಾಭಿಮಾನದ ಸಂಕೇತವಾಗಿದ್ದು, ಕ್ಷೇತ್ರದ ಮತದಾರರು ಕುಟುಂಬ ರಾಜಕಾರಣದ ವಿರುದ್ಧ ಮತ ಚಲಾಯಿಸಿದ್ದಾರೆ ಎಂದು ತಿಳಿಸಿದರು.
ಗ್ರಾಮೀಣ ಭಾಗದಲ್ಲಿ ಬಿಜೆಪಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು, ಶೋಷಿತ ವರ್ಗದ ಪ್ರತಿನಿಧಿ ಶ್ರೀನಿವಾಸ ದಾಸಕರಿಯಪ್ಪ ಅವರ ಗೆಲುವು ರಾಜ್ಯ ರಾಜಕಾರಣದಲ್ಲಿ ಹೊಸ ಬದಲಾವಣೆಗೆ ನಾಂದಿ ಹಾಡಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಅಹಿಂದ ವರ್ಗಗಳನ್ನು ಕೇವಲ ಓಟ್ ಬ್ಯಾಂಕ್ ಎಂದು ಭಾವಿಸಿರುವ ಕಾಂಗ್ರೆಸ್ಗೆ ಈ ಫಲಿತಾಂಶವು ದೊಡ್ಡ ಪಾಠವಾಗಲಿದೆ. ಸ್ವಾಭಿಮಾನಿ ಬಳಗದ ಪಾದಯಾತ್ರೆ ಹಾಗೂ ಬಿಜೆಪಿ ಹಿರಿಯ ನಾಯಕರಾದ ಬಿ. ವೈ. ವಿಜಯೇಂದ್ರ, ಬಸವರಾಜ ಬೊಮ್ಮಾಯಿ,
ಆರ್. ಅಶೋಕ್ ಸೇರಿದಂತೆ ಹಲವು ಗಣ್ಯರ ಸಹಕಾರ ಈ ಯಶಸ್ಸಿಗೆ ಕಾರಣ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಭಾರತೀಯ ಜನತಾ ಪಕ್ಷ ಹಾಗೂ ಸ್ವಾಭಿಮಾನಿ ಬಳಗವು ಬೂತ್ ಮಟ್ಟದಲ್ಲಿ ಮತದಾನದ ನಂತರ ಸಂಗ್ರಹಿಸುವ ಮಾಹಿತಿಯ ಅಂಕಿ ಅಂಶಗಳ ಪ್ರಕಾರ, ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗಿದ್ದು, ಬಿಜೆಪಿ ಪಕ್ಷಕ್ಕೆ ಅತಿ ಹೆಚ್ಚು ಮತಗಳನ್ನು ಚಲಾಯಿಸಿರುವುದು ಕಂಡು ಬರುತ್ತಿದೆ. ಸ್ವಾಭಿಮಾನಿ ಬಳಗವು ಗ್ರಾಮೀಣ ಪ್ರದೇಶದಲ್ಲಿ ಬಿಜೆಪಿ ಪಕ್ಷದ ಪರವಾಗಿ “ಪಾದಯಾತ್ರೆಯ ಮೂಲಕ” ಜಾಗೃತಿ ಮೂಡಿಸುವ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ದಾವಣಗೆರೆ ಜಿಲ್ಲೆಯ ಮುಖಂಡರುಗಳು ನೀಡಿದ ಸಹಕಾರಕ್ಕೆ ಧನ್ಯವಾದಗಳನ್ನು ಈ ಮೂಲಕ ಸಲ್ಲಿಸುತ್ತಿದ್ದೇವೆ ಎಂದು ಜಿ. ಬಿ. ವಿನಯ್ ಕುಮಾರ್ ಹೇಳಿದರು.





Leave a comment