Home ದಾವಣಗೆರೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ: ಮತಗಟ್ಟೆಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ  
ದಾವಣಗೆರೆಬೆಂಗಳೂರು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ: ಮತಗಟ್ಟೆಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ  

Share
ದಾವಣಗೆರೆ
Share

ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನವು ಶಾಂತಿಯುತವಾಗಿ ಹಾಗೂ ಮುಕ್ತವಾಗಿ ನಡೆಯುವ ಹಿತದೃಷ್ಟಿಯಿಂದ, ಮತಗಟ್ಟೆಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಅವರು ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆಯ ಅವಧಿ: ಚುನಾವಣಾ ನಿಯಮಾವಳಿಯಂತೆ ಮತದಾನ ಮುಕ್ತಾಯವಾಗುವ 48 ಗಂಟೆಗಳ ಪೂರ್ವದಲ್ಲಿ ಈ ಆದೇಶ ಜಾರಿಗೆ ಬರಲಿದೆ. ಏಪ್ರಿಲ್‌ 7 ರ  ಸಂಜೆ 6-00 ಗಂಟೆಯಿಂದ ಆರಂಭವಾಗಿ ಏಪ್ರಿಲ್‌ 9 ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

ಪ್ರಮುಖ ನಿರ್ಬಂಧಗಳು:

ಗುಂಪುಗಾರಿಕೆ ನಿಷೇಧ: ಮತದಾನಕ್ಕೆ ಬರುವ ಮತದಾರರನ್ನು ಹೊರತುಪಡಿಸಿ, ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.

ಸಭೆಸಮಾರಂಭ:

ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷಗಳು ಮೆರವಣಿಗೆ, ಸಾರ್ವಜನಿಕ ಸಭೆ ಅಥವಾ  ಪ್ರತಿಭಟನೆಗಳನ್ನು ನಡೆಸುವಂತಿಲ್ಲ. ಪ್ರಚೋದನಾಕಾರಿ ಭಾಷಣ, ಘೋಷಣೆ ಕೂಗುವುದು ಹಾಗೂ ಸಾರ್ವಜನಿಕ ನೈತಿಕತೆಗೆ ಭಂಗ ತರುವ ಕೃತ್ಯಗಳನ್ನು ನಿಷೇಧಿಸಲಾಗಿದೆ.

ಮಾರಕಾಸ್ತ್ರಗಳ ತಡೆ:

ಸ್ಫೋಟಕ ವಸ್ತುಗಳು, ಶಸ್ತ್ರಗಳು, ಬಂದೂಕು, ದೊಣ್ಣೆ, ಕತ್ತಿ ಅಥವಾ ದೈಹಿಕ ಹಿಂಸೆ ನೀಡುವ ಯಾವುದೇ ವಸ್ತುಗಳನ್ನು ಒಯ್ಯುವುದು ಅಥವಾ ಶೇಖರಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಪ್ರಚಾರ ಚಟುವಟಿಕೆ:

ಮತಗಟ್ಟೆಗಳ 200 ಮೀಟರ್ ಪರಿಮಿತಿಯಲ್ಲಿ ಯಾವುದೇ ಪೋಸ್ಟರ್, ಬ್ಯಾನರ್ ಬಳಸುವುದು ಹಾಗೂ ಧ್ವನಿವರ್ಧಕಗಳ ಮೂಲಕ ಪ್ರಚಾರ ಮಾಡುವುದನ್ನು ನಿಷೇಧಿಸಲಾಗಿದೆ.

ಎಲೆಕ್ಟ್ರಾನಿಕ್ ಉಪಕರಣ:

ಮತಗಟ್ಟೆಯ ಒಳಗಡೆ ಮೊಬೈಲ್ ಫೋನ್, ಕಾರ್ಡ್‌ಲೆಸ್ ಫೋನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ ಸಾಧನಗಳನ್ನು ಕೊಂಡೊಯ್ಯಲು ಅವಕಾಶವಿರುವುದಿಲ್ಲ (ಚುನಾವಣಾ ಕರ್ತವ್ಯದಲ್ಲಿರುವ ಅನುಮತಿ ಪಡೆದ ಅಧಿಕಾರಿಗಳನ್ನು ಹೊರತುಪಡಿಸಿ).

ಹೊರಗಿನವರ ವಾಸ್ತವ್ಯ:

ಕ್ಷೇತ್ರದ ಮತದಾರರಲ್ಲದ ವ್ಯಕ್ತಿಗಳು ಕಲ್ಯಾಣ ಮಂಟಪ, ಹೋಟೆಲ್ ಅಥವಾ ಅತಿಥಿ ಗೃಹಗಳಲ್ಲಿ ವಾಸ್ತವ್ಯ ಹೂಡಿದ್ದರೆ, ಅವರನ್ನು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಕ್ರಮ ಕೈಗೊಳ್ಳಲಾಗುವುದು.

ಧ್ವನಿವರ್ಧಕ:

ಈ ಅವಧಿಯಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಪ್ರದರ್ಶನ-ದಹನ :

ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ/ಪ್ರತಿಮೆಗಳ ಪ್ರದರ್ಶನ ಅಥವಾ ದಹನ ಮಾಡುವುದನ್ನು ನಿರ್ಬಂಧಿಸಲಾಗಿದೆ.

ಕಾನೂನು ಕ್ರಮ:

ಈ ಆದೇಶವು ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ, 2023ರ ಕಲಂ 163ರ ಅನ್ವಯ ಜಾರಿಯಲ್ಲಿದ್ದು, ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಅವರು ಆದೇಶಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *