ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಖಾಡ ರಂಗೇರಿದ್ದು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಅವರು ಮಾರ್ಚ್ 23, ಸೋಮವಾರದಂದು ಬೃಹತ್ ಮೆರವಣಿಗೆಯ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ.
ಗಣ್ಯರ ಉಪಸ್ಥಿತಿ: ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದಾವಣಗೆರೆಗೆ ಆಗಮಿಸಲಿದ್ದಾರೆ. ಸುಮಾರು 25 ಸಾವಿರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಈ ಶಕ್ತಿ ಪ್ರದರ್ಶನದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಮೆರವಣಿಗೆಯ ಹಾದಿ:
ಬೆಳಿಗ್ಗೆ 10 ಗಂಟೆಗೆ ನಗರದೇವತೆ ದುರ್ಗಾಂಭಿದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಆರಂಭವಾಗಲಿದೆ. ನಂತರ ಶಿವಾಜಿ ಪುತ್ಥಳಿಗೆ ಮಾಲಾರ್ಪಣೆ ಹಾಗೂ ಹಜರತ್ ಖಡಕ್ ಷಾವಲಿ ದರ್ಗಾಕ್ಕೆ ಭೇಟಿ ನೀಡಲಾಗುವುದು. ಮೆರವಣಿಗೆಯು ಹಳೇಪೇಟೆ, ಹಗೇದಿಬ್ಬ ಸರ್ಕಲ್, ಗಾಂಧಿನಗರ, ಅಜಾದ್ ನಗರ, ಅಹಮ್ಮದ್ ನಗರ, ಚಾರಿ ಪೈಲ್ವಾನ್ ಸರ್ಕಲ್, ಹಾಸಬಾವಿ ಸರ್ಕಲ್, ಚಾಮರಾಜಪೇಟೆ ಮುಖ್ಯ ರಸ್ತೆ, ಮಂಡಿಪೇಟೆ ಮತ್ತು ರೈಲ್ವೇ ಅಂಡರ್ ಬ್ರಿಡ್ಜ್ ಮೂಲಕ ಸಾಗಿ ಮಹಾನಗರಪಾಲಿಕೆ ಕಛೇರಿಯನ್ನು ತಲುಪಲಿದೆ.
ಮಧ್ಯಾಹ್ನ 3 ಗಂಟೆಗೆ ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆ ಪೂರ್ಣಗೊಳ್ಳುವುದರೊಂದಿಗೆ ಮೆರವಣಿಗೆ ಮುಕ್ತಾಯಗೊಳ್ಳಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.





Leave a comment