ಬೆಳಗಾವಿ: ಮನೆ ಮನೆಗೆ ಪೊಲೀಸ್ ಹಾಗೂ ಅಕ್ಕ ಪಡೆ ಯೋಜನೆಗಳಿಂದ ಅಪರಾಧ ಸಂಖ್ಯೆಯಲ್ಲಿ ಇಳಿಕೆಯಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಅವರು, ಇಡೀ ದೇಶದಲ್ಲಿ ಮೊದಲ ಬಾರಿಗೆ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ನಡೆಸಿದ್ದು, ಭಾರೀ ಪ್ರಶಂಸೆ ವ್ಯಕ್ತವಾಗಿದೆ ಎಂದರು.
ಕರಾವಳಿ ಮುಂತಾದೆಡೆ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂಬ ವರದಿ ಬಂದ ಹಿನ್ನೆಲೆಯಲ್ಲಿ ವಿಶೇಷ ಕಾರ್ಯ ಪಡೆಯನ್ನು ನೇಮಿಸಿದ್ದೇವೆ. ಮನೆ ಮನೆಗೆ ಪೊಲೀಸ್ ಕಾರ್ಯಕ್ರಮವನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ನಮ್ಮ ರಾಜ್ಯದಲ್ಲಿ ನಾವು ಜಾರಿ ಮಾಡಿದ್ದು, 50 ಮನೆಗೆ ಒಂದು ಕ್ಲಸ್ಟರ್ನಂತೆ ಮಾಡಿ, ಪೊಲೀಸ್ ಕಾನ್ ಸ್ಟೇಬಲ್ ಅವರು ಮನೆ ಮನೆಗೆ ಭೇಟಿ ನೀಡಿ, ಆಯಾ ಮನೆಗಳಲ್ಲಿನ ಕುಟುಂಬಗಳಿಂದ ಸಮಸ್ಯೆಗಳ ಬಗ್ಗೆ ನಿಗದಿತ ಪ್ರಶ್ನೆಗಳನ್ನು ಕೇಳಿ ವಿವರ ಪಡೆದು, ಕ್ರಮ ವಹಿಸಿದ್ದಾರೆ. ಇದು ಜನರಿಂದಲೂ ಪ್ರಶಂಸೆಗೆ ಒಳಗಾಗಿದೆ ಎಂದು ತಿಳಿಸಿದರು.
ಇದರ ಜೊತೆಗೆ ಮಹಿಳೆಯರ ಸುರಕ್ಷತೆಗಾಗಿಯೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಅಕ್ಕ-ಪಡೆ ರಚಿಸಲಾಗುತ್ತಿದ್ದು, ಇದೂ ಕೂಡ ಮೆಚ್ಚುಗೆ ಪಡೆದುಕೊಂಡಿದೆ. ರಾಜ್ಯದಲ್ಲಿ ಇದರಿಂದ ಅಪರಾಧಗಳ ಸಂಖ್ಯೆ ಇಳಿಮುಖವಾಗುತ್ತಿದೆ. ವಿಶೇಷವಾಗಿ ಕರಾವಳಿ ಪ್ರದೇಶವನ್ನು ಸುರಕ್ಷಿತ ಪ್ರದೇಶವಾಗಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಹಲವು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.





Leave a comment