SUDDIKSHANA KANNADA NEWS/ DAVANAGERE/ DATE:13-02-2024
ದಾವಣಗೆರೆ: ಶ್ರೀ ಸಂತ ಸೇವಾಲಾಲ್ ಮಹಾರಾಜ್ ಅವರ 285ನೇ ಜಯಂತ್ಯೋತ್ಸವದ ಪ್ರಯುಕ್ತ ನ್ಯಾಮತಿ ಬಳಿಯ ಸೂರಗೊಂಡನಕೊಪ್ಪ ಬಳಿ ರಾಷ್ಟ್ರಮಟ್ಟದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಶ್ರೀ ಸೇವಾಲಾಲ್ ಅವರ ಭಕ್ತರು ರಾಜ್ಯದೆಲ್ಲೆಡೆಯಿಂದ ಅಪಾರ ಸಂಖ್ಯೆಯಲ್ಲಿ ಪಾದಯಾತ್ರೆ ಮೂಲಕ ಆಗಮಿಸುತ್ತಿದ್ದಾರೆ.
ಈ ಸಂದರ್ಭದಲ್ಲಿ ಭಕ್ತರ ಆರೋಗ್ಯ ಮತ್ತು ಸ್ವಾಸ್ಥ್ಯದ ಹಿತದೃಷ್ಟಿಯಿಂದ ಪ್ರೀತಿ ಆರೈಕೆ ಟ್ರಸ್ಟ್ ಮೂಲಕ ಉಚಿತ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಲಾಗಿದೆ.
ಸೋಮವಾರದಿಂದಲೂ ಸಾವಿರಾರು ಭಕ್ತರು ದೂರದೂರಿನಿಂದ ನಡಿಗೆಯಲ್ಲಿ ಬರುತ್ತಿದ್ದು, ಅಗತ್ಯವಿದ್ದವರಿಗೆ ಸೂಕ್ತ ಚಿಕಿತ್ಸೆ, ಔಷಧಿಗಳನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದು ಆರೈಕೆ ಆಸ್ಪತ್ರೆಯ ಮುಖ್ಯಸ್ಥ ಡಾ. ಟಿ. ಜಿ. ರವಿಕುಮಾರ್ ಅವರು ತಿಳಿಸಿದ್ದಾರೆ.
ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ಬಂಜಾರ ಸೇವಾಲಾಲ್ ಸಮಾಜದವರ ಆರೋಗ್ಯ ಸೇವೆ ಮಾಡಲು ಅವಕಾಶ ದೊರಕಿರುವುದಕ್ಕೆ ದಾವಣಗೆರೆಯ ಆರೈಕೆ ಆಸ್ಪತ್ರೆ ಸದಾ ಅಭಾರಿಯಾಗಿದೆ ಎಂದು ತಿಳಿಸಿದ್ದಾರೆ.
ಉದ್ಘಾಟನೆ: ಸಂತ ಸೇವಾಲಾಲ್ರವರ 285ನೇ ಜಯಂತ್ಸೋವವು ವಿಜೃಂಭಣೆಯಿಂದ ನೆರವೇರಲಿದ್ದು, ವಿವಿಧ ಕಟ್ಟಡಗಳ ಉದ್ಘಾಟನಾ ಕಾರ್ಯಕ್ರಮ ನಾಳೆ ನಡೆಯಲಿದೆ.ಫೆಬ್ರವರಿ.14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ಜರುಗಲಿದೆ.
ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ದಾವಣಗೆರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಹಣಾ ಪ್ರತಿಷ್ಠಾನ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಬೆಂಗಳೂರು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸುವರು.
ಹಾತಿರಾಂ ಬಾವಾಜಿ ಸಭಾಂಗಣವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸುವರು. ಸಮಿತಿಯ ನವೀಕೃತ ಆಡಳಿತ ಕಚೇರಿಯನ್ನು ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಉದ್ಘಾಟಿಸುವರು. ವಲಸೆ ಮಕ್ಕಳ ಶಂಕುಸ್ಥಾಪನೆಯನ್ನು ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಉದ್ಘಾಟಿಸುವರು. ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್ ಧರ್ಮಶಾಲಾ
ಕಟ್ಟಡ ಕಾಮಗಾರಿಯ ಮೊದಲ ಮಹಡಿ ಉದ್ಘಾಟಿಸುವರು. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕಟ್ಟಡವನ್ನು ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್ ಉದ್ಘಾಟಿಸುವರು.
ಸೇವಾಲಾಲ್ ಸರೋವರವನ್ನು ಮಹರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವ ಸಂಜಯ್ ಡಿ ರಾಥೋಡ್ ಉದ್ಘಾಟನೆ ನೆರವೇರಿಸಲಿದ್ದಾರೆ. ಹೊನ್ನಾಳಿ ಕ್ಷೇತ್ರದ ಶಾಸಕ ಡಿ. ಜಿ. ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ಘನ ಉಪಸ್ಥಿತರಾಗಿರುವರು. ಶಾಸಕ ಪ್ರಕಾಶ್.ಕೆ.ರಾಠೋಡ್ ಬಂಜಾರ ಭವನದ ನಿರ್ವಹಣಾ ಆಪ್ ಬಿಡುಗಡೆಗೊಳಿಸುವರು. ಮಾಜಿ ಸಚಿವರು ಹಾಗೂ ಉನ್ನತ ಮಟ್ಟದ ಸಲಹಾ ಸಮಿತಿ ಅಧ್ಯಕ್ಷ ಪಿ.ಟಿ.ಪರಮೇಶ್ವರನಾಯ್ಕ ಸೇವಾಲಾಲ್ ಉಪಹಾರ ದರ್ಶಿನಿ ಉದ್ಘಾಟಿಸುವರು. ಕರ್ನಾಟಕ ಹಾಲು ಮಹಾಮಂಡಳಿಯ ಅಧ್ಯಕ್ಷರಾದ ಎಸ್.ಬೀಮಾನಾಯ್ಕ ದಿವ್ಯಾಂಗಿಗಳು ಮತ್ತು ಹಿರಿಯ ನಾಗರೀಕರ ಸಹಾಯಕ್ಕೆ ವಿದ್ಯುತ್ ಚಾಲಿತ ವಾಹನ ಅರ್ಪಣೆ ಮಾಡುವರು.