SUDDIKSHANA KANNADA NEWS/ DAVANAGERE/ DATE:17-02-2025
ದಾವಣಗೆರೆ: ತಾಲೂಕಿನ ಕುರ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇತೊಗಲೇರಿ ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ಕಸ ವಿಲೇವಾರಿ ಘಟಕ ಬೇರೆಡೆ ಸ್ಥಳಾಂತರಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ, ಜಿಪಂ ಸಿಇಒ ಸುರೇಶ್ ಇಟ್ನಾಳ್ಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಸೋಮವಾರ ಕಸ ವಿಲೇವಾರಿ ಘಟಕ ಬೇರೆಡೆ ಸ್ಥಳಾಂತರ ಮಾಡಬೇಕು ಎಂದು ಒತ್ತಾಯಿಸಿ ಹಿರೇತೊಗಲೇರಿ ಗ್ರಾಮಸ್ಥರು ಧರಣಿ ಸತ್ಯಾಗ್ರಹ ನಡೆಸಿದ ವೇಳೆ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.
ಈ ವೇಳೆ ಗ್ರಾಮದ ಸಮೀಪ ಕಸ ವಿಲೇವಾರಿ ಘಟಕ ನಿರ್ಮಾಣ ಮಾಡುವುದರಿಂದ ಗ್ರಾಮದ ನೈರ್ಮಲ್ಯ ಹಾಳಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿರುತ್ತದೆೆ. ಅದರಿಂದ ಬರುವ ದುರ್ನಾತದಿಂದ ಗ್ರಾಮದ ಜನರು ರೋಗಗಳಿಗೆ ತುತ್ತಾಗಬೇಕಾಗುತ್ತದೆ. ಇದರಿಂದ ಇಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಸ ವಿಲೇವಾರಿ ಘಟಕವನ್ನು ಬೇರೆಡೆ ಸ್ಥಳಾಂತರ ಮಾಡಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದರು.
ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದ ಶಾಸಕ ಕೆ.ಎಸ್.ಬಸವಂತಪ್ಪ, ಗ್ರಾಮದ ಸಮೀಪ ನಿರ್ಮಿಸಲು ಉದ್ದೇಶಿಸಿರುವ ಕಸ ವಿಲೇವಾರಿ ಘಟಕವನ್ನು ಗ್ರಾಮದ ದೂರದ ಗುಡ್ಡದಲ್ಲಿ ನಿರ್ಮಿಸುವಂತೆ ಪ್ರತಿಭಟನಾ ಸ್ಥಳದಲ್ಲಿಯೇ ಇದ್ದ ಜಿಪಂ ಸಿಇಒ ಸುರೇಶ್ ಇಟ್ನಾಳ್ಗೆ ಸೂಚನೆ ನೀಡಿದರು.
ಹಿರೇತೊಗಲೇರಿ ಗ್ರಾಮದಲ್ಲಿ ಇತ್ತೀಚಿಗೆಷ್ಟೇ 2.48 ಕೋಟಿ ರೂ. ವೆಚ್ಚದಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗಿತ್ತು.